ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ.
ಈ ವೇಳೆ ಪ್ರಕರಣದ ಗಂಭೀರತೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ಇಂತಹ ಕೃತ್ಯಗಳಿಗೆ ಅವಕಾಶ ನೀಡಿದರೆ ಮುಂದೊಂದು ದಿನ ಹೈಕೋರ್ಟ್ ಕಟ್ಟಡವೂ ಸುರಕ್ಷಿತವಾಗಿರುವುದಿಲ್ಲ ಎಂದು ಕಟುವಾಗಿ ಅಭಿಪ್ರಾಯಪಟ್ಟಿದೆ.
ಶಿವಮೊಗ್ಗದ ಶ್ರೀನಾಥ್ ನಗರಗದ್ದೆ ಎಂಬುವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.
ವಿಚಾರಣೆ ವೇಳೆ ನ್ಯಾಯಪೀಠ, “ನಿಮ್ಮ ಧೈರ್ಯವನ್ನು ಮೆಚ್ಚಬೇಕು. ಕಳೆದ 15 ವರ್ಷಗಳಿಂದ ಪೊಲೀಸ್ ಕ್ವಾರ್ಟರ್ಸ್ ಇರುವ ಜಾಗವನ್ನೇ ಮಾರಾಟ ಮಾಡಿದ್ದೀರಿ” ಎಂದು ಅರ್ಜಿದಾರರ ಪರ ವಕೀಲರಿಗೆ ತಿಳಿಸಿತು. ಜೊತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಕರಣದ ಮೊದಲ ಆರೋಪಿ ಎಂ.ಆರ್. ಮಹಾಲಕ್ಷ್ಮಿ ಅವರಿಗೆ ವಿವಾದಿತ ಜಾಗ ಸೇರಿದ್ದು, ತಮ್ಮ ಸ್ವತ್ತೆಂದು ನಂಬಿ ಅವರು ಅದನ್ನು ಮಾರಾಟ ಮಾಡಿದ್ದಾರೆ ಎಂದು ತಿಳಿಸಿದರು. ಈ ಸಂಬಂಧ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲಾಗಿದ್ದು, ಎನ್ಕಂಬರೆನ್ಸ್ ಪ್ರಮಾಣಪತ್ರದಲ್ಲಿಯೂ ಅವರ ಹೆಸರೇ ದಾಖಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದಲ್ಲದೆ, ವಿವಾದಿತ ಜಾಗ ಪೊಲೀಸ್ ಇಲಾಖೆಗೆ ಸೇರಿದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ಪ್ರಾಸಿಕ್ಯೂಷನ್ ಸಲ್ಲಿಸಿಲ್ಲ ಎಂದು ವಕೀಲರು ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಇಂತಹ ವಾದಗಳನ್ನು ಒಪ್ಪಿಕೊಂಡರೆ ಸಾರ್ವಜನಿಕ ಆಸ್ತಿಗಳ ಭದ್ರತೆ ಪ್ರಶ್ನಾರ್ಥಕವಾಗುತ್ತದೆ. ಈ ಕಾರಣಕ್ಕಾಗಿಯೇ ಹೈಕೋರ್ಟ್ ಕಟ್ಟಡವೂ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದ್ದೇನೆ” ಎಂದು ತಿಳಿಸಿತು. ಜೊತೆಗೆ, “ಹಾಗಾದರೆ ಪೊಲೀಸರೇ ಒತ್ತುವರಿದಾರರೇ?” ಎಂದು ಪ್ರಶ್ನಿಸಿತು.
ಇದೇ ವೇಳೆ ಅರ್ಜಿದಾರರ ಪರ ವಕೀಲರು, ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಲ್ಲಿ ಎರಡು ಪ್ರತ್ಯೇಕ ದಾವೆಗಳು ದಾಖಲಾಗಿದ್ದು, ಅವುಗಳಲ್ಲಿ ಒಂದರಲ್ಲಿ ಪೊಲೀಸರು ಪಕ್ಷಕಾರರಾಗಿದ್ದಾರೆ ಎಂದು ವಿವರಿಸಿದರು. ಸರ್ಕಾರವು ಜಾಗ ತನ್ನದೇ ಎಂಬುದಕ್ಕೆ ಒಂದೇ ಒಂದು ದಾಖಲೆ ಸಲ್ಲಿಸಿದರೂ ಅರ್ಜಿಯನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದರು.
ಇದಕ್ಕೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ವಿವಾದಿತ ಜಾಗವು 1930ರಿಂದಲೇ ಪೊಲೀಸ್ ಇಲಾಖೆಯ ಸ್ವಾಧೀನದಲ್ಲಿದ್ದು, ಇಲಾಖೆಗೆ ಸೇರಿದ ಆಸ್ತಿಯಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.



