ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳಲ್ಲಿನ ಕಲಾ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸಹಕಾರಿ ಎಂದು ಎಸ್ಜೆಜೆಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಉಪಾಧ್ಯಕ್ಷ ವಿ.ಎಸ್. ನೀಲಗುಂದ ಹೇಳಿದರು.
ಅವರು ಪಟ್ಟಣದ ಬಾಲಲೀಲಾ ಮಾಹಾಂತ ಶಿವಯೋಗಿ ಕಲಾ ಭವನದಲ್ಲಿ ಮುಳಗುಂದ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಸಾಕಷ್ಟು ಕಲಾ ಪ್ರತಿಭೆಗಳಿದ್ದು, ಅವುಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಮಕ್ಕಳು ಶ್ರದ್ಧೆ, ಸತತ ಪ್ರಯತ್ನ, ಸಾಧನೆಯ ಛಲ ಹೊಂದಿದ್ದರೆ ಎಲ್ಲವೂ ಸಾಧ್ಯವಾಗುತ್ತದೆ ಎಂದರು.
ಎ.ಎಂ. ಅಂಗಡಿ ಮಾತನಾಡಿ, ಮಕ್ಕಳಲ್ಲಿ ಸಾಕಷ್ಟು ಪ್ರತಿಭೆಗಳು ಇರುವುದರಿಂದ ಅವುಗಳನ್ನು ಗುರುತಿಸುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ. ಅವರಿಗೆ ಸೂಕ್ತ ತರಬೇತಿ ನೀಡಿ ಪ್ರೋತ್ಸಾಹಿಸಿದಲ್ಲಿ ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದರು.
ಎಂ.ಎಂ. ನಿಂಬನಾಯ್ಕರ ಮಾತನಾಡಿ, ಮುಳಗುಂದ ಪಟ್ಟಣ ಶೈಕ್ಷಣಿಕವಾಗಿ ಮುಂದುವರೆಯಲು ಇಲ್ಲಿನ ಎಲ್ಲಾ ಗುರು-ಹಿರಿಯರ ಸಹಾಯ ಸಹಕಾರ ಇರುವುದರಿಂದ ನಾನು ಸಿಆರ್ಪಿ ಹುದ್ದೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸಾಧ್ಯವಾಗಿದೆ ಎಂದರು.
ಅಧ್ಯಕ್ಷತೆಯನ್ನು ಡಾ. ಎಸ್.ಸಿ. ಚವಡಿ ವಹಿಸಿದ್ದರು, ವಿ.ಎಸ್. ನೀಲಗುಂದ, ಪ್ರಾಚಾರ್ಯ ಎ.ಎಂ. ಅಂಗಡಿ, ಇ.ಎಂ. ಗುಳೆದಗುಡ್ಡ, ಸಿಆರ್ಪಿ ಆರ್.ಎನ್. ಅಣ್ಣಿಗೇರಿ, ಎಂ.ಎಂ. ಮೇಗಲಮನಿ ಹಾಗೂ ಮುಳಗುಂದ ಕ್ಲಸ್ಟರ್ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.



