Home Blog Page 99

ನೈಸ್ ಯೋಜನೆ ವಿಚಾರದಲ್ಲಿ ಜೆಡಿಎಸ್ ಸಮರ: ‘ಸರ್ಕಾರ ಕೂಡಲೇ ವಶಪಡಿಸಿಕೊಳ್ಳಲಿ, ಟೋಲ್ ಸಂಗ್ರಹ ನಿಲ್ಲಿಸಲಿ’ ಎಂದು ಸಿಎಸ್ʼಗೆ ಮನವಿ

0

ಬೆಂಗಳೂರು: ನೈಸ್‌ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ವಶಕ್ಕೆ ಪಡೆದು, ಟೋಲ್‌ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್‌ ಶಾಸಕಾಂಗ ನಾಯಕ ಸುರೇಶ್‌ ಬಾಬು ನೇತೃತ್ವದ ಶಾಸಕರ ನಿಯೋಗ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸುರೇಶ್‌ ಬಾಬು, ನೈಸ್‌ ಯೋಜನೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂದು ಆರೋಪಿಸಿದರು. “ಯಾರು ಇವರನ್ನು ರಕ್ಷಣೆ ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದ ಅವರು, ಹೈಕೋರ್ಟ್‌ ಕೂಡ ಟೋಲ್‌ ಸಂಗ್ರಹ ಮಾಡಬಾರದು ಎಂದು ಹೇಳಿದ್ದರೂ ಇನ್ನೂ ಟೋಲ್‌ ಸಂಗ್ರಹ ಮುಂದುವರಿದಿದೆ ಎಂದು ದೂರಿದರು.

ಕೋರ್ಟ್‌ ಆದೇಶವನ್ನು ಸರ್ಕಾರವೇ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ ಸುರೇಶ್‌ ಬಾಬು, ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ. ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯಪಾಲರಿಗೂ ದೂರು ನೀಡುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ತಮ್ಮ ಮನವಿಗೆ ಸ್ಪಂದಿಸದಿದ್ದರೆ ಕೇಂದ್ರ ಸರ್ಕಾರದ ಮೊರೆ ಹೋಗುವುದಾಗಿ ಹೇಳಿದ ಅವರು, ಅಗತ್ಯವಿದ್ದರೆ ರಾಷ್ಟ್ರಪತಿಗಳಿಗೂ ದೂರು ನೀಡುವುದಾಗಿ ಎಚ್ಚರಿಸಿದರು. ಕೋರ್ಟ್‌ ಆದೇಶವನ್ನು ಸರ್ಕಾರ ಪಾಲಿಸಬೇಕು ಹಾಗೂ ನೈಸ್‌ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ವಿಧಾನ ಪರಿಷತ್‌ ಜೆಡಿಎಸ್‌ ನಾಯಕ ಭೋಜೇಗೌಡ ಮಾತನಾಡಿ, ನೈಸ್‌ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ಆದೇಶಗಳನ್ನು ನೀಡಿದೆ. ಈ ಯೋಜನೆಯಲ್ಲಿ ದೊಡ್ಡ ಅಕ್ರಮ ನಡೆದಿದೆ ಎಂದು ಕೋರ್ಟ್‌ ಹೇಳಿದೆ. ಕೂಡಲೇ ಟೋಲ್‌ ಸಂಗ್ರಹ ನಿಲ್ಲಿಸಿ, ರೈತರಿಗೆ ಬಾಕಿ ಹಣ ಪಾವತಿಸುವಂತೆ ಸರ್ಕಾರವನ್ನು ಒತ್ತಾಯಿಸಿದ

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹ: ಸೆ.1ರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ ಘೋಷಿಸಿದ ಬಿಜೆಪಿ

0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್‌ 1ರಿಂದ 10 ದಿನಗಳ ಕಾಲ ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮಾಜಿ ಸಚಿವರಾದ ಜಿ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು, ಸಿ.ಟಿ. ರವಿ ಮತ್ತು ರಾಜುಗೌಡ ಅವರ ಉಪಸ್ಥಿತಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ.

ಸೆಪ್ಟೆಂಬರ್‌ 1ರಿಂದ 10ರವರೆಗೆ ಒಟ್ಟು 10 ದಿನಗಳ ಕಾಲ ರಾಯಚೂರಿನಿಂದ ಬಳ್ಳಾರಿಯವರೆಗೆ ಸುಮಾರು 170 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಲಿಂಗಸುಗೂರು ಕ್ಷೇತ್ರದ ಗುರಗುಂಟದಿಂದ ಆರಂಭವಾಗುವ ಯಾತ್ರೆ ಲಿಂಗಸುಗೂರು, ಮಸ್ಕಿ, ಸಿಂಧನೂರು, ಶಿರಗುಪ್ಪ, ತೆಕ್ಕಲಕೋಟೆ ಹಾಗೂ ಸಿಂದಗೇರಿ ಮಾರ್ಗವಾಗಿ ಬಳ್ಳಾರಿ ತಲುಪಲಿದೆ.

ಪಾದಯಾತ್ರೆಗೆ ಜೆಡಿಎಸ್‌ ಸಂಪೂರ್ಣ ಬೆಂಬಲ ನೀಡಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಎಚ್.ಡಿ. ಕುಮಾರಸ್ವಾಮಿ ಆಗಮಿಸಲಿದ್ದು, ಬಳ್ಳಾರಿಯಲ್ಲಿ ನಡೆಯುವ ಬೃಹತ್ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ವಾಲ್ಮೀಕಿ ನಿಗಮದ ಅಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಶಿವಲಿಂಗೇಗೌಡ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಆರೋಪಿಸಿದರು. ಇಷ್ಟಾದರೂ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿ. ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯದೆ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ದೂರಿದರು.

ಅಧಿವೇಶನದಲ್ಲಿ ಸತ್ಯ ಎದುರಿಸಲಾಗದೆ ಸರ್ಕಾರ ಕಲಾಪವನ್ನು ಮೊಟಕುಗೊಳಿಸಿ ಪಲಾಯನ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದಾಗ ಇದ್ದ ಉತ್ಸಾಹ ಈಗ ಕಳೆಗುಂದಿದೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಸಿದ್ದರಾಮಯ್ಯ ಅವರ ಅಸಮಾಧಾನಗಳಲ್ಲೇ ಸರ್ಕಾರದ ಸಮಯ ಕಳೆಯುತ್ತಿದೆ ಎಂದು ಟೀಕಿಸಿದರು.

ಬಡವರ ಕಲ್ಯಾಣ ಮತ್ತು ಯುವಕರಿಗೆ ಉದ್ಯೋಗ ನೀಡುವುದಕ್ಕಿಂತ ಸರ್ಕಾರ ರಿಯಲ್ ಎಸ್ಟೇಟ್‌ ಯೋಜನೆಗಳತ್ತ ಹೆಚ್ಚು ಗಮನ ಹರಿಸುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ವಾಲ್ಮೀಕಿ ಸಮುದಾಯದ ಮೀಸಲಾತಿ, ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಸರ್ಕಾರದ ವಿವಿಧ ವೈಫಲ್ಯಗಳನ್ನು ಜನರ ಮುಂದಿಟ್ಟು ಹೋರಾಟ ನಡೆಸುವುದಾಗಿ ಅವರು ಹೇಳಿದರು.

ಕೆಪಿಎಸ್‌ಸಿ ಹಗರಣ: ಸಿಎಂ ಗೃಹಕಚೇರಿ ʻಕೃಷ್ಣಾʼಗೆ ಮುತ್ತಿಗೆ ಹಾಕಲು ವಿದ್ಯಾರ್ಥಿಗಳ ಯತ್ನ

0

ಬೆಂಗಳೂರು: ಕೆಪಿಎಸ್‌ಸಿ ಹಗರಣದಿಂದ ಪರೀಕ್ಷಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಅವರ ಅಧಿಕೃತ ಗೃಹ ಕಚೇರಿ ‘ಕೃಷ್ಣಾ’ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಪ್ರತಿಭಟನಾಕಾರರು ಕಚೇರಿ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ತಡೆದು ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಎರಡು ಪ್ರತ್ಯೇಕ ತಂಡಗಳಲ್ಲಿ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ‘ಕೃಷ್ಣಾ’ ಕಚೇರಿಯತ್ತ ತೆರಳಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗಲಿಬಿಲಿ ವಾತಾವರಣ ನಿರ್ಮಾಣವಾಯಿತು.

ಪ್ರತಿಭಟನಾಕಾರರನ್ನು ಪೊಲೀಸರು ಎಳೆದೊಯ್ದು ವಶಕ್ಕೆ ಪಡೆದಿದ್ದು, ಪ್ರತಿಭಟನೆ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸಪಟ್ಟರು.

ಎಬಿವಿಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಮತ್ತು ತಳ್ಳಾಟದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕಚೇರಿ ಮುಂಭಾಗದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಕಂಡುಬಂತು.

ಎರಡು ತಂಡಗಳಿಂದ ಮುತ್ತಿಗೆ ಯತ್ನ ನಡೆದ ಹಿನ್ನೆಲೆಯಲ್ಲಿ ‘ಕೃಷ್ಣಾ’ ಕಚೇರಿ ಸುತ್ತಮುತ್ತ ಪೊಲೀಸರು ಭದ್ರತೆ ಹೆಚ್ಚಿಸಿದ್ದರು. ಪ್ರತಿಭಟನೆಯ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಕೆಪಿಎಸ್‌ಸಿ ಹಗರಣದ ಕುರಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಬಿವಿಪಿ, ಪರೀಕ್ಷಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ತುಂಗಾ ನದಿಗೆ ಮಕ್ಕಳೊಂದಿಗೆ ಹಾರಿದ ತಾಯಿ: ಮಹಿಳೆ, ಮಗ ಪಾರು, ಇಬ್ಬರು ಹೆಣ್ಣು ಮಕ್ಕಳು ನಾಪತ್ತೆ

0

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಮಹಿಳೆ ಹಾಗೂ 11 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, 6 ವರ್ಷದ ಸಾನ್ವಿಕಾ ಮತ್ತು 4 ವರ್ಷದ ತನ್ವಿಕಾ ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಇಬ್ಬರು ಬಾಲಕಿಯರಿಗಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸೂರು ಗ್ರಾಮದ ಭವಾನಿ ಸೋಮವಾರ ಮಧ್ಯಾಹ್ನ ಬಸ್ ಮೂಲಕ ಶಿವಮೊಗ್ಗ ನಗರಕ್ಕೆ ಬಂದಿದ್ದರು. ಬಳಿಕ ಚಿಕ್ಕಲ್ ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದ ಬಳಿ ತೆರಳಿದ್ದಾರೆ ಎನ್ನಲಾಗಿದೆ.

ಸೋಮವಾರ ಸಂಜೆ ಸುಮಾರು 7.30ರ ವೇಳೆಗೆ ರೈಲ್ವೆ ಸೇತುವೆ ಸಮೀಪದ ತುಂಗಾ ನದಿಗೆ ಮಹಿಳೆ ಮಕ್ಕಳೊಂದಿಗೆ ತೆರಳಿದ್ದಾರೆ. ಪೊಲೀಸರ ಪ್ರಕಾರ, ಮೊದಲು ಇಬ್ಬರು ಹೆಣ್ಣುಮಕ್ಕಳನ್ನು ನದಿಗೆ ತಳ್ಳಿ, ಬಳಿಕ ತಮ್ಮ 11 ತಿಂಗಳ ಮಗನೊಂದಿಗೆ ನದಿಗೆ ಹಾರಿದ್ದಾರೆ.

ಮಹಿಳೆ ಹಾಗೂ ಮಗ ನದಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯ ಯುವಕರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಹೊರತೆಗೆದಿದ್ದಾರೆ. ಬಳಿಕ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ.

ಇತ್ತ ನಾಪತ್ತೆಯಾಗಿರುವ ಸಾನ್ವಿಕಾ ಮತ್ತು ತನ್ವಿಕಾ ಅವರಿಗಾಗಿ ಮಂಗಳವಾರ ಬೆಳಗ್ಗೆಯಿಂದಲೇ ನದಿಯಲ್ಲಿ ಶೋಧ ನಡೆಸಲಾಗುತ್ತಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯ ಹಿನ್ನೆಲೆ ಕೌಟುಂಬಿಕ ಕಲಹ ಎನ್ನಲಾಗಿದ್ದು, ಮಹಿಳೆ ಈ ನಿರ್ಧಾರ ಕೈಗೊಳ್ಳಲು ಕಾರಣವಾದ ನಿಖರ ಸಂಗತಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಇಬ್ಬರು ಮಕ್ಕಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

ಎಥೆನಾಲ್‌ ಗಣಿತವೇ ಸರಿಯಿಲ್ಲ: ಕೇಂದ್ರದ ಅಕ್ಕಿ ಮಾರಾಟ ನೀತಿ ವಿರುದ್ಧ ಪ್ರಿಯಾಂಕ್ ಖರ್ಗೆ ವ್ಯಂಗ್ಯ

0

ಬೆಂಗಳೂರು: ಆಹಾರ ಭದ್ರತೆಗಾಗಿ ತೆರಿಗೆದಾರರ ಹಣದಲ್ಲಿ ಭತ್ತ ಖರೀದಿಸಿ, ಸಂಗ್ರಹಿಸಿ, ಸಾಗಣೆ ವೆಚ್ಚ ಭರಿಸಿದ ಬಳಿಕ ಭಾರತೀಯ ಆಹಾರ ನಿಗಮದ ಮೂಲಕ ಎಥೆನಾಲ್ ಉತ್ಪಾದಕರಿಗೆ ಸ್ವಾಧೀನ ವೆಚ್ಚಕ್ಕಿಂತ ಸುಮಾರು ಶೇ.40ರಷ್ಟು ಕಡಿಮೆ ದರದಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಭಾರತದ ಎಥೆನಾಲ್ ಗಣಿತವೇ ಸರಿಯಾಗಿ ಹೊಂದಿಕೆಯಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಆಹಾರ ಭದ್ರತೆಗಾಗಿ ಸರ್ಕಾರ ರೈತರಿಂದ ಭತ್ತ ಖರೀದಿಸುತ್ತದೆ, ಇದಕ್ಕೆ ತೆರಿಗೆದಾರರ ಹಣ ಬಳಕೆಯಾಗುತ್ತದೆ ಎಂದ ಅವರು, ಖರೀದಿಸಿದ ಧಾನ್ಯದ ಸಂಗ್ರಹಣೆ ಮತ್ತು ಸಾಗಣೆಯಿಂದ ಸರ್ಕಾರದ ಮೇಲೆ ಮತ್ತಷ್ಟು ವೆಚ್ಚದ ಹೊರೆ ಬೀಳುತ್ತದೆ ಎಂದು ವಿವರಿಸಿದ್ದಾರೆ. ಇಷ್ಟೆಲ್ಲ ವೆಚ್ಚದ ಬಳಿಕ ಅದೇ ಅಕ್ಕಿಯನ್ನು ಎಥೆನಾಲ್ ಉತ್ಪಾದಕರಿಗೆ ಶೇ.40ರಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವುದು ಯಾವ ರೀತಿಯ ಆರ್ಥಿಕ ನೀತಿ ಎಂದು ಪ್ರಶ್ನಿಸಿದ್ದಾರೆ.

ಖರೀದಿ, ಸಂಗ್ರಹಣೆ, ಸಾಗಣೆಗೆ ಸರ್ಕಾರ ವೆಚ್ಚ ಮಾಡಿ, ಬಳಿಕ ಅದೇ ಧಾನ್ಯವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಈ ವ್ಯವಸ್ಥೆಯಿಂದ ನಿಜವಾಗಿ ಲಾಭ ಪಡೆಯುತ್ತಿರುವವರು ಯಾರು ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ತುರ್ತಾಗಿ ಸೃಷ್ಟಿಸಲಾದ ಎಥೆನಾಲ್ ಉತ್ಪಾದನಾ ಸಾಮರ್ಥ್ಯಕ್ಕೆ ಕಚ್ಚಾ ವಸ್ತು ಒದಗಿಸುವ ಉದ್ದೇಶದಿಂದ ಆಹಾರ ಧಾನ್ಯವನ್ನು ದೊಡ್ಡ ಪ್ರಮಾಣದಲ್ಲಿ ಎಥೆನಾಲ್ ಉತ್ಪಾದನೆಗೆ ತಿರುಗಿಸಲಾಗುತ್ತಿದೆಯೇ ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ.

ಸರ್ಕಾರವೇ ಎಥೆನಾಲ್ ಉತ್ಪಾದಕರಿಂದ ಹೆಚ್ಚಿನ ಬೆಲೆಗೆ ಎಥೆನಾಲ್ ಖರೀದಿಸಿ ಪೆಟ್ರೋಲ್‌ನಲ್ಲಿ ಮಿಶ್ರಣ ಮಾಡುತ್ತಿರುವ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಬಳಿಕ ಅದೇ ಉದ್ಯಮದಿಂದ ಹೆಚ್ಚಿನ ಬೆಲೆಗೆ ಎಥೆನಾಲ್ ಖರೀದಿಸುವುದರಿಂದ ಸಾಮಾನ್ಯ ಗ್ರಾಹಕನಿಗೆ ಆಗುವ ಲಾಭವೇನು ಎಂದು ಪ್ರಶ್ನಿಸಿದ್ದಾರೆ.

ಪತ್ನಿಯನ್ನು ಮನೆಗೆಲಸಕ್ಕೆ, ಪೋಷಕರ ಸೇವೆಗೆ ಬಲವಂತ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್

0

ಬೆಂಗಳೂರು: ಪತ್ನಿಯನ್ನು ಕೇವಲ ಮನೆಗೆಲಸ ಮಾಡುವಂತೆ ಅಥವಾ ಪತಿಯ ಪೋಷಕರನ್ನು ನೋಡಿಕೊಳ್ಳುವಂತೆ ಒತ್ತಾಯಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ವಿವಾಹವು ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯ, ಇಚ್ಛೆ ಹಾಗೂ ಹಕ್ಕುಗಳನ್ನು ನಿಯಂತ್ರಿಸುವ ಪರವಾನಗಿ ಅಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪತ್ನಿ ಹಾಗೂ ಮಗಳಿಗೆ ಮಾಸಿಕ ₹9 ಸಾವಿರ ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಿಲ್ಲಾಕೂರ್‌ ಸುಮಲತಾ ಅವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ಪತ್ನಿಯಾದವಳು ಕೇವಲ ಮನೆಗೆಲಸ ಮಾಡುತ್ತಲೇ ಇರಬೇಕು ಎಂದು ನಿರೀಕ್ಷಿಸುವುದು ಸರಿಯಲ್ಲ. ವೃದ್ಧ ಪೋಷಕರನ್ನು ನೋಡಿಕೊಳ್ಳುವ ಪ್ರಾಥಮಿಕ ಜವಾಬ್ದಾರಿ ಅವರ ಮಗ ಅಥವಾ ಮಗಳಿಗೆ ಸೇರಿದ್ದೇ ಹೊರತು, ಅಳಿಯ ಅಥವಾ ಸೊಸೆಯ ಮೇಲಲ್ಲ ಎಂದು ನ್ಯಾಯಾಲಯ ಹೇಳಿದೆ.

