ವಿಜಯಸಾಕ್ಷಿ ಸುದ್ದಿ, ಧಾರವಾಡ : ಪ್ರಸಕ್ತ ಸಾಲಿನ 77ನೇ ಸ್ವಾತಂತ್ರ್ಯೋತ್ಸವವನ್ನು ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ಧಾರವಾಡ ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಗುರುವಾರ ಜರುಗಿದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, 77ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ, ವಿಶೇಷ ರೀತಿಯಲ್ಲಿ ಆಚರಿಸಲು ಈ ಬಾರಿ ನಿರ್ಧರಿಸಲಾಗಿದ್ದು, ನಗರದ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿರಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಈಗಾಗಲೇ ಈ ಸಾಲಿನ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ನಡೆಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಈ ಬಾರಿ ಜಿಲ್ಲೆಯ ಕಾಲೇಜುಗಳಲ್ಲಿ 77 ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗುವುದು. ಆಗಸ್ಟ್ 1ರಿಂದ 14ರವರೆಗೆ 15 ದಿನಗಳ ಕಾಲ ಸ್ವಾತಂತ್ರ್ಯ ಸಂಗ್ರಾಮ, ಇತಿಹಾಸ, ಜನಪದ ಕುರಿತು ವೈವಿದ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಹಾಗೂ ವಿವಿಧ ಇಲಾಖೆಗಳಿಂದ, ಶಾಲಾ-ಕಾಲೇಜುಗಳಿಂದ ಉತ್ತಮ ಪರೇಡ್ ನಡೆಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಪೊಲೀಸ್ ಉಪ ಆಯುಕ್ತರಾದ ಮಹಾನಿಂಗ ನಂದಗಾವಿ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ಧನಗೌಡ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಡಿಪಿಯು ಸುರೇಶ ಕೆ.ಪಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತಿರಿದ್ದರು.