Home Blog Page 99

ರಕ್ತದಲ್ಲೇ ಸಹಿ ಹಾಕಿದ ಗದಗದ ಯುವಕರು: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಜೆನ್‌-ಝಡ್‌ ಪಡೆ

0

ವಿಜಯಸಾಕ್ಷಿ ಸುದ್ದಿ, ಗದಗ: ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಜೆನ್‌-ಝಡ್‌ ಯುವಕರ ಹೋರಾಟ ದೇಶದ ಗಮನ ಸೆಳೆದ ಬೆನ್ನಲ್ಲೇ, ಅದೇ ಮಾದರಿಯಲ್ಲಿ ಗದಗ ಜಿಲ್ಲೆಯ ಯುವಪಡೆಯೂ ಹೋರಾಟದ ಹಾದಿ ಹಿಡಿದಿದೆ. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು, ಗದಗ–ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸಬೇಕು ಹಾಗೂ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂಬ ಪ್ರಮುಖ ಬೇಡಿಕೆಗಳೊಂದಿಗೆ ‘ರಕ್ತ ಸಹಿ ಅಭಿಯಾನ’ ಆರಂಭವಾಗಿದೆ.

ಗದಗ–ಬೆಟಗೇರಿ ಅವಳಿ ನಗರದ ಜೆನ್‌-ಝಡ್‌ ಮತದಾರರು ಮತ್ತು ನಾಗರಿಕರ ವೇದಿಕೆ ನೇತೃತ್ವದಲ್ಲಿ ಆರಂಭವಾಗಿರುವ ಅಭಿಯಾನದಲ್ಲಿ 13 ಸಾವಿರಕ್ಕೂ ಹೆಚ್ಚು ಯುವಕರು ರಕ್ತದ ಮೂಲಕ ಸಹಿ ಹಾಕುವ ಗುರಿಯೊಂದಿಗೆ ಬೀದಿಗಿಳಿದಿದ್ದಾರೆ. ನಗರದ ಪ್ರತಿಯೊಂದು ವಾರ್ಡ್‌ಗೂ ತೆರಳಿ ಸಹಿ ಸಂಗ್ರಹಿಸಲಾಗುತ್ತಿದ್ದು, ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಜಿಲ್ಲೆಯ ಏಳು ತಾಲೂಕುಗಳಲ್ಲೂ ಬರದ ಛಾಯೆ ಆವರಿಸಿದೆ ಎಂಬುದು ಯುವಕರ ಆರೋಪ. ಕೃಷಿಯನ್ನೇ ಪ್ರಮುಖವಾಗಿ ಅವಲಂಬಿಸಿರುವ ಜಿಲ್ಲೆಯ ಜನರು ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿದ್ದರೂ ಗದಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿಗೆ ದಶಕಗಳ ಬೇಡಿಕೆ

ಗದಗ–ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದೆ. ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಪೂರೈಕೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಯುವಕರ ಪ್ರಮುಖ ಆಗ್ರಹವಾಗಿದೆ.

ಇದರ ಜತೆಗೆ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಕೈಗಾರಿಕೆಗಳ ಕೊರತೆಯಿಂದ ವಿದ್ಯಾವಂತ ಯುವಕರು ಉದ್ಯೋಗಕ್ಕಾಗಿ ಬೆಂಗಳೂರು, ಹುಬ್ಬಳ್ಳಿ–ಧಾರವಾಡ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಅಭಿಯಾನಕಾರರು ಒತ್ತಾಯಿಸಿದ್ದಾರೆ.

40 ಸಾವಿರ ರಕ್ತ ಸಹಿ ಸಂಗ್ರಹದ ಗುರಿ

ಯುವ ಮುಖಂಡ ಅನಿಲ್ ಮೆಣಸಿನಕಾಯಿ ಅವರ ಮಾರ್ಗದರ್ಶನದಲ್ಲಿ ಆರಂಭವಾಗಿರುವ ಅಭಿಯಾನದಲ್ಲಿ ಸ್ವಯಂಪ್ರೇರಿತರಾಗಿ ಜಿಲ್ಲೆಯಾದ್ಯಂತ ಒಟ್ಟು 40 ಸಾವಿರ ರಕ್ತ ಸಹಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಸಂಗ್ರಹಿಸಿದ ಸಹಿಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಬೇಡಿಕೆಗಳು ಈಡೇರದಿದ್ದರೆ ಹೋರಾಟ ತೀವ್ರ?

ಜಿಲ್ಲೆಯ ಸುಮಾರು ಶೇ.80ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದು, ಪ್ರಸಕ್ತ ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು. ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕು ಎಂಬುದು ಜೆನ್‌-ಝಡ್‌ ಯುವಪಡೆಯ ಆಗ್ರಹವಾಗಿದೆ.

ರಕ್ತದಲ್ಲಿ ಸಹಿ ಹಾಕಿ ಸರ್ಕಾರದ ಗಮನ ಸೆಳೆಯುತ್ತಿರುವ ಯುವಕರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತದೆಯೇ? ಇಲ್ಲವೇ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆಯೇ? ಎಂಬುದು ಇದೀಗ ಕುತೂಹಲ ಮೂಡಿಸಿದೆ.

“ಒಂದು ಕಡೆ ಬರದ ಸಂಕಷ್ಟ, ಮತ್ತೊಂದೆಡೆ ಉದ್ಯೋಗದ ಕೊರತೆ. ಯುವಕರು ವಲಸೆ ಹೋಗುವುದನ್ನು ತಪ್ಪಿಸಲು ಸರ್ಕಾರ ತಕ್ಷಣ ಸ್ಪಂದಿಸಬೇಕು. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ.”

— ಆನಂದ ಅಂಗಡಿ, ವಿದ್ಯಾರ್ಥಿ ಮುಖಂಡ

“ಗದಗದ ಅಭಿವೃದ್ಧಿಗಾಗಿ ನಡೆಯುತ್ತಿರುವ ರಕ್ತದ ಸಹಿ ಅಭಿಯಾನ ಉತ್ತಮ ನಿರ್ಧಾರ. ಗದಗ ಜನತೆಯ ಮೂಲಸೌಕರ್ಯಕ್ಕಾಗಿ ಹಲವು ಬಾರಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಜನತೆಯ ಹಕ್ಕುಗಳಿಗಾಗಿ ಜೆನ್‌-ಝಡ್‌ ಯುವಕರು ರಕ್ತದಲ್ಲಿ ಸಹಿ ಸಂಗ್ರಹಿಸುತ್ತಿರುವುದು ಕೊನೆಯ ಹೋರಾಟವಾಗಿದೆ.”

