HomeGadag Newsಸೆ. 5ರಿಂದ ಮನೆ ಬಾಗಿಲಿಗೆ ‘ಪ್ರಜಾಸೇವೆ’

ಸೆ. 5ರಿಂದ ಮನೆ ಬಾಗಿಲಿಗೆ ‘ಪ್ರಜಾಸೇವೆ’

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕರ ಕುಂದುಕೊರತೆಗಳಿಗೆ ಕೇವಲ ಉತ್ತರ ನೀಡುವುದಷ್ಟೇ ಅಲ್ಲದೆ, ಸಮಸ್ಯೆಗಳಿಗೆ ತ್ವರಿತ ಹಾಗೂ ತೃಪ್ತಿಕರವಾದ ಗುಣಮಟ್ಟದ ಪರಿಹಾರ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಜಾಸೇವಾ ಆಂದೋಲನದಡಿ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ಸಭೆಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆಪ್ಟೆಂಬರ್ 5ರಿಂದ ‘ಪ್ರಜಾಸೇವೆ ಅಭಿಯಾನ ನಿಮ್ಮ ಮನೆ ಬಾಗಿಲಿಗೆ’ ಕಾರ್ಯಕ್ರಮ ಆರಂಭವಾಗಲಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆವರೆಗೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯಲಿವೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಇತ್ಯರ್ಥ ಹಾಗೂ ಗುಣಮಟ್ಟದ ಪರಿಹಾರ ದೊರೆಯುವಂತೆ ಅಧಿಕಾರಿಗಳು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿ ಮಟ್ಟದ ಸಭೆಗಳನ್ನು ನಿಗದಿತ ಸಮಯಕ್ಕೆ ಅಚ್ಚುಕಟ್ಟಾಗಿ ಆಯೋಜಿಸಬೇಕು. ಸಭೆಗಳ ನೇರ ಪ್ರಸಾರ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳ ಕಚೇರಿಗೆ (ಸಿಎಂಒ) ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ, ಸ್ಥಳೀಯ ಶಾಸಕರ ನೇತೃತ್ವದಲ್ಲಿ ಎರಡನೇ ಹಾಗೂ ನಾಲ್ಕನೇ ಶನಿವಾರ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯಲಿವೆ ಎಂದು ತಿಳಿಸಿದರು.

ಮನೆ-ಮನೆಗೆ ತೆರಳಿ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಭೆಯಲ್ಲಿ ಸಲ್ಲಿಸಲು ಅನುಕೂಲವಾಗುವಂತೆ ನಿಗದಿತ ಅರ್ಜಿ ನಮೂನೆಗಳನ್ನು ಮನೆಗಳಿಗೆ ತಲುಪಿಸಬೇಕು. ಸಭೆಗೆ ಆಗಮಿಸುವಾಗಲೇ ಅರ್ಜಿಗಳನ್ನು ಭರ್ತಿ ಮಾಡಿಕೊಂಡು ಬರುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿಯೇ ಇತ್ಯರ್ಥಪಡಿಸಬಹುದಾದ ಅರ್ಜಿಗಳಿಗೆ ಯಾವುದೇ ವಿಳಂಬ ಮಾಡದೆ ತಕ್ಷಣ ಪರಿಹಾರ ಒದಗಿಸಬೇಕು. ಅಧಿಕಾರ ವ್ಯಾಪ್ತಿಯಲ್ಲಿರುವ ವಿಷಯಗಳಿಗೆ ಮೇಲಾಧಿಕಾರಿಗಳ ಮಾರ್ಗದರ್ಶನದ ನೆಪ ಹೇಳದೆ, ಅಧಿಕಾರಿಗಳು ಸ್ವತಃ ಸೂಕ್ತ ನಿರ್ಧಾರ ಕೈಗೊಂಡು ಸಾರ್ವಜನಿಕರಿಗೆ ಪರಿಹಾರ ನೀಡಬೇಕು ಎಂದು ಕಟ್ಟುನಿಟ್ಟಾಗಿ ಹೇಳಿದರು.

ಸಾರ್ವಜನಿಕರು ಗ್ರಾಮ ಒನ್ ಕೇಂದ್ರಗಳಲ್ಲಿಯೂ ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಪ್ರಜಾಸೇವೆ ಸಭೆ ನಡೆಯುವ ಸ್ಥಳದಲ್ಲೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ, ಕಂಪ್ಯೂಟರ್ ಹಾಗೂ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗುವುದು. ಸ್ಥಳದಲ್ಲಿಯೇ ಆನ್‌ಲೈನ್ ಮೂಲಕ ಅರ್ಜಿ ಹಾಗೂ ದೂರು ಸಲ್ಲಿಸಲು ಅವಕಾಶ ನೀಡಲಾಗುವುದು.

ಸಾರ್ವಜನಿಕರು ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ, ಸಹಾಯವಾಣಿ ಸಂಖ್ಯೆ 1902 ಅಥವಾ ipgrs.karnataka.gov.in ಮೂಲಕವೂ ಅರ್ಜಿ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ಪಿಂಚಣಿ, ಪಹಣಿ, ವಸತಿ, ಹೊಸ ಪಡಿತರ ಚೀಟಿ, ಸಾರಿಗೆ, ರಸ್ತೆ ಅಭಿವೃದ್ಧಿ, ಕುಡಿಯುವ ನೀರು, ದೇವಸ್ಥಾನ ಜೀರ್ಣೋದ್ಧಾರ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳ ಅಭಿವೃದ್ಧಿ, ವಿಬಿಜಿ ರಾಮ್‌ಜಿ, ಪೊಲೀಸ್ ಸೇವೆ, ಖಾಸಗಿ ಉದ್ಯೋಗ, ಕೆರೆ ತುಂಬಿಸುವ ಯೋಜನೆ, ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಅರ್ಜಿ ಹಾಗೂ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸ್ವೀಕೃತ ಅರ್ಜಿಗಳನ್ನು ಪ್ರತಿ ಬುಧವಾರ ತಾಲೂಕು, ಉಪವಿಭಾಗ ಹಾಗೂ ಜಿಲ್ಲಾ ಮಟ್ಟದಲ್ಲಿ ಮೂರು ಹಂತಗಳಲ್ಲಿ ಪರಿಶೀಲಿಸಿ ವಿಲೇವಾರಿ ಕ್ರಮ ಕೈಗೊಳ್ಳಲಾಗುವುದು. ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ತಾಲೂಕು ಮಟ್ಟದಲ್ಲಿ, ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಪವಿಭಾಗಾಧಿಕಾರಿ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ಅರ್ಜಿಗಳ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದರು.

ಅರ್ಜಿ ವಿಲೇವಾರಿ ಪ್ರಗತಿ ಕುರಿತು ಪ್ರತಿ 15 ದಿನಕ್ಕೊಮ್ಮೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಗೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರಕ್ಕೆ ಸೂಚನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆಯೂ ನಡೆಯಲಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳ ಕುರಿತು ಸಮರ್ಪಕ ಮಾಹಿತಿ ದೊರೆಯುವಂತೆ ಪ್ರತಿಯೊಂದು ಇಲಾಖೆಯೂ ತಮ್ಮ ಯೋಜನೆಗಳ ವಿವರಗಳನ್ನು ಒಳಗೊಂಡ ಮಾಹಿತಿ ಪುಸ್ತಕ ಅಥವಾ ಮಾಹಿತಿ ಫಲಕಗಳನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅರ್ಜಿದಾರರಿಗೆ ಕೇವಲ ಉತ್ತರ ನೀಡುವುದಷ್ಟೇ ಅಧಿಕಾರಿಗಳ ಕರ್ತವ್ಯವಲ್ಲ. ಅವರ ಸಮಸ್ಯೆಗೆ ಸಂಪೂರ್ಣ ತೃಪ್ತಿಕರ ಹಾಗೂ ಗುಣಮಟ್ಟದ ಪರಿಹಾರ ಒದಗಿಸಬೇಕು. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ವಿಳಂಬ ಮಾಡದೆ ಸ್ಥಳೀಯ ಮಟ್ಟದಲ್ಲಿಯೇ ಇತ್ಯರ್ಥಪಡಿಸಬೇಕು.

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img