ಪವರ್‌ಮೆನ್‌ಗಳು ಹೆಸ್ಕಾಂನ ದೊಡ್ಡ ಶಕ್ತಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿರುವ ಹೆಸ್ಕಾಂ ಉಪವಿಭಾಗವನ್ನು ಮೇಲ್ದರ್ಜೆಗೇರಿಸುವುದು, ಹೊಸ ಕಟ್ಟಡ ಮತ್ತು ಸಿಬ್ಬಂದಿಗಳ ವಸತಿ ಗೃಹ ನಿರ್ಮಾಣದ ಜತೆಗೆ ಟಿಸಿ ಬಫರ್ ಜೋನ್, ಟಿಸಿ ಟೆಸ್ಟ್ ಬ್ರ್ಯಾಂಚ್ ಪ್ರಾರಂಭಿಸುವುದು ಹಾಗೂ ಸಿಬ್ಬಂದಿಗಳ ಕೊರತೆ ನೀಗಿಸುವ ಕುರಿತಾದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಅಧ್ಯಕ್ಷ ಸೈಯದ್ ಅಜ್ಜಂಪೀರ್ ಖಾದ್ರಿ ಭರವಸೆ ನೀಡಿದರು.

Advertisement

ಶುಕ್ರವಾರ ಪಟ್ಟಣದ ಹೆಸ್ಕಾಂ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪವರ್‌ಮೆನ್‌ಗಳು ಹೆಸ್ಕಾಂಗೆ ದೊಡ್ಡ ಶಕ್ತಿಯಾಗಿದ್ದಾರೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯು ಉತ್ತರ ಕರ್ನಾಟಕ ಭಾಗದ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿ ಒಟ್ಟು 7 ಜಿಲ್ಲೆಗಳನ್ನು ಒಳಗೊಂಡಿದೆ. ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲಸ ಮಾಡಬೇಕು. ರೈತರು, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮರ್ಪಕ (24*7) ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯು ಬಡವರಿಗೆ ಆಸರೆಯಾಗಿದೆ. ಒಟ್ಟು 33.54 ಲಕ್ಷ ಗ್ರಾಹಕರು ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನಲ್ಲಿ ಶೇ. 97.5ರಷ್ಟು ಪ್ರಗತಿ ಸಾಧಿಸಲಾಗಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಮತ್ತು ಸೂರಣಗಿಯಲ್ಲಿನ ಹೆಸ್ಕಾಂ ಘಟಕವನ್ನು ಮೇಲ್ದರ್ಜೆಗೇರಿಸಲಾಗುವುದು. ಪ್ರತಿ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಿ, ಸಮಾಲೋಚನೆ ನಡೆಸಲಾಗುವುದು. ವಿದ್ಯುತ್ ಬಿಲ್ ಬಾಕಿ ಇರುವುದು ಗಮನಕ್ಕೆ ಬಂದಿದ್ದು, ತ್ವರಿತಗತಿಯಲ್ಲಿ ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ವೇಳೆ ಸಾರ್ವಜನಿಕರು ಮತ್ತು ಸಿಬ್ಬಂದಿಗಳೊAದಿಗೆ ಸಮಾಲೋಚಿಸಿ ಅಹವಾಲು ಸ್ವೀಕರಿಸಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಪುರಸಭೆ ಅಧ್ಯಕ್ಷೆ ಯಲ್ಲಮ್ಮ ದುರಗಣ್ಣವರ, ಉಪಾಧ್ಯಕ್ಷ ಫಿರ್ದೋಶ್ ಆಡೂರ, ಪಂಚ ಗ್ಯಾರಂಟಿ ಯೋಜನೆಯ ತಾಲೂಕಾಧ್ಯಕ್ಷ ನಾಗರಾಜ ಮಡಿವಾಳರ, ಹೆಸ್ಕಾಂ ಎಇಇ ಆಂಜನಪ್ಪ ಬಿ, ಹೆಸ್ಕಾಂ ಎಸ್‌ಒ ಕಿರಣಕುಮಾರ ಫಮ್ಮಾರ, ರಘುಪತಿ ನಾಯ್ಕ್, ಅಂಬರೇಶ ತೆಂಬದಮನಿ, ಸದಾನಂದ ನಂದೆಣ್ಣವರ, ಕಲಂದರ ಸೂರಣಗಿ, ರಾಜೀವ ಕುಂಬಿ, ಎಸ್.ಕೆ. ಹವಾಲ್ದಾರ, ಮಾಂತೇಶ ಗುಡಸಲಮನಿ, ವಾಸೀಂ ಮುಚ್ಚಾಲೆ ಸೇರಿದಂತೆ ಸಾರ್ವಜನಿಕರು, ಸಿಬ್ಬಂದಿಗಳು ಇದ್ದರು.

ಹೆಸ್ಕಾಂನಲ್ಲಿ ಒಟ್ಟು 62 ಲಕ್ಷ ಗ್ರಾಹಕರಿದ್ದು, ಅದರಲ್ಲಿ 10.49 ಲಕ್ಷ ನೀರಾವರಿ ಪಂಪ್‌ಸೆಟ್‌ಗಳಿವೆ. ಕುಸುಮ್-ಬಿ ಯೋಜನೆಯಡಿ ನೀರಾವರಿ ಪಂಪ್‌ಸೆಟ್‌ಗಳಿಗೆ ಸೌರ ವಿದ್ಯುತ್ ಒದಗಿಸಲಾಗುತ್ತಿದೆ. ಒಟ್ಟು 3,937 ಗ್ರಾಹಕರು ಸೌರ ಮೇಲ್ಛಾವಣಿ ಯೋಜನೆಯಡಿ ಸೌರ ವಿದ್ಯುತ್ ಅಳವಡಿಸಿಕೊಂಡು, 89.93 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದ್ದಾರೆ. ಈಗ ಪಿಎಮ್-ಸೂರ್ಯ ಘರ್ ಯೋಜನೆ ಜಾರಿಯಲ್ಲಿದ್ದು, ಗ್ರಾಹಕರು ಅದರ ಪ್ರಯೋಜನವನ್ನು ಪಡೆಯಬೇಕು. ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಮಾಡುವ ಪರಿವರ್ತಕಗಳು (ಟಿಸಿ) ವಿಫಲವಾಗಿದ್ದಲ್ಲಿ ಅವುಗಳನ್ನು ತ್ವರಿತವಾಗಿ ಬದಲಾಯಿಸಲು ಕ್ರಮ ವಹಿಸಲಾಗುವುದು ಎಂದರು.


Spread the love

LEAVE A REPLY

Please enter your comment!
Please enter your name here