ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಪ್ರಯಕ್ತ ಅವರ ಜೀವನ ಸಾಧನೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪ್ರಬಂಧ, ಭಾಷಣ ಸ್ಪರ್ಧೆ ಆಯೋಜಿಸಬೇಕೆಂದು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಪಡಿಸಲು ತಿಳಿಸಿದ ಅವರು, ಕಾರ್ಯಕ್ರಮದ ಕುರಿತು ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರುಗಳಿಗೆ ಮುಂಚಿತವಾಗಿ ತಲುಪಿಸಬೇಕು. ಕಾರ್ಯಕ್ರಮದ ದಿನದಂದು ರಾಣಿ ಚನ್ನಮ್ಮ ವೃತ್ತದಿಂದ ಕನಕ ಭವನದವರೆಗೆ ಭವ್ಯ ಮೆರವಣಿಗೆ ಆಯೋಜಿಸಲು ಸರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಮದು ನಿರ್ದೇಶನ ನೀಡಿದರು.
ಕಾರ್ಯಕ್ರಮದ ನಿರೂಪಕರು ಹಾಗೂ ಡಿ.ದೇವರಾಜ ಅರಸುರವರ ಜೀವನ ಗಾಥೆಯನ್ನು ