ಉಡುಪಿ: ಆಡದೇ ಇರುವ ಮಾತಿಗೆ ಸಮಾಜದಲ್ಲಿ ಜನ ದಂಗೆ ಎದ್ದ ರೀತಿ ವರ್ತಿಸುತ್ತಿದ್ದಾರೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು. ಸಂತರು ಸೇರಿ ಲಿಖಿತ ರೂಪದ ನಿರ್ಣಯ ಕೈಗೊಂಡಿದ್ದೆವು.
ರಾಜ್ಯಪಾಲರಿಗೆ ಕೊಟ್ಟ ಪ್ರತಿಯಲ್ಲಿ ಸಂವಿಧಾನ ಕುರಿತ ಯಾವುದೇ ಮಾತು ಉಲ್ಲೇಖ ಇಲ್ಲ. ಆಡದೇ ಇರುವ ಮಾತಿಗೆ ಸಮಾಜದಲ್ಲಿ ಜನ ದಂಗೆ ಎದ್ದ ರೀತಿ ವರ್ತಿಸುತ್ತಿದ್ದಾರೆ. ಸುಳ್ಳು ಆರೋಪ ಹೊರಿಸಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಮ್ಮನ್ನು ಪ್ರತಿಭಟಿಸುವ ಮತ್ತು ಖಂಡಿಸುವ ಕೆಲಸವಾಗುತ್ತಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳ ಹೇಳಿಕೆಯಿಂದ ಇಷ್ಟೆಲ್ಲ ಆಗಿದೆ. ನಿರಾಧಾರ ಆರೋಪ ಯುಕ್ತವಲ್ಲ. ಆ ಕುರಿತ ವಿಡಿಯೋ ಕ್ಲಿಪ್ಪಿಂಗ್ ಹಾಗೂ ಲಿಖಿತ ರೂಪದ ಪತ್ರವನ್ನು ಪರಿಶೀಲಿಸಬಹುದು. ಸಿಎಂ ಸಿದ್ದರಾಮಯ್ಯ ಈ ಕುರಿತು ಪರಿಶೀಲಿಸಿ ಮಾತನಾಡಬೇಕಿತ್ತು ಎಂದು ಅವರು ಹೇಳಿದರು.