ವಿಜಯಸಾಕ್ಷಿ ಸುದ್ದಿ, ಗದಗ: ವರ್ಷ ಪೂರ್ತಿ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರ ಒತ್ತಡ ನಿವಾರಣೆಗೆ ಜ. 3ರಂದು ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಹೇಳಿದರು.
ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿಯಿದೆ. ಕಾರಣ, ಪ್ರಸ್ತುತ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಸಾಕಷ್ಟು ಒತ್ತಡವಿರುತ್ತದೆ. ಹಾಗಾಗಿ ವರ್ಷ ಪೂರ್ತಿ ಕೆಲಸದ ಒತ್ತಡದಲ್ಲಿರುವ ಸರ್ಕಾರಿ ನೌಕರರು ಕೆಲಸದ ಹೊರತಾಗಿ ರಾಜ್ಯ ಸರ್ಕಾರಿ ನೌಕರ ಸಂಘದ ವತಿಯಿಂದ ಏರ್ಪಡಿಸಿರುವ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ತಿಳಿಸಿದರು.
ಈಗಾಗಲೇ ಕ್ರೀಡಾಕೂಟಕ್ಕೆ 1500ಕ್ಕೂ ಹೆಚ್ಚು ನೌಕರರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ನೌಕರರಿಗೂ ಊಟದ ವ್ಯವಸ್ಥೆ ಮಾಡಲಾಗಿದ್ದು, ಉತ್ಸಾಹದಿಂದ ನೌಕರರು ಭಾಗವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ 2026ರ ವಿಶೇಷ ಕ್ಯಾಲೆಂಡರ್ ಬಿಡುಗಡೆಗೊಳಿಸಿ, ಜಿಲ್ಲೆಯಲ್ಲಿರುವ 9600 ಸರ್ಕಾರಿ ನೌಕರರಿಗೂ ಈ ವರ್ಷದ ಕ್ಯಾಲೆಂಡರ್ ತಲುಪಿಸಿ ಸಂಘ ಸದಾ ನೌಕರರ ನೋವು, ನಲಿವುಗಳಿಗೆ ಸ್ಪಂದಿಸುವುದೆಂದು ಭರವಸೆ ನೀಡಲಾಗವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಂ.ವಾಯ್. ಮಲಕಶೆಟ್ಟಿ, ಮಹಾಂತೇಶ ನಿಟ್ಟಾಲಿ, ಡಿ.ಎಸ್. ತಳವಾರ, ಸಿದ್ಧಪ್ಪ ಲಿಂಗದಾಳ, ದೇವಪ್ಪ ದುರಗಣ್ಣವರ, ಹನಮಂತರಾಜು ಕಂಟಿಗೊರ್ಣಣನವರ, ಆತ್ ಗಾಡಗೋಳಿ ಮುಂತಾದವರು ಹಾಜರಿದ್ದರು.
ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರವಿ ಗುಂಜಿಕರ ಮಾತನಾಡಿ, ಸರ್ಕಾರಿ ನೌಕರರ ಸಂಘ ಏರ್ಪಡಿಸುವ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಹಾಜರಾಗಿ ನಿತ್ಯದ ಒತ್ತಡದಿಂದ ಹೊರಬರಬೇಕು ಎಂದು ಹೇಳಿದರು.