ಮಹಿಳೆಯೊಬ್ಬಳು ತನ್ನ ತವರು ಮನೆಗೆ ತೆರಳಲು ಗಂಡನ ಮನೆಯಲ್ಲಿರುವ ಪ್ರತಿಯೊಬ್ಬರ ಅನುಮತಿ ಪಡೆಯಬೇಕು ಎಂದು ನಿರೀಕ್ಷಿಸುವುದು ಸರಿಯಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ವಿವಾಹವು ಮತ್ತೊಬ್ಬ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಇಚ್ಛೆಯನ್ನು ನಿಯಂತ್ರಿಸಲು, ಆಜ್ಞಾಪಿಸಲು ಅಥವಾ ಪ್ರಾಬಲ್ಯ ಸಾಧಿಸಲು ನೀಡುವ ಪರವಾನಗಿ ಅಲ್ಲ ಎಂದು ನ್ಯಾಯಾಲಯ ಖಡಕ್‌ ಆಗಿ ಹೇಳಿದೆ.

ಮಹಿಳೆಗೆ ತನ್ನ ಇಚ್ಛೆಯಂತೆ ತವರು ಮನೆಗೆ ಭೇಟಿ ನೀಡುವ ಹಕ್ಕಿದೆ. ಅದಕ್ಕಾಗಿ ಗಂಡನ ಮನೆಯ ಪ್ರತಿಯೊಬ್ಬರ ಅನುಮತಿ ಪಡೆಯಬೇಕು ಎಂಬ ನಿಯಮವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಮಹಿಳೆಗೆ ತನ್ನ ವೃತ್ತಿಜೀವನ ಹಾಗೂ ಆರ್ಥಿಕತೆಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಪೂರ್ಣ ಹಕ್ಕಿದೆ. ಪತ್ನಿಯು ತನ್ನ ಇಚ್ಛೆ ಮತ್ತು ನಿರೀಕ್ಷೆಗಳಿಗೆ ಅನುಗುಣವಾಗಿ ಮಾತ್ರ ಬದುಕಬೇಕು ಎಂದು ಪತಿ ಒತ್ತಾಯಿಸುವಂತಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಪತ್ನಿಯ ನಿಷ್ಠೆಯನ್ನು ಕೇವಲ ಆಕೆ ಎಷ್ಟು ವಿಧೇಯಳಾಗಿದ್ದಾಳೆ ಎಂಬ ಆಧಾರದ ಮೇಲೆ ಅಳೆಯಲು ಸಾಧ್ಯವಿಲ್ಲ ಎಂದೂ ಪೀಠ ಅಭಿಪ್ರಾಯಪಟ್ಟಿದೆ.

ಕೂಲಿ ಕೆಲಸ ಮಾಡುತ್ತಿದ್ದ ಪತಿ ವಿಚಾರಣೆ ವೇಳೆ, ಪತ್ನಿ ತನ್ನ ಪೋಷಕರನ್ನು ನೋಡಿಕೊಳ್ಳುತ್ತಿರಲಿಲ್ಲ, ಸರಿಯಾಗಿ ಮನೆಗೆಲಸ ಮಾಡುತ್ತಿರಲಿಲ್ಲ ಹಾಗೂ ತನ್ನ ಅನುಮತಿ ಪಡೆಯದೆ ಹಲವು ಬಾರಿ ತವರು ಮನೆಗೆ ಹೋಗಿದ್ದಳು ಎಂದು ಆರೋಪಿಸಿದ್ದ.

ಇದಕ್ಕೆ ಪ್ರತಿಯಾಗಿ ಪತ್ನಿ, ಪತಿಯ ಜೂಜು ಹಾಗೂ ಮದ್ಯಪಾನದ ಚಟದ ಜೊತೆಗೆ ಆತನ ಕುಟುಂಬಸ್ಥರಿಂದ ದೈಹಿಕ ಮತ್ತು ಮಾನಸಿಕ ಹಿಂಸೆ ಅನುಭವಿಸಿದ್ದಾಗಿ ತಿಳಿಸಿದ್ದಳು.

ಪತಿಯ ವಾದವನ್ನು ತಳ್ಳಿಹಾಕಿದ ಹೈಕೋರ್ಟ್‌, ಆತನ ನಡವಳಿಕೆಯು ಮಾಲೀಕ ಮತ್ತು ನೌಕರನ ನಡುವಿನ ಸಂಬಂಧದಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಅಂತಿಮವಾಗಿ, ಪತ್ನಿ ಹಾಗೂ ಮಗಳಿಗೆ ಮಾಸಿಕ ₹9 ಸಾವಿರ ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

ಜೈಲಿನ ಬದಲು ಆಸ್ಪತ್ರೆಯಲ್ಲಿ ವಿಐಪಿ ಸೌಲಭ್ಯ?: ನ್ಯಾಯಾಧೀಶರ ದಾಳಿಯಲ್ಲಿ ಕರ್ತವ್ಯಲೋಪ ಬಯಲು

0

ಮಂಡ್ಯ: ಲೋಕಾಯುಕ್ತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅಧಿಕಾರಿಗೆ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ಚಂದ್ರಶೇಖರ್ ನೇತೃತ್ವದ ತಂಡ ನಡೆಸಿದ ದಿಢೀರ್ ತಪಾಸಣೆಯಲ್ಲಿ ಜೈಲಾಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಯ ಕಾರ್ಯವೈಖರಿ ಪ್ರಶ್ನಾರ್ಹವಾಗಿರುವುದು ಬೆಳಕಿಗೆ ಬಂದಿದೆ.

