ವಿಜಯಸಾಕ್ಷಿ ಸುದ್ದಿ, ಧಾರವಾಡ : ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ಮುಂಗಾರು ಪೂರ್ವ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಅಧಿಕಾರಿಗಳು ಸನ್ನದರಾಗಬೇಕೆಂದು ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಬರ ಪರಿಸ್ಥಿತಿ ಹಾಗೂ ಮುಂಗಾರು ಮಳೆ ಪ್ರವಾಹ ಪೂರ್ವ ಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹವಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಜೂನ್, ಜುಲೈ ಹಾಗೂ ಅಗಸ್ಟ್ ತಿಂಗಳಲ್ಲಿ ಹೆಚ್ಚಿನ ಮಳೆ ಆಗುವ ಸಂಭವವಿದೆ. ಮಳೆ, ಗುಡುಗು, ಮಿಂಚು ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗದಂತೆ ತಡೆಯಲು ಮುಂಜಾಗೃತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಕೈಗೊಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮಗಳಲ್ಲಿ ಕೆರೆಗಳು ಭರ್ತಿಯಾಗುವ ಹಾಗೂ ದುರ್ಬಲ ಬಂಡ/ಬದುಗಳನ್ನು ಮುಂಜಾಗೃತವಾಗಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಈಗಲೇ ದುರಸ್ಥಿ ಕಾರ್ಯ ಕೈಗೊಳ್ಳಬೇಕೆಂದರು. 2019 ಹಾಗೂ 2021ರಲ್ಲಿ ಜಿಲ್ಲೆಯ 78 ಗ್ರಾಮಗಳನ್ನು ಪ್ರವಾಹ ಪೀಡಿತ ಎಂದು ಗುರುತಿಸಲಾಗಿದ್ದು, ತಹಸೀಲ್ದಾರರು ಹಾಗೂ ತಾ.ಪಂ ಇಓಗಳು ತಮ್ಮ ವ್ಯಾಪ್ತಿಯ ಪ್ರವಾಹ ಸಂಭವನೀಯ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.
ಮುಂಜಾಗೃತಾ ಕ್ರಮಗಳು ಹಾಗೂ ಪರ್ಯಾಯ ವ್ಯವಸ್ಥೆಗಳ ಬಗ್ಗೆ ವರದಿ ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರಾಜ ಕಾಲುವೆ ಹಾಗೂ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸಬೇಕು ಹಾಗೂ ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಾದ ಈಶ್ವರ ಉಳಾಗಡ್ಡಿ ಅವರಿಗೆ ತಿಳಿಸಿದರು. ರಸ್ತೆ ಬದಿಯಲ್ಲಿ ಅಪಾಯಕಾರಿ ಗಿಡ-ಮರಗಳನ್ನು ಹಾಗೂ ಟೊಂಗೆಗಳನ್ನು ಈಗಲೇ ತೆರವುಗೊಳಿಸಿ, ಮ್ಯಾನ್ಹೋಲ್ಗಳನ್ನು ತಕ್ಷಣವೇ ಮುಚ್ಚಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಹೆಸ್ಕಾಂ ಅಧಿಕಾರಿಗಳು ಅಪಾಯಕಾರಿ ವಿದ್ಯುತ್ ಕಂಬಗಳ ಬಗ್ಗೆ ಈಗಲೇ ಗಮನ ವಹಿಸಿ, ಸ್ಥಳಾಂತರಗೊಳಿಸಬೇಕು. ವಿದ್ಯುತ್ ಸಂಪರ್ಕದಿಂದ ಯಾವುದೇ ಅನಾಹುತಗಳು ಆಗದಂತೆ ವಿವಿಧ ಸ್ಥಳನ್ನು ಗುರುತಿಸಿ, ಈಗಲೇ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರಲ್ಲದೆ, ಎಲ್ಲ ತಾಲೂಕಾ ಟಾಸ್ಕ್ಫೋರ್ಸ್ಗಳು ಈಗಲೇ ಮುಂಜಾಗೃತೆಯಾಗಿ ಸಿದ್ಧಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣಕುಮಾರ ಎಂ., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯ ಅಜೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ 78 ಖಾಸಗಿ ಕೊಳವೆ ಬಾವಿಗಳಿಂದ 51 ಗ್ರಾಮಗಳಲ್ಲಿ ನೀರು ಪೂರೈಸಲಾಗುತ್ತಿದೆ. ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಒಟ್ಟು 58 ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಮೇ 14ರಿಂದ 10 ದಿನಗಳ ಕಾಲ ನೀರು ಹರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.