ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಇದೇ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸುವ ನಿಟ್ಟಿನಲ್ಲಿ ಅಂದು ಮಾನವ ಸರಪಳಿ ನಿರ್ಮಿಸುವ ಕುರಿತು ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಸೋಮವಾರ ತಾ.ಪಂ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ವಾಸುದೇವ ಸ್ವಾಮಿ ಮಾತನಾಡಿ, ರಾಜ್ಯದ ವಿವಿಧ ಇಲಾಖೆಗಳ ಸಚಿವರ, ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಿದಂತೆ ಸೆ.15ರಂದು ಬೆಳಿಗ್ಗೆ 9 ಗಂಟೆಯಿಂದ ಮಾನವ ಸರಪಳಿ ನಿರ್ಮಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲು ನಿರ್ದೇಶನ ನೀಡಲಾಗಿದೆ. ತಾಲೂಕಿನ ಬಾಲೇಹೊಸೂರ ಸರಹದ್ದಿನಿಂದ ಪ್ರಾರಂಭವಾಗಿ ಸೂರಣಗಿ, ನೆಲೋಗಲ್ ಗ್ರಾಮದ ಸರಹದ್ದಿನವರೆಗೆ ಸುಮಾರು 18 ಕಿ.ಮಿ ಮಾನವ ಸರಪಳಿ ನಿಮಾಣ ಮಾಡಬೇಕಿದೆ. ಸದರಿ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲ ಇಲಾಖೆಗಳ ತಾಲೂಕು ಹೋಬಳಿ, ಗ್ರಾಮ ಮಟ್ಟದ ಅಧಿಕಾರಿ- ಸಿಬ್ಬಂದಿಗಳು, ಅರೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿಗಳು, ವಿವಿಧ ಕನ್ನಡಪರ ಸಂಘಟನೆಗಳು, ದಲಿತಪರ, ರೈತ ಸಂಘಟನೆಗಳು, ಸ್ತ್ರೀಶಕ್ತಿ ಮಹಿಳಾ ಸ್ವ-ಸಹಾಯ ಸಂಘಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಮಾನವ ಸರಪಳಿ ನಿರ್ಮಾಣಕ್ಕಾಗಿ ಅವಶ್ಯಕವಿರುವ ಮಾನವ ಸಂಪನ್ಮೂಲವನ್ನು ಕ್ರೋಢೀಕರಿಸಲು ತಾಲೂಕಿನಲ್ಲಿ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಶಾಲಾ-ಕಾಲೇಜುಗಳ ಸಿಬ್ಬಂದಿಗಳು ಭಾಗಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಮೇಲ್ವಿಚಾರಣೆ ಮಾಡುವುದು. ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳು ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಕ್ರಮವಹಿಸಲು ಹಾಜರಿರುವಚಿತೆ ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಮಾನವ ಸರಪಳಿಯಲ್ಲಿ ರಕ್ಷಣಾ ದೃಷ್ಟಿಯಿಂದ ಮಾನವ ಸರಪಳಿ ಉದ್ದಕ್ಕೂ ಅಲ್ಲಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವದು, ಆರೋಗ್ಯ ಸಿಬ್ಬಂದಿಗಳನ್ನು ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅವಶ್ಯಕ ಔಷಧಿಗಳೊಂದಿಗೆ ಹಾಜರಿರುವಂತೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ ಇ.. ಕೃಷ್ಣಪ್ಪ ಧರ್ಮರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಪಿಎಸ್ಐ ಈರಪ್ಪ ರಿತ್ತಿ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಯಶಸ್ವಿಗೊಳಿಸಬೇಕು. ಅಂದು ಮುಂಜಾನೆ 9.15ಕ್ಕೆ ಸಂವಿಧಾನ ಪೀಠಿಕೆಯನ್ನು ನೀಡುವದರಿಂದ ಎಲ್ಲ ಜನರಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉತ್ತಮವಾಗಲಿದೆ.
– ಡಾ. ಚಂದ್ರು ಲಮಾಣಿ.
ಶಾಸಕರು, ಶಿರಹಟ್ಟಿ.ಮಾನವ ಸರಪಳಿ ಯಶಸ್ವಿಗಾಗಿ 18 ಕಿ.ಮೀ.ಉದ್ದಕ್ಕೂ ಬರುವ ಗ್ರಾಮಗಳಲ್ಲಿ ಗ್ರಾಮ ಸಭೆಗಳನ್ನು ಮಂಗಳವಾರದಿಂದ ನಡೆಸಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಮುಂಜಾನೆ 10 ಗಂಟೆಗೆ ಸೂರಣಗಿ, 12 ಗಂಟೆಗೆ ಬಾಲೇಹೊಸೂರು, ಹಾಗೂ ಮಧ್ಯಾಹ್ನ 2 ಗಂಟೆಗೆ ನೆಲೊಗಲ್ ಗ್ರಾಮದಲ್ಲಿ ಸಭೆ ನಡೆಯಲಿದ್ದು, ಜನಪ್ರತಿನಿಧಿಗಳು, ಮುಖಂಡರು, ಸಂಘ ಸಂಸ್ಥೆಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕು.
– ಕೃಷ್ಣಪ್ಪ ಧರ್ಮರ.
ತಾ.ಪಂ ಇಓ.