ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದರ ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಹಗರಿಬೊಮ್ಮನಹಳ್ಳಿ ಗೃಹರಕ್ಷಕ ದಳ ಘಟಕದ ಅಧಿಕಾರಿ ಎಸ್. ಅನ್ವರ್ ಭಾಷಾ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಗರಿಬೊಮ್ಮನಹಳ್ಳಿ ಗೃಹರಕ್ಷಕ ದಳದ ವತಿಯಿಂದ ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಉಳಿಸುವ ಉದ್ದೇಶದಿಂದ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಸಸಿ ನೆಡುವ ಮೂಲಕ ಪರಿಸರದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಮುಖ್ಯಸ್ಥರು ಶರಣಪ್ಪ, ಹನುಮಂತಪ್ಪ, ಕೆ. ಮಂಜಪ್ಪ, ಜಂಬಣ್ಣ, ಕೊಟ್ರಯ್ಯ, ಗೌಡಪ್ಪ, ಮಂಜುನಾಥ, ವೆಂಕಟೇಶ್ ಪತ್ತಾರ್, ಜಯರಾಜ್ ನಾಯ್ಕ, ಕೊಟ್ರೇಶ್, ಹನುಮಂತಪ್ಪ ಚಿಂತರಪಳ್ಳಿ ಸೇರಿದಂತೆ ಸಿಬ್ಬಂದಿ ಭಾಗವಹಿಸಿ ಸಸಿ ನೆಡುವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.