ಶ್ರೀರಂಗಪಟ್ಟಣದ ಎಡಿಎಲ್‌ಆರ್ ಮಹಮದ್ ಹುಸೇನ್ ಅಕ್ರಮ ಖಾತೆ ಸೃಷ್ಟಿ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದರು. ನಿಯಮದಂತೆ ಜೈಲಿನಲ್ಲಿರಬೇಕಿದ್ದ ಅವರನ್ನು ಅನಾರೋಗ್ಯದ ಕಾರಣ ನೀಡಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಸಾಮಾನ್ಯ ವಾರ್ಡ್ ಬದಲಿಗೆ ಆಸ್ಪತ್ರೆಯ ಸ್ಪೆಷಲ್ ರೂಮ್‌ನಲ್ಲಿ ಇರಿಸಲಾಗಿದ್ದು, ಆರೋಪಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ತಂಡ ಪರಿಶೀಲನೆ ನಡೆಸಿದೆ.

ಪರಿಶೀಲನೆ ವೇಳೆ ವೈದ್ಯಾಧಿಕಾರಿಯನ್ನು ವಿಚಾರಿಸಿದಾಗ, ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸುವಷ್ಟು ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂಬ ಮಾಹಿತಿ ದೊರೆತಿದೆ ಎನ್ನಲಾಗಿದೆ.

ಇದಕ್ಕಿಂತ ಗಂಭೀರವಾಗಿ, ಸ್ಪೆಷಲ್ ರೂಮ್‌ನಲ್ಲಿದ್ದ ಮಹಮದ್ ಹುಸೇನ್ ಜೊತೆ ಯುವತಿಯೊಬ್ಬಳು ಪತ್ತೆಯಾಗಿದ್ದಾಳೆ. ಆಕೆ ತನ್ನನ್ನು ಆರೋಪಿಯ ಗೆಳತಿ ಎಂದು ಪರಿಚಯಿಸಿಕೊಂಡಿದ್ದಾಳೆ ಎನ್ನಲಾಗಿದೆ.

ನ್ಯಾಯಾಲಯದ ಅನುಮತಿ ಪಡೆಯದೆ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿರುವುದೇಕೆ ಎಂದು ನ್ಯಾಯಾಧೀಶರು ಜೈಲಾಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಜೈಲಿನ ವೈದ್ಯರ ಸಲಹೆಯ ಮೇರೆಗೆ ದಾಖಲಿಸಲಾಗಿದ್ದು, ನಂತರ ನ್ಯಾಯಾಲಯಕ್ಕೆ ಮಾಹಿತಿ ನೀಡುವುದಾಗಿ ಅಧಿಕಾರಿಗಳು ಉತ್ತರಿಸಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಅಸಮಾಧಾನಗೊಂಡ ನ್ಯಾಯಾಧೀಶರು, ಜೈಲಾಧಿಕಾರಿಗಳು ಹಾಗೂ ಮಿಮ್ಸ್ ವೈದ್ಯಾಧಿಕಾರಿಗಳ ನಡೆ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ನಿಯಮ ಉಲ್ಲಂಘನೆ ಅಥವಾ ಕರ್ತವ್ಯಲೋಪ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಲೋಕಾಯುಕ್ತ ಪ್ರಕರಣದಲ್ಲಿ ಬಂಧನಕ್ಕೊಳಗಾದ ಅಧಿಕಾರಿಗೆ ಜೈಲಿನ ಬದಲು ಆಸ್ಪತ್ರೆಯ ಸ್ಪೆಷಲ್ ರೂಮ್‌ನಲ್ಲಿ ಸಿಕ್ಕಿದ್ದ ಈ ‘ವಿಶೇಷ ಸೌಲಭ್ಯ’ ಇದೀಗ ತನಿಖೆಯ ಕೇಂದ್ರಬಿಂದುವಾಗಿದೆ.