— ರಾಣಿ ಚಂದಾವರಿ, ಸಂಯುಕ್ತ ನೈತಿಕ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷರು

ಮೂಲಸೌಕರ್ಯ ವೈಫಲ್ಯಕ್ಕೆ ಗ್ರಾಮಸ್ಥರ ಆಕ್ರೋಶ: ಇಬ್ಬರು ಅಧಿಕಾರಿಗಳ ಬದಲಾವಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಸಮರ್ಪಕ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ನಡೆಸಿದ ಎರಡು ದಿನಗಳ ಪ್ರತಿಭಟನೆಗೆ ಸ್ಪಂದಿಸಿದ ತಾಲೂಕು ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶರಣು ಗೋಗೇರಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಪಿಡಿಒ ಅಮೀರನಾಯಕ ಅವರ ವರ್ಗಾವಣೆಗೆ ಕ್ರಮ ಕೈಗೊಂಡಿದ್ದಾರೆ.

ಅಸಮರ್ಪಕ ಕುಡಿಯುವ ನೀರು ಪೂರೈಕೆ, ಅವೈಜ್ಞಾನಿಕ ಜೆಜೆಎಂ ಕಾಮಗಾರಿ, ರಸ್ತೆಗಳ ಅಸ್ವಚ್ಛತೆ, ಬೀದಿ ದೀಪಗಳ ಸಮಸ್ಯೆ, ರಾಜಬೀದಿ ದುರಸ್ತಿ, ಸಿಬ್ಬಂದಿಗೆ ವೇತನ ಪಾವತಿಯಲ್ಲಿ ವಿಳಂಬ ಹಾಗೂ ಸಿಬ್ಬಂದಿಯ ಮೇಲೆ ಅಧಿಕಾರಿಗಳ ಹಿಡಿತವಿಲ್ಲದಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರು ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜನಗಿ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಅಹವಾಲು ಆಲಿಸಿದರು. ಗ್ರಾಮಸ್ಥರು ಕಳೆದ ಆರು ತಿಂಗಳಿಂದ ಗ್ರಾಮದ ಅಭಿವೃದ್ಧಿ ಕುಂಠಿತಗೊಂಡಿದ್ದು, ಆಡಳಿತಾಧಿಕಾರಿ ಹಾಗೂ ಪಿಡಿಒ ನಡುವೆ ಸಮನ್ವಯದ ಕೊರತೆಯಿಂದ ಸಮಸ್ಯೆಗಳು ಮತ್ತಷ್ಟು ಬಿಗಡಾಯಿಸಿವೆ ಎಂದು ಆರೋಪಿಸಿದರು.

ಗ್ರಾಮಸ್ಥರ ಅಸಮಾಧಾನ ಆಲಿಸಿದ ಬಳಿಕ ಅಧಿಕಾರಿಗಳು ಆಡಳಿತಾಧಿಕಾರಿ ಶರಣು ಗೋಗೇರಿ ಅವರಿಂದ ಕರ್ತವ್ಯ ಬಿಡುಗಡೆ ಪತ್ರ ಹಾಗೂ ಪಿಡಿಒ ಅಮೀರನಾಯಕ ಅವರಿಂದ ವರ್ಗಾವಣೆ ಮನವಿ ಪತ್ರ ಪಡೆದುಕೊಂಡರು.

ಲಕ್ಕುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಜಿ.ಪಂ. ಹಾಗೂ ತಾ.ಪಂ. ಮಟ್ಟದಲ್ಲಿ ಅಗತ್ಯ ಅನುದಾನವಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಐತಿಹಾಸಿಕ ಲಕ್ಕುಂಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಡಾ. ಎಚ್.ಎಸ್. ಜನಗಿ ಭರವಸೆ ನೀಡಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎನ್. ಉಮಚಗಿ, ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ ಹಾಗೂ ನಜೀರಅಹ್ಮದ್ ಕಿರಿಟಗೇರಿ ಮಾತನಾಡಿ, ಗ್ರಾಮದ ಸಮಸ್ಯೆಗಳ ಕುರಿತು ಹಲವು ಬಾರಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಯಿತು ಎಂದರು.

ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಇಬ್ಬರು ಅಧಿಕಾರಿಗಳ ಬದಲಾವಣೆಗೆ ಕ್ರಮ ಕೈಗೊಂಡು, ಲಕ್ಕುಂಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ಭರವಸೆ ನೀಡಿರುವುದರಿಂದ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ವಿಬಿಜಿ ರಾಮ್‌ಜಿ ಸಹಾಯಕ ನಿರ್ದೇಶಕ ಕುಮಾರ ಪೂಜಾರ, ಕಾರ್ಯದರ್ಶಿ ಗಣೇಶ ಪೂಜಾರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿವಪ್ಪ ಸಜ್ಜನರ, ಗ್ರಾ.ಪಂ. ಮಾಜಿ ಸದಸ್ಯ ಬಿ.ಬಿ. ಮಾಡಲಗೇರಿ, ಮರಿಯಪ್ಪ ವಡ್ಡರ, ಕಳಕೇಶ ಟೆಂಗಿನಕಾಯಿ, ಚಂದ್ರಗೌಡ ಪಾಟೀಲ, ಚನ್ನಪ್ಪ ಹುಬ್ಬಳ್ಳಿ, ಬಸವರಾಜ ಮುಳ್ಳಾಳ, ಬಸವರಾಜ ಕವಲೂರು, ಪ್ರವೀಣ ಕಲಾಲ, ವಿನಾಯಕ ಡಿಗ್ಗಾವಿ, ಮಂಜುನಾಥ ತಡಹಾಳ, ಬಸವರಾಜ ಕುಂಬಾರ, ವೀರಣ್ಣ ಅರಹುಣಶಿ, ಶಿವಪ್ಪ ಭಜಂತ್ರಿ, ರವಿ ಕವಲೂರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾಗೇಂದ್ರ ರಾಜೀನಾಮೆಗೆ ಆಗ್ರಹ: ಆ.17ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟ ಧರಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಆ.17ರಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಎಚ್ಚರಿಸಿದರು.

ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮಳೆಗಾಲದ ಅಧಿವೇಶನದ ಒಳಗೆ ಹಾಗೂ ಹೊರಗೆ ಹೋರಾಟ ಮುಂದುವರಿಸಲಾಗುವುದು ಎಂದರು.

ವಾಲ್ಮೀಕಿ ನಿಗಮದ ಸುಮಾರು ₹187 ಕೋಟಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದ ಅವರು, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹89 ಕೋಟಿ ಅಕ್ರಮ ನಡೆದಿದೆ ಎಂದು ಹೇಳಿದ್ದರು. ಹೀಗಿದ್ದರೂ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರು.

೩೧ ಪ್ರಕರಣಗಳ ತನಿಖೆ ನಡೆಯುತ್ತಿದ್ದರೂ ಮಂತ್ರಿಗಿರಿ ಏಕೆ?

ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಮಾತನಾಡಿ, ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ಹಣವನ್ನು ತೆಲಂಗಾಣದಲ್ಲಿ ಬಳಸಲಾಗಿದೆ ಎಂಬ ಶಂಕೆ ಇದೆ. ಸಿಬಿಐ, ಲೋಕಾಯುಕ್ತ, ಎಸ್‌ಐಟಿ ಹಾಗೂ ಸಿಐಡಿ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳಲ್ಲಿ ಒಟ್ಟು 31 ಪ್ರಕರಣಗಳು ತನಿಖೆಯ ಹಂತದಲ್ಲಿದ್ದರೂ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದೇಕೆ? ಎಂದು ಪ್ರಶ್ನಿಸಿದರು.

ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೂ ಪಾಲು ಇದೆಯೇ ಎಂಬ ಅನುಮಾನ ಮೂಡುತ್ತಿದೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಂ.ಎಸ್. ಕರಿಗೌಡ್ರ, ಲಿಂಗರಾಜಗೌಡ ಪಾಟೀಲ, ಶ್ರೀಪತಿ ಉಡುಪಿ, ಬೂದಪ್ಪ ಹಳ್ಳಿ, ಮಂಜುನಾಥ ಮುಳಗುಂದ, ನಾಗರಾಜ ತಳವಾರ, ಎಂ.ಎಂ. ಹಿರೇಮಠ ಹಾಗೂ ಅನಿಲ ಅಬ್ಬಿಗೇರಿ ಉಪಸ್ಥಿತರಿದ್ದರು.

ಗದಗ ಜಂಕ್ಷನ್‌ಗೆ ರೈಲುಗಳ ಕೊರತೆ: ಬೆಂಗಳೂರು–ಹುಬ್ಬಳ್ಳಿಗೆ ಹೊಸ ಸೇವೆಗೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ಬಳ್ಳಾರಿ–ಕೊಪ್ಪಳ–ಗದಗ ಜಂಕ್ಷನ್ ಮೂಲಕ ಬೆಂಗಳೂರು, ಧಾರವಾಡ ಹಾಗೂ ಹುಬ್ಬಳ್ಳಿ ಸೇರಿದಂತೆ ಪ್ರಮುಖ ನಗರಗಳಿಗೆ ಹೆಚ್ಚಿನ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ಹಾಗೂ ಕುಷ್ಟಗಿ ಹೋರಾಟ ಸಮಿತಿ ಆಗ್ರಹಿಸಿದೆ.

ಈ ಕುರಿತು ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಅವರನ್ನು ಭೇಟಿ ಮಾಡಿದ ವೇದಿಕೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಕುಷ್ಟಗಿ–ಗದಗ ಜಂಕ್ಷನ್ ಮೂಲಕ ಬೆಂಗಳೂರು ಹಾಗೂ ಧಾರವಾಡಕ್ಕೆ ವಿಶೇಷ ರೈಲುಗಳನ್ನು ಆರಂಭಿಸಬೇಕು. ಸಿಂಧನೂರಿನಿಂದ ಧಾರವಾಡ–ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳಲು ರಾತ್ರಿ ಹಾಗೂ ಮುಂಜಾನೆ ಸಮಯದಲ್ಲಿ ಹೊಸ ರೈಲು ಸೇವೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ದಾವಣಗೆರೆ–ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ ತಲುಪುವ ರೈಲುಗಳ ಪೈಕಿ ಹೆಚ್ಚಿನ ರೈಲುಗಳನ್ನು ಬಳ್ಳಾರಿ–ಹೊಸಪೇಟೆ–ಕೊಪ್ಪಳ–ಗದಗ ಮಾರ್ಗವಾಗಿ ಸಂಚರಿಸುವಂತೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಬಳ್ಳಾರಿಯಿಂದ ಮುಂಜಾನೆ 6 ಗಂಟೆಯ ಬಳಿಕ ಹುಬ್ಬಳ್ಳಿ ಹಾಗೂ ವಿಜಯಪುರ ಮಾರ್ಗಕ್ಕೆ ಸಮರ್ಪಕ ರೈಲು ಸೇವೆ ಇಲ್ಲ. ಮಧ್ಯಾಹ್ನ 3.55ಕ್ಕೆ ತಿರುಪತಿ–ಹುಬ್ಬಳ್ಳಿ ರೈಲು ಇರುವುದನ್ನು ಹೊರತುಪಡಿಸಿ ಸಂಜೆ 5ರ ಬಳಿಕವೂ ರೈಲುಗಳ ಕೊರತೆ ಇದೆ. ಕೊಪ್ಪಳ–ಬಳ್ಳಾರಿ ಭಾಗವು ಕೈಗಾರಿಕೆ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಹೊಂದಿರುವುದರಿಂದ ಈ ಭಾಗಕ್ಕೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ಮುಖಂಡರು ತಿಳಿಸಿದರು.

ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ, ವೀರಭದ್ರಪ್ಪ ಕಬ್ಬಿಣದ, ವೆಂಕಟೇಶ ಕಬಾಡಿ, ಬಸವರಾಜ ಜರತಖನ್ನಿ, ಕುಷ್ಟಗಿ ಹೋರಾಟ ಸಮಿತಿಯ ವೀರೇಶ ಬಂಗಾರಶೆಟ್ಟರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಹಾಲಿಂಗಪುರ, ಭರತೇಶ ಜೋಷಿ, ಶ್ರೀಧರ ಘೋರ್ಪಡೆ, ಮಹಾಂತಯ್ಯ ಅರಳೆಲೆಮಠ, ಶರಣಪ್ಪ ಲಿಂಗಶೆಟ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮನವಿಗೆ ಸ್ಪಂದಿಸಿದ ಅಮರೇಗೌಡ ಬಯ್ಯಾಪುರ

ಕೊಪ್ಪಳ ಹಾಗೂ ಬಳ್ಳಾರಿ ಲೋಕಸಭಾ ಸದಸ್ಯರ ಗಮನಕ್ಕೆ ಸಮಸ್ಯೆಯನ್ನು ತಂದು ಈ ಭಾಗಕ್ಕೆ ಹೆಚ್ಚಿನ ರೈಲ್ವೆ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು. ತಾವು ಕುಷ್ಟಗಿ ಮಾಜಿ ಶಾಸಕರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೂ ಈ ವಿಷಯವನ್ನು ತರುವುದಾಗಿ ತಿಳಿಸಿದರು.

ಒಳ್ಳೆಯ ಸ್ಪರ್ಶ–ಕೆಟ್ಟ ಸ್ಪರ್ಶ” ಅರಿವು ಮೂಡಿಸಿ; ಡಿಸಿ ಸ್ನೇಹಲ್ ಆರ್.

