ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಸ್ಥಳೀಯ ಕೆಎಲ್ಇ ಶಾಲೆಯಲ್ಲಿ ವಿದ್ಯಾರ್ಥಿಗಳೇ ಕೇಂದ್ರಬಿಂದುವಾಗಿ ಅರ್ಥಪೂರ್ಣವಾಗಿ ಆಚರಿಸಿದರು. ಭಾಷಣ, ನಾಟಕ, ನೃತ್ಯ ಹಾಗೂ ಜಾಗೃತಿ ಗೀತೆಗಳ ಮೂಲಕ ಆರೋಗ್ಯದ ಮಹತ್ವವನ್ನು ಸಾರಿದ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ನಗರದ ಹಿರಿಯ ವೈದ್ಯ ಡಾ. ರಾಜಶೇಖರ ಪವಾಡಶೆಟ್ಟರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವುದು ಕಳವಳಕಾರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಸಲಹೆ ನೀಡಿದರು.
ವೈದ್ಯರು ತಮ್ಮ ಜ್ಞಾನ, ಕೌಶಲ್ಯ ಮತ್ತು ಮಾನವೀಯತೆಯ ಮೂಲಕ ಸಮಾಜದ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳು ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಅವರ ಸೇವೆ ಅತ್ಯಂತ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಂಶುಪಾಲೆ ಕಲ್ಪನಾ ಚಚಡಿ ಮಾತನಾಡಿ, ಪ್ರಕೃತಿಯು ನೀಡಿರುವ ಗಾಳಿ, ನೀರು, ಬೆಳಕು ಹಾಗೂ ಆಹಾರವೇ ಆರೋಗ್ಯದ ಮೂಲ. ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ವೈದ್ಯರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳು “ಆರೋಗ್ಯವೇ ಭಾಗ್ಯ” ಎಂಬ ಜಾಗೃತಿ ನಾಟಕ ಪ್ರದರ್ಶಿಸಿ ಆರೋಗ್ಯಕರ ಜೀವನಶೈಲಿಯ ಸಂದೇಶ ನೀಡಿದರು. 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳು ದೈನಂದಿನ ಬದುಕಿನಲ್ಲಿ ಆರೋಗ್ಯದ ಕಾಳಜಿ ಕುರಿತು ಅಣಕು ಪ್ರದರ್ಶನ ನಡೆಸಿ ಮೆಚ್ಚುಗೆ ಗಳಿಸಿದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕ ವಿರೇಂದ್ರ ಗಂಗಲ್ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಸುರೇಖಾ ಕದಂ, ಶಿಕ್ಷಕರಾದ ಮಹಾಂತೇಶ ಕಟಗಿ ಹಾಗೂ ಶಿಕ್ಷಕಿಯರಾದ ಸೀತಾ ನಾಮಧಾರಿ, ವಿಜಯಾ ಕಬ್ಬಕ್ಕಿ, ಸೋನಲ್ ಶಹಾ, ಸೋನಿಯಾ ಉಣಚಗೇರಿ, ನಮ್ರತಾ, ಸಮ್ರಿನ್ ತಾಜ್, ಬೃಂದಾ ಕೆ. ಮತ್ತು ಪ್ರೇಮಾಂಜಲಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ವಂದನಾರ್ಪಣೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.