ದತ್ತೂರಿ ಹಣ್ಣು-ಬೀಜ ಮಾರಾಟ: ಅಮೆಜಾನ್, ಬಿಗ್ʼಬಾಸ್ಕೆಟ್, ಸ್ವಿಗ್ಗಿ ಪರವಾನಗಿ ಅಮಾನತಿಗೆ ಶಿಫಾರಸು

0

ಬೆಂಗಳೂರು: ವಿಷಕಾರಿ ದತ್ತೂರಿ (ಧಾತುರಾ) ಹಣ್ಣುಗಳು ಮತ್ತು ಬೀಜಗಳನ್ನು ಮಾನವ ಬಳಕೆಗಾಗಿ ತಮ್ಮ ವೇದಿಕೆಗಳಲ್ಲಿ ಪಟ್ಟಿ ಮಾಡಿ ಮಾರಾಟ ಮಾಡಿದ್ದಕ್ಕಾಗಿ ಅಮೆಜಾನ್, ಬಿಗ್‌ಬಾಸ್ಕೆಟ್ ಮತ್ತು ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿಗಳನ್ನು ಅಮಾನತುಗೊಳಿಸಲು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಶಿಫಾರಸು ಮಾಡಿದೆ.

ಆನ್‌ಲೈನ್ ವೇದಿಕೆಗಳಲ್ಲಿ ತೀವ್ರ ವಿಷಯುಕ್ತ ದತ್ತೂರಿ ಹಣ್ಣು ಹಾಗೂ ಬೀಜಗಳ ಮಾರಾಟ ಪತ್ತೆಯಾಗಿದ್ದು, ಪ್ರಾಣಾಪಾಯ ಉಂಟುಮಾಡಬಲ್ಲ ಈ ಉತ್ಪನ್ನಗಳನ್ನು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮುಕ್ತವಾಗಿ ಮಾರಾಟ ಮಾಡುತ್ತಿರುವುದನ್ನು ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಅಮೆಜಾನ್ ಸೇರಿದಂತೆ ಹಲವು ಪ್ರಮುಖ ಇ-ಕಾಮರ್ಸ್ ಸಂಸ್ಥೆಗಳಲ್ಲಿ ದತ್ತೂರಿ ಹಣ್ಣು-ಬೀಜಗಳ ಮಾರಾಟ ನಡೆಯುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. FSSAI ಮತ್ತು FDA ನಿಯಮಗಳ ಅನುಮತಿಯಿಲ್ಲದೆ ಅಪಾಯಕಾರಿ ದತ್ತೂರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಎಫ್‌ಡಿಎ ಆಯುಕ್ತರು ಅಮೆಜಾನ್ ಸೇರಿದಂತೆ ಹಲವು ಇ-ಕಾಮರ್ಸ್ ವೇದಿಕೆಗಳಿಗೆ ನೋಟಿಸ್ ಜಾರಿಗೊಳಿಸಿದ್ದರು. ನೋಟಿಸ್ ಬೆನ್ನಲ್ಲೇ ಅಮೆಜಾನ್ ಪ್ರತಿನಿಧಿಗಳು ಇಲಾಖೆಯ ಅಧಿಕಾರಿಗಳ ಮುಂದೆ ಹಾಜರಾಗಿ ದಾಖಲೆಗಳ ಪರಿಶೀಲನೆಗೆ ಒಳಪಟ್ಟಿದ್ದಾರೆ.

“ಇನ್ನು ಮೊದಲಿನಷ್ಟು ಕೆಲಸ ಮಾಡಲು ಸಾಧ್ಯವಿಲ್ಲ” ಎಂದ ಗಡ್ಕರಿ: ಹೊಸ ಪೀಳಿಗೆಗೆ ಜವಾಬ್ದಾರಿ ಹಸ್ತಾಂತರದ ಸುಳಿವು?

0

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ “ಇನ್ನು ಮೊದಲಿನಂತೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ, ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ವಹಿಸುವ ಸಮಯ ಬಂದಿದೆ” ಎಂಬ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸಚಿವ ಸಂಪುಟ ಪುನಾರಚನೆಯ ಕುರಿತು ವದಂತಿಗಳು ಬಲವಾಗಿರುವ ಸಂದರ್ಭದಲ್ಲೇ ಗಡ್ಕರಿ ಈ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಕೆಲಸಗಳಲ್ಲಿ ತಮ್ಮ ಪಾಲ್ಗೊಳ್ಳುವಿಕೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಕಳೆದ 30 ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುತ್ತಿದ್ದು, ಈ ಅವಧಿಯಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದೇನೆ ಹಾಗೂ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

“ಈಗ ಮೊದಲಿನಷ್ಟು ಕೆಲಸ ಮಾಡಲು ನನ್ನಿಂದ ಸಾಧ್ಯವಿಲ್ಲ. ಹೊಸ ಪೀಳಿಗೆ ಬಂದಿದೆ. ಅವರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು. ಹಳೆಯ ತಲೆಮಾರು ಹೊಸ ತಲೆಮಾರಿಗೆ ಮಾರ್ಗದರ್ಶನ ನೀಡುತ್ತಿದೆ” ಎಂದು ಗಡ್ಕರಿ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳ ವ್ಯಾಪ್ತಿ ಮತ್ತಷ್ಟು ವಿಸ್ತರಿಸಬೇಕಿದೆ ಎಂದಿರುವ ಅವರು, ಮಹಾರಾಷ್ಟ್ರದ ಯಾವುದೇ ಬುಡಕಟ್ಟು ಗ್ರಾಮ ವಿದ್ಯುತ್ ಸಂಪರ್ಕದಿಂದ ವಂಚಿತವಾಗಬಾರದು ಹಾಗೂ ರಾಜ್ಯಾದ್ಯಂತ ಅಭಿವೃದ್ಧಿ ಸ್ಪಷ್ಟವಾಗಿ ಗೋಚರಿಸುವಂತೆ ಮಾಡುವುದು ತಮ್ಮ ಪ್ರಮುಖ ಗುರಿ ಎಂದು ಹೇಳಿದ್ದಾರೆ.

ಗಡ್ಕರಿ ಅವರ ಈ ಹೇಳಿಕೆ ಬಿಜೆಪಿಯ ಇತ್ತೀಚಿನ ಸಂಘಟನಾ ಬದಲಾವಣೆಗಳೊಂದಿಗೆ ತಾಳೆಯಾಗುತ್ತಿರುವುದು ಗಮನಾರ್ಹವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇತೃತ್ವದಲ್ಲಿ ಪಕ್ಷದ ರಾಷ್ಟ್ರೀಯ ತಂಡದಲ್ಲಿ ದೊಡ್ಡ ಮಟ್ಟದ ಬದಲಾವಣೆ ನಡೆದಿದ್ದು, 65 ಸದಸ್ಯರ ತಂಡದಲ್ಲಿ 51 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಮತ್ತು ಮಾಜಿ ಆರ್‌ಎಸ್‌ಎಸ್ ಮುಖಂಡ ರಾಮ್ ಮಾಧವ್ ಸೇರಿದಂತೆ 13 ರಾಷ್ಟ್ರೀಯ ಉಪಾಧ್ಯಕ್ಷರನ್ನು ನೇಮಿಸಲಾಗಿದೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಎಂಟು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ನೇಮಕವೂ ನಡೆದಿದೆ.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಸಂಘಟನಾ ಪುನಾರಚನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲೂ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಗಡ್ಕರಿ ಅವರ ಹೇಳಿಕೆ ಸಂಪುಟ ಪುನಾರಚನೆಗೂ ಸಂಬಂಧಿಸಿದ ರಾಜಕೀಯ ಅರ್ಥಗಳನ್ನು ಪಡೆದುಕೊಂಡಿದೆ.

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

0

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಶ್ರೀಶೈಲದ ವಡ್ಡೇರಾ ಪ್ರದೇಶದ ಖಾಸಗಿ ಹೋಟೆಲ್‌ನಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ಸುಧಾಕರ್ (36), ಗೋಗುಳ ಆದಿಲಕ್ಷ್ಮಿ (50), ಮಲ್ಲೇಶ್ವರಿ (45), ಶ್ರೀದೇವಿ (33) ಹಾಗೂ ಮಣಿಕಂಠ (15) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಬಟ್ಟಲಪಲ್ಲಿ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ದಿನ ರೂಮ್‌ನಿಂದ ಹೊರಬಾರದ ಕುಟುಂಬ

ಜುಲೈ 28ರಂದು ಕುಟುಂಬದ ಸದಸ್ಯರು ಆಟೋದಲ್ಲಿ ಶ್ರೀಶೈಲಕ್ಕೆ ಆಗಮಿಸಿ, ವಡ್ಡೇರಾದ ಖಾಸಗಿ ಹೋಟೆಲ್‌ನಲ್ಲಿ ರೂಮ್ ಸಂಖ್ಯೆ 11ನ್ನು ಪಡೆದುಕೊಂಡಿದ್ದರು. ರೂಮ್ ಪಡೆದ ಬಳಿಕ ಸತತ ಮೂರು ದಿನಗಳಾದರೂ ಯಾರೊಬ್ಬರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿಗೆ ಅನುಮಾನ ಮೂಡಿದೆ.

ರೂಮ್‌ನ ಬಳಿ ಪರಿಶೀಲಿಸಿದಾಗ ದುರ್ವಾಸನೆ ಬರುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಸ್ನಾನಗೃಹದಲ್ಲಿ ಐವರ ಮೃತದೇಹ

ಮಾಹಿತಿ ಪಡೆದ ಪೊಲೀಸರು ಹೋಟೆಲ್‌ಗೆ ತೆರಳಿ ಬಾಗಿಲು ತೆರೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ನಾನಗೃಹದಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರ ಮೃತದೇಹಗಳು ಪತ್ತೆಯಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಆರ್ಥಿಕ ಸಮಸ್ಯೆಯೇ ಕುಟುಂಬ ಈ ನಿರ್ಧಾರ ಕೈಗೊಳ್ಳಲು ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕುಟುಂಬದ ಹಿನ್ನೆಲೆ, ಆರ್ಥಿಕ ಪರಿಸ್ಥಿತಿ ಹಾಗೂ ಸಾವಿಗೆ ಕಾರಣವಾದ ನಿಖರ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.