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಅಪ್ರಾಪ್ತ ಮಕ್ಕಳ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಶಾಲೆಗಳಲ್ಲಿ ‘ಒಳ್ಳೆಯ ಸ್ಪರ್ಶ–ಕೆಟ್ಟ ಸ್ಪರ್ಶ’ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಜಾಗೃತಿ ಕಾರ್ಯಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗುವ ಪ್ರಕರಣಗಳನ್ನು ತಡೆಗಟ್ಟಲು ಶಾಲೆ–ಕಾಲೇಜುಗಳಲ್ಲಿ ಪರಿಣಾಮಕಾರಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

18 ವರ್ಷದೊಳಗಿನ ಮಕ್ಕಳಿಗೆ ಬಾಲ್ಯವಿವಾಹ ಮಾಡಿಸುವುದು ಕಾನೂನುಬಾಹಿರವಾಗಿದ್ದರೂ ಇಂತಹ ಪ್ರಕರಣಗಳು ಕಂಡುಬರುತ್ತಿವೆ. ಅಪ್ರಾಪ್ತರು ಗರ್ಭಿಣಿಯಾಗಿರುವ ಪ್ರಕರಣಗಳು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕಂಡುಬಂದರೆ ವೈದ್ಯರು ತಕ್ಷಣ ಪೊಲೀಸ್ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಜೂನ್‌ವರೆಗೆ 6,714 ಪ್ರಕರಣಗಳು ದಾಖಲಾಗಿವೆ. ಎಲ್ಲ ಆಸ್ಪತ್ರೆಗಳಲ್ಲಿ ಅಗತ್ಯ ಚುಚ್ಚುಮದ್ದು ಲಭ್ಯವಿರುವಂತೆ ನೋಡಿಕೊಳ್ಳಬೇಕು ಹಾಗೂ ಬೀದಿ ನಾಯಿಗಳ ಸಂತಾನಹರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸೂಚಿಸಿದ ಅವರು, ಶಾಲೆ, ಕಾಲೇಜು, ಆಸ್ಪತ್ರೆ, ಸರ್ಕಾರಿ ಕಚೇರಿ, ರೈಲು ನಿಲ್ದಾಣ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ., ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಲಾಭವನ ಶೀಘ್ರ ಸಾರ್ವಜನಿಕ ಬಳಕೆಗೆ ಮುಕ್ತ: ಶಾಸಕ ಅರವಿಂದ ಬೆಲ್ಲದ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡದ ಡಾ. ಮಲ್ಲಿಕಾರ್ಜುನ ಮನ್ಸೂರ ಕಲಾಭವನವನ್ನು ತುರ್ತಾಗಿ ಸಾರ್ವಜನಿಕರ ಬಳಕೆಗೆ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಭರವಸೆ ನೀಡಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕಲಾಭವನ ಹಾಗೂ ಕಡಪಾ ಮೈದಾನ ಉಳಿಸಿ ಹೋರಾಟ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಲಾಭವನದ ದುರಸ್ತಿ ಹಾಗೂ ಕಡಪಾ ಮೈದಾನದ ಬಳಕೆಗೆ ಸಂಬಂಧಿಸಿದಂತೆ ಹೋರಾಟ ಸಮಿತಿಯಿಂದ ತಜ್ಞರ ಸಮಿತಿ ರಚಿಸಬೇಕು. ತಜ್ಞರು ನೀಡುವ ಸಲಹೆಯಂತೆ ಕಲಾಭವನವನ್ನು ಸಾರ್ವಜನಿಕ ಬಳಕೆಗೆ ಸಜ್ಜುಗೊಳಿಸಲಾಗುವುದು. ಸದ್ಯ ನಡೆಯುತ್ತಿರುವ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದ್ದು, ತಜ್ಞರ ಸಲಹೆಯಂತೆ ಕಾಮಗಾರಿ ಕೈಗೊಳ್ಳಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಲಾಭವನದ ವೈಭವ ಮತ್ತೆ ಮರುಕಳಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಪಂ. ಎಂ. ವೆಂಕಟೇಶಕುಮಾರ ಆಶಿಸಿದರು. ಕಲಾಭವನಕ್ಕೆ ದೊಡ್ಡ ಸಾಂಸ್ಕೃತಿಕ ಇತಿಹಾಸವಿದ್ದು, ಇಲ್ಲಿ ನಡೆಯುತ್ತಿದ್ದ ರಾಷ್ಟ್ರಮಟ್ಟದ ಅಹೋರಾತ್ರಿ ಸಂಗೀತ ಕಾರ್ಯಕ್ರಮಗಳ ವೈಭವ ಮತ್ತೆ ಕಾಣುವಂತಾಗಬೇಕು ಎಂದರು.

ಡಾ. ವೀರಣ್ಣ ರಾಜೂರ ಮಾತನಾಡಿ, ಕಲಾಭವನ ಹಾಗೂ ಕಡಪಾ ಮೈದಾನ ಧಾರವಾಡದ ಅಸ್ಮಿತೆ. ಸಾರ್ವಜನಿಕ ಚಟುವಟಿಕೆ, ಹೋರಾಟ ಹಾಗೂ ಭಾಷಣಗಳಿಗೆ ಕಡಪಾ ಮೈದಾನ ಬಳಕೆಯಾಗುತ್ತ ಬಂದಿದ್ದು, ಅದರ ಮೂಲ ಆಶಯಕ್ಕೆ ಧಕ್ಕೆ ಬಾರದಂತೆ ಸೌಂದರ್ಯೀಕರಣ ಮಾಡಬೇಕು. ಕಲಾವಿದರಿಗೆ ಕೈಗೆಟುಕುವ ದರದಲ್ಲಿ ಕಲಾಭವನ ದೊರೆಯುವಂತಾಗಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಸತೀಶ ತುರಮರಿ, ಡಾ. ಪ್ರಕಾಶ ಗರುಡ, ಬಿ. ಮಾರುತಿ, ಎಂ.ಎಂ. ಚಿಕ್ಕಮಠ, ಬಿ.ಐ. ಇಳಿಗೇರ, ಡಾ. ರಾಜೇಂದ್ರ ಪೊದ್ಧಾರ, ಡಾ. ರಾಮು ಮೂಲಗಿ, ಎಫ್.ವಿ. ಚಿಕ್ಕಮಠ, ಡಾ. ಬಿ.ಎಚ್. ಕುರಿ, ಎಐಡಿಎಸ್‌ಒ ಸಂಚಾಲಕ ಲಕ್ಷ್ಮಣ, ಎಚ್.ಜಿ. ದೇಸಾಯಿ, ಲಕ್ಷ್ಮಣ ಬಕ್ಕಾಯಿ, ಸುರೇಶ ಬೇದರೆ, ಎ.ಎಂ. ಖಾನ್, ಬಿ.ಎನ್. ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸದ್ಗುಣ–ಸಚ್ಚಾರಿತ್ರ್ಯದಿಂದ ಬದುಕು ಉಜ್ವಲ: ರಂಭಾಪುರಿ ಜಗದ್ಗುರು

0

ವಿಜಯಸಾಕ್ಷಿ ಸುದ್ದಿ, ಚನ್ನಗಿರಿ: ಜೀವನದಲ್ಲಿ ಭಾಗ್ಯೋದಯವಾಗಬೇಕಾದರೆ ಆದರ್ಶ ಮೌಲ್ಯಗಳನ್ನು ಪಾಲಿಸುವುದರ ಜತೆಗೆ ಪರಿಶ್ರಮ ಮತ್ತು ಸಾಧನೆ ಅಗತ್ಯ. ಸದ್ಗುಣ, ಸಂಸ್ಕಾರ ಹಾಗೂ ಸಚ್ಚಾರಿತ್ರ್ಯದಿಂದ ಬದುಕು ಶ್ರೀಮಂತಗೊಳ್ಳುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಲಿಂ. ಸಿದ್ಧಲಿಂಗ ಶಿವಾಚಾರ್ಯರ 55ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಬುಧವಾರ ನಡೆದ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಏನೇ ಸಂಕಷ್ಟಗಳು ಎದುರಾದರೂ ಏಕಾಗ್ರತೆ ಹಾಗೂ ಆಧ್ಯಾತ್ಮಿಕ ಸಾಧನೆಯ ಮೂಲಕ ಜೀವನದಲ್ಲಿ ಶ್ರೇಯಸ್ಸು ಕಾಣಬೇಕು. ಜಗತ್ತಿನ ಕತ್ತಲೆ ಕಳೆಯಲು ಸೂರ್ಯ ಬೇಕಾದಂತೆ, ಜನರ ಭಾವನೆಗಳನ್ನು ಬೆಳಗಿಸಲು ಗುರುವಿನ ಮಾರ್ಗದರ್ಶನ ಅಗತ್ಯ. ಮಲತ್ರಯಗಳನ್ನು ನಿರ್ಮೂಲನೆ ಮಾಡಿ ಶಿವಜ್ಞಾನದ ಬೆಳಕು ಬೀರುವವನೇ ನಿಜವಾದ ಗುರು. ಕರ್ಮದ ಕತ್ತಲೆ ಕಳೆದು ಧರ್ಮದ ಬೀಜ ಬಿತ್ತಿ ಬದುಕನ್ನು ಬಂಗಾರಗೊಳಿಸಿದ ಗುರುವಿನ ಸ್ಮರಣೆ ಸದಾ ಇರಬೇಕು ಎಂದರು.

ಲಿಂ. ಸಿದ್ಧಲಿಂಗ ಶಿವಾಚಾರ್ಯರು ವಾಕ್‌ಸಿದ್ಧಿ ಪಡೆದವರಾಗಿದ್ದು, ಯಂತ್ರ–ಮಂತ್ರಗಳಲ್ಲಿ ಅಪಾರ ಶ್ರದ್ಧೆ ಹೊಂದಿದ್ದರು. ಧರ್ಮ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.

ಅವರ 55ನೇ ಪುಣ್ಯಸ್ಮರಣೋತ್ಸವ ಆಯೋಜಿಸಿರುವುದು ಭಕ್ತ ಸಮೂಹದ ಸೌಭಾಗ್ಯವಾಗಿದೆ ಎಂದರು.

ಸಮಾರಂಭ ಉದ್ಘಾಟಿಸಿದ ಯುವ ಧುರೀಣ ಮಾಡಾಳು ಮಲ್ಲಿಕಾರ್ಜುನ, ಮನುಷ್ಯ ಎಷ್ಟು ವರ್ಷ ಬದುಕಿದ ಎಂಬುದಕ್ಕಿಂತ ಬದುಕಿರುವಷ್ಟು ದಿನ ಯಾವ ರೀತಿಯಲ್ಲಿ ಬದುಕಿದ ಎಂಬುದು ಮುಖ್ಯ. ಮಲಿನಗೊಂಡ ಮನಸ್ಸನ್ನು ಶುದ್ಧಗೊಳಿಸಿ ಅರಿವಿನ ದಾರಿಯಲ್ಲಿ ನಡೆಸಲು ಗುರುವಿನ ಮಾರ್ಗದರ್ಶನ ಅಗತ್ಯ ಎಂದರು. ಲಿಂ. ಸಿದ್ಧಲಿಂಗ ಶ್ರೀಗಳು ದೈವಾಂಶ ಸಂಭೂತರಾಗಿ ಸಮಾಜಕ್ಕೆ ಬೆಳಕು ತೋರಿದ ಸದ್ಗುರುವಾಗಿದ್ದರು ಎಂದು ಸ್ಮರಿಸಿದರು.

ನೇತೃತ್ವ ವಹಿಸಿದ್ದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ಭವಬಂಧನದಿಂದ ಭಕ್ತರನ್ನು ಮುಕ್ತಗೊಳಿಸುವ ಶಕ್ತಿ ಗುರುವಿಗೆ ಇದೆ. ದೇವರು, ಧರ್ಮ ಹಾಗೂ ಗುರುವನ್ನು ಎಂದಿಗೂ ಮರೆಯಬಾರದು. ಲಿಂ. ಸಿದ್ಧಲಿಂಗ ಶಿವಾಚಾರ್ಯರು ಭಕ್ತರ ಕಷ್ಟಗಳನ್ನು ಪರಿಹರಿಸಿ ಸನ್ಮಾರ್ಗದತ್ತ ಕರೆದೊಯ್ದಿದ್ದರು ಎಂದರು.

ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಪ್ರಾಸ್ತಾವಿಕವಾಗಿ ಮಾತನಾಡಿ, ಸಮರ್ಥ ಗುರುವಿನ ಮಾರ್ಗದರ್ಶನದಲ್ಲಿ ಬದುಕಿದರೆ ವ್ಯಕ್ತಿ ಸಮಾಜದ ಆದರ್ಶ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ. ಲಿಂ. ಸಿದ್ಧಲಿಂಗ ಶಿವಾಚಾರ್ಯರ ಪೂಜಾ, ತಪಸ್ಸು, ಅನುಷ್ಠಾನ ಹಾಗೂ ತತ್ವ–ಸಿದ್ಧಾಂತಗಳ ಮೂಲಕ ಭಕ್ತರನ್ನು ಸನ್ಮಾರ್ಗದತ್ತ ಕೊಂಡೊಯ್ಯುವುದು ಅವರ ಗುರಿಯಾಗಿತ್ತು ಎಂದರು.

ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರು, ಚನ್ನಗಿರಿ ಕೇದಾರದ ಡಾ. ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯರು, ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯರು, ಬೇರುಗಂಡಿ ಮಠದ ರೇಣುಕ ಮಹಾಂತ ಶಿವಾಚಾರ್ಯರು, ಕೆ. ಬಿದರೆ ಪ್ರಭುಕುಮಾರ ಶಿವಾಚಾರ್ಯರು ಹಾಗೂ ಹಣ್ಣೆ ಹಿರೇಮಠದ ಮರುಳಸಿದ್ಧ ಪಂಡಿತಾರಾಧ್ಯ ಶ್ರೀಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.

ತೆಂಡೇಕೆರೆ ಗಂಗಾಧರ ಶಿವಾಚಾರ್ಯರು ಸ್ವಾಗತಿಸಿದರು. ಸಂಗಯ್ಯ ಶಾಸ್ತ್ರಿಗಳು ಪ್ರಾರ್ಥಿಸಿದರು. ಬೀರೂರು ರುದ್ರಮುನಿ ಶಿವಾಚಾರ್ಯರು ನಿರೂಪಿಸಿದರು. ಸಮಾರಂಭದ ಬಳಿಕ ಅನ್ನದಾಸೋಹ ನಡೆಯಿತು.

ಇದಕ್ಕೂ ಮುನ್ನ ಲೋಕಹಿತ ಹಾಗೂ ಜನಕಲ್ಯಾಣಕ್ಕಾಗಿ ಶ್ರೀಮಠದ ಆವರಣದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಪೂಜೆ ನೆರವೇರಿಸಿ ಭಕ್ತ ಸಮೂಹಕ್ಕೆ ಶುಭ ಹಾರೈಸಿದರು.

“ದೇವರು, ಧರ್ಮ ಮತ್ತು ಶ್ರೀಗುರುವಿನ ಮೇಲೆ ನಂಬಿಕೆ–ವಿಶ್ವಾಸವನ್ನಿಟ್ಟು ಬಾಳಿದರೆ ಜೀವನ ಸಾರ್ಥಕವಾಗುತ್ತದೆ. ಲಿಂ. ಸಿದ್ಧಲಿಂಗ ಶಿವಾಚಾರ್ಯರು ಧರ್ಮ ಹಾಗೂ ಸಮಾಜಮುಖಿಯಾಗಿ ಸಲ್ಲಿಸಿದ ಸೇವೆ ಭಕ್ತ ಸಮುದಾಯಕ್ಕೆ ಸದಾ ಸ್ಮರಣೀಯ.”

— ಶ್ರೀ ರಂಭಾಪುರಿ ಜಗದ್ಗುರುಗಳು

ಅರಣ್ಯವನ ಪ್ರಾಣಿ–ಪಕ್ಷಿಗಳಿಗೆ ಆಶ್ರಯ ತಾಣ

0

ವಿಜಯಸಾಕ್ಷಿ ಸುದ್ದಿ, ಗದಗ: ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸುವ ಬದಲು ಪರಿಸರ ಸಂರಕ್ಷಣೆಯ ಸಂದೇಶ ಸಾರುವ ರೀತಿಯಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ ಅವರು ೯೨ ಸಸಿಗಳನ್ನು ನೆಡುವ ಮೂಲಕ ತಮ್ಮ ೯೨ನೇ ಜನ್ಮದಿನವನ್ನು ಆಚರಿಸಿಕೊಂಡರು.

ಗದಗ ತಾಲೂಕಿನ ಬಳಗಾನೂರ ರಸ್ತೆಯಲ್ಲಿರುವ ಡಾ. ಪ್ರದೀಪ ಉಗಲಾಟ ಅವರ ‘ಶಿವಶಾಂತ ಜೀವ ವೈವಿಧ್ಯ ಉದ್ಯಾನವನ’ದಲ್ಲಿ ಗದಗ–ಬೆಟಗೇರಿ ರೋಟರಿ ಕ್ಲಬ್, ಇನ್ನರ್‌ವೀಲ್ ಕ್ಲಬ್ ಹಾಗೂ ರೋಟ್ರಾಕ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವ್ಯಾಪಾರೀಕರಣ ಹಾಗೂ ಔದ್ಯೋಗಿಕರಣದ ಪರಿಣಾಮ ಪರಿಸರ ನಾಶವಾಗುತ್ತಿರುವ ಸಂದರ್ಭದಲ್ಲಿ ಅರಣ್ಯವನ ನಿರ್ಮಾಣದ ಮೂಲಕ ಹಸಿರು ಪರಿಸರ ಬೆಳೆಸುತ್ತಿರುವುದು ಶ್ಲಾಘನೀಯ. ಇಂತಹ ಅರಣ್ಯವನಗಳು ಪ್ರಾಣಿ–ಪಕ್ಷಿಗಳಿಗೆ ಆಶ್ರಯ ತಾಣವಾಗುವುದರ ಜತೆಗೆ ಜೀವವೈವಿಧ್ಯ ಸಂರಕ್ಷಣೆಗೆ ನೆರವಾಗುತ್ತವೆ ಎಂದರು.

ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಶಿವಕುಮಾರ ರಡ್ಡೇರ ಮಾತನಾಡಿ, ರಾಜಕೀಯ ಕ್ಷೇತ್ರದ ಹೊರತಾಗಿಯೂ ಎಸ್.ಎಸ್. ಪಾಟೀಲ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಸ್ಯಗಳನ್ನು ನೆಡುವ ಮೂಲಕ ಜನ್ಮದಿನ ಆಚರಿಸಿರುವುದು ಉತ್ತಮ ಸಂದೇಶ ನೀಡಿದೆ ಎಂದರು.

ಡಾ. ಜಿ.ಬಿ. ಪಾಟೀಲ ಮಾತನಾಡಿ, ಬಸವಣ್ಣನವರ ತತ್ವ–ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿರುವ ಎಸ್.ಎಸ್. ಪಾಟೀಲರು ಶರಣ ಬದುಕನ್ನು ಸಾರ್ಥಕಗೊಳಿಸಿದ್ದಾರೆ. ಡಾ. ಪ್ರದೀಪ ಉಗಲಾಟ ಹಾಗೂ ನೀಲಾಂಬಿಕಾ ಉಗಲಾಟ ದಂಪತಿ ಅರಣ್ಯವನ ನಿರ್ಮಿಸುವ ಮೂಲಕ ನಿಸರ್ಗ ಸಂಪತ್ತಿನ ಸಂರಕ್ಷಣೆಗೆ ಮುಂದಾಗಿರುವುದು ಅಭಿನಂದನೀಯ ಎಂದರು.

ಪ್ರೊ. ಸಿದ್ದು ಯಾಪಲಪರ್ವಿ ಮಾತನಾಡಿ, ಇಳಿ ವಯಸ್ಸಿನಲ್ಲಿಯೂ ಎಸ್.ಎಸ್. ಪಾಟೀಲ ಅವರ ಪರಿಸರ ಕಾಳಜಿ ಮಾದರಿಯಾಗಿದೆ. ಜನ್ಮದಿನವನ್ನು ಪರಿಸರದೊಂದಿಗೆ ಆಚರಿಸುವ ಮೂಲಕ ಯುವಜನತೆಗೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.

ರೋಟರಿ ಕ್ಲಬ್ ಉಪಾಧ್ಯಕ್ಷ ಸುರೇಶ ಕುಂಬಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಡುಗಳು ನಾಡಾಗಿ ಪರಿವರ್ತನೆಯಾಗುತ್ತಿರುವುದರಿಂದ ಜೀವವೈವಿಧ್ಯಕ್ಕೆ ಅಪಾರ ಹಾನಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರಣ್ಯವನ ನಿರ್ಮಾಣದ ಮೂಲಕ ಡಾ. ಪ್ರದೀಪ ಉಗಲಾಟ ಹಾಗೂ ನೀಲಾಂಬಿಕಾ ಉಗಲಾಟ ದಂಪತಿ ಜೀವವೈವಿಧ್ಯಕ್ಕೆ ಆಸರೆಯಾಗಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್. ಪಾಟೀಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ. ವಿನಯ ಟೀಕಾರೆ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಅಕ್ಷಯ ಶೆಟ್ಟಿ ವಂದಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟ, ನೀಲಾಂಬಿಕಾ ಉಗಲಾಟ, ಶಿವಾಚಾರ್ಯ ಹೊಸಳ್ಳಿಮಠ, ಮಂಜುಳಾ ಅಕ್ಕಿ, ಸುಲೋಚನಾ ಐಹೋಳಿ, ಸ್ವಾತಿ ಹಿರೇಮಠ, ಚೇತನಾ ಹಂಪಿಮಠ, ಸುಜಾತಾ ಕಾಡಪ್ಪನವರ, ಪ್ರಕಾಶ ಉಗಲಾಟ ಸೇರಿದಂತೆ ರೋಟರಿ ಸದಸ್ಯರು, ಹುಯಿಲಗೋಳ ಗ್ರಾಮಸ್ಥರು ಹಾಗೂ ಉಗಲಾಟ ಕುಟುಂಬದವರು ಉಪಸ್ಥಿತರಿದ್ದರು.

“ಅರಣ್ಯ ಉಳಿದರೆ ಪರಿಸರ ಉಳಿಯುತ್ತದೆ, ಪರಿಸರ ಉಳಿದರೆ ಮಾನವನ ಬದುಕು ಸುರಕ್ಷಿತವಾಗಿರುತ್ತದೆ. ಅರಣ್ಯ ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಭೂಮಿಯ ಜೀವಜಲದ ಆಧಾರವಾಗಿದೆ. ಕಪ್ಪತಗುಡ್ಡ ಔಷಧೀಯ ಸಸ್ಯಗಳ ಆಗರವಾಗಿದ್ದು, ಡಾ. ಪ್ರದೀಪ ಉಗಲಾಟ ಅವರ ಸತತ ಪರಿಶ್ರಮದಿಂದ ನಿರ್ಮಾಣವಾಗುತ್ತಿರುವ ಈ ಅರಣ್ಯವನ ಮಾದರಿಯಾಗಿದೆ.”

— ಎಸ್.ಎಸ್. ಪಾಟೀಲ

ದೃಢ ಸಂಕಲ್ಪ, ಪರಿಶ್ರಮದಿಂದ ಗುರಿ ಸಾಧಿಸಿ: ಶಾಸಕ ಕೆ. ನೇಮಿರಾಜ್ ನಾಯ್ಕ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ದೃಢ ಸಂಕಲ್ಪ ಹಾಗೂ ಪರಿಶ್ರಮವಿದ್ದರೆ ಜೀವನದಲ್ಲಿ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯ. ರೈತರು ಹಾಗೂ ಬಡ ಕಾರ್ಮಿಕರ ಕುಟುಂಬಗಳಿಂದ ಬಂದಿರುವ ವಿದ್ಯಾರ್ಥಿಗಳು ಪಾಲಕರ ಕಷ್ಟವನ್ನು ಅರಿತು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉನ್ನತ ಗುರಿ ಸಾಧಿಸಬೇಕು ಎಂದು ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣದ ಗಂ.ಭೀ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2026–27ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದರೂ, ಮಕ್ಕಳ ಭವಿಷ್ಯ ಉತ್ತಮವಾಗಬೇಕು ಎಂಬ ಆಶಯದಿಂದ ಪಾಲಕರು ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿಗೊಳಿಸದೆ ಉತ್ತಮ ಫಲಿತಾಂಶ ಪಡೆದು ಉನ್ನತ ಗುರಿ ಸಾಧಿಸಬೇಕು. ಗುರಿ ಸಾಧನೆಗೆ ದೃಢ ಸಂಕಲ್ಪವೇ ಪ್ರಮುಖ ಸಾಧನ ಎಂದು ಶಾಸಕರು ಹೇಳಿದರು.

ಅರ್ಥಶಾಸ್ತ್ರ ಉಪನ್ಯಾಸಕ ಎಂ. ಹುಲುಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ. ಕಾಲೇಜಿನ ವಿವಿಧ ಘಟಕಗಳು ಉದ್ಘಾಟನೆಯೊಂದಿಗೆ ಮತ್ತಷ್ಟು ಚಟುವಟಿಕೆಯಿಂದ ಕಾರ್ಯನಿರ್ವಹಿಸಲಿವೆ ಎಂದರು.

ಕಳೆದ ಸಾಲಿನಲ್ಲಿ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದ್ದು, 50 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿವಿಧ ವಿಷಯಗಳಲ್ಲಿ 15 ವಿದ್ಯಾರ್ಥಿಗಳು ಶೇ.100 ಅಂಕ ಗಳಿಸಿ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಎಸ್.ಯು.ಜೆ.ಎಂ. ಪದವಿಪೂರ್ವ ಕಾಲೇಜು ಹರಪನಹಳ್ಳಿಯ ನಿವೃತ್ತ ಉಪನ್ಯಾಸಕ ಎಂ.ಪಿ.ಎಂ. ದಯಾನಂದ ಸ್ವಾಮಿ, ಭಾರತ ಭವ್ಯ ಸಂಸ್ಕೃತಿಯ ನಾಡಾಗಿದ್ದು, ಗುರು ಪರಂಪರೆಗೆ ವಿಶೇಷ ಸ್ಥಾನವಿದೆ. ಅರಿವಿನೊಂದಿಗೆ ಗುರುವಿನ ಮಾರ್ಗದರ್ಶನ ಪಡೆದು ಶಿಕ್ಷಣವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

‘ಹಸಿರೇ ಉಸಿರು, ನೇಚರೇ ನಿಮ್ಮ ಟೀಚರ್’ ಎಂಬ ಸಂದೇಶ ನೀಡಿದ ಅವರು, ವಿದ್ಯಾರ್ಥಿಗಳು ಪ್ರಕೃತಿಯನ್ನು ಪ್ರೀತಿಸಿ ತಮಗೆ ನೀಡಿರುವ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಕೆ. ದುರುಗಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಜೀವ ಸದಸ್ಯ ಗಂಗಾವತಿ ವಿಜೇತ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಾಗರಾಜ ಬ್ಯಾಟಿ, ಸದಸ್ಯರಾದ ಕನ್ನೀಹಳ್ಳಿ ಚಂದ್ರಶೇಖರ, ಬಸವರಾಜ ಬಡಿಗೇರ, ನಾಣ್ಯಪುರ ಕೃಷ್ಣಮೂರ್ತಿ, ಕೆ.ಬಿ.ಎಂ. ನಾಗಲಿಂಗಸ್ವಾಮಿ, ಬಿ.ಜಿ.ಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಗೂಳಪ್ಪ ಹುಲಿಮನಿ, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಎಚ್.ಪಿ. ರಾಥೋಡ್, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶಿವಕುಮಾರ್ ಎಸ್. ಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ಡಾ. ಉಮಾ ಸ್ವಾಗತಿಸಿದರು. ಕುಮಾರಿ ರಾಧಿಕಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಣ ಶಾಸ್ತ್ರ ಉಪನ್ಯಾಸಕಿ ವಿಜಯಲಕ್ಷ್ಮೀ ವಂದಿಸಿದರು.

“ದಾಖಲಾಗಿರುವ ಬಹುತೇಕ ವಿದ್ಯಾರ್ಥಿಗಳು ರೈತರು ಹಾಗೂ ಬಡ ಕಾರ್ಮಿಕರ ಮಕ್ಕಳಾಗಿದ್ದೀರಿ. ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಇಂತಹ ಕಷ್ಟದ ನಡುವೆಯೂ ಪಾಲಕರು ನಿಮ್ಮನ್ನು ಓದಿಸುತ್ತಿದ್ದಾರೆ. ಅವರ ಆಶಯದಂತೆ ಉತ್ತಮ ಫಲಿತಾಂಶ ಪಡೆದು ನಿಮ್ಮ ಗುರಿ ಸಾಧಿಸಬೇಕು.”

— ಕೆ. ನೇಮಿರಾಜ್ ನಾಯ್ಕ, ಶಾಸಕ

ಡ್ರೈವಿಂಗ್ ಕಲಿಯುವಾಗಲೇ ದುರಂತ; ಕಾರು ಕೆರೆಗೆ ಬಿದ್ದು 42 ವರ್ಷದ ಮಹಿಳೆ ಸಾವು!

0

ಕೋಲ್ಕತ್ತಾ: ಡ್ರೈವಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಉರುಳಿದ ಪರಿಣಾಮ 42 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೋಲ್ಕತ್ತಾದ ಕೆಸ್ತೋಪುರದ ಪ್ರಫುಲ್ಲ ಕಾನನ್ ಪಶ್ಚಿಮ ಪ್ರದೇಶದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸುಮಿತ್ರಾ ದಾಸ್ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಸುಮಿತ್ರಾ ಅವರು ತಮ್ಮ ಮಗಳನ್ನು ಸ್ಕೂಟರ್‌ನಲ್ಲಿ ಶಾಲೆಗೆ ಬಿಟ್ಟು ಮನೆಗೆ ವಾಪಸ್ ಬಂದಿದ್ದರು. ಬಳಿಕ ಸ್ಕೂಟರ್‌ನ್ನು ಮನೆಯ ಬಳಿ ನಿಲ್ಲಿಸಿ, ಪತಿ ಇತ್ತೀಚೆಗೆ ಖರೀದಿಸಿದ್ದ ಕಾರನ್ನು ಗ್ಯಾರೇಜ್‌ನಿಂದ ಹೊರತೆಗೆದಿದ್ದಾರೆ.

ಸುಮಿತ್ರಾ ಅವರು ಆಗಸ್ಟ್ 22ರಂದು ನಡೆಯಲಿದ್ದ ಚಾಲನಾ ಪರವಾನಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಕಾರು ಚಾಲನೆ ಅಭ್ಯಾಸ ಮಾಡಲು ಮನೆಯಿಂದ ಹೊರಟಿದ್ದರು. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ಸಮೀಪದ ಕೆರೆಗೆ ಉರುಳಿದೆ.

ಕಾರು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದ ಹಿನ್ನೆಲೆಯಲ್ಲಿ ಸ್ಥಳೀಯರು ಕೂಡಲೇ ರಕ್ಷಣೆಗೆ ಮುಂದಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಕಾರನ್ನು ಕೆರೆಯಿಂದ ಹೊರತೆಗೆಯಲಾಯಿತು. ಕಾರನ್ನು ನೀರಿನಿಂದ ಮೇಲಕ್ಕೆತ್ತಿದಾಗ ಅದರೊಳಗೆ ಸುಮಿತ್ರಾ ಅವರ ಮೃತದೇಹ ಪತ್ತೆಯಾಗಿದೆ.

ಕಾರಿನೊಳಗೆ ಮೃತದೇಹ ಪತ್ತೆಯಾದ ರೀತಿಯನ್ನು ಗಮನಿಸಿದ ಪೊಲೀಸರು, ಕಾರು ನೀರಿನಲ್ಲಿ ಮುಳುಗುತ್ತಿದ್ದ ವೇಳೆ ಸುಮಿತ್ರಾ ಅವರು ಹೊರಬರಲು ಪ್ರಯತ್ನಿಸಿರಬಹುದು ಎಂದು ಶಂಕಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸುಮಿತ್ರಾ ಅವರಿಗೆ ಚಾಲನೆಯಲ್ಲಿ ಇನ್ನೂ ಸಂಪೂರ್ಣ ಪರಿಣತಿ ಇರಲಿಲ್ಲ. ಚಾಲನೆ ಮಾಡುವ ವೇಳೆ ಬ್ರೇಕ್ ಬದಲಿಗೆ ತಪ್ಪಾಗಿ ವೇಗವರ್ಧಕವನ್ನು ಒತ್ತಿದ್ದರಿಂದ ಕಾರು ಏಕಾಏಕಿ ವೇಗ ಪಡೆದುಕೊಂಡು ನಿಯಂತ್ರಣ ತಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬಳಿಕ ಕಾರು ಕೆರೆಗೆ ನುಗ್ಗಿರಬಹುದು ಎನ್ನಲಾಗಿದ್ದು, ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ತಾಂತ್ರಿಕ ಸ್ಥಿತಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.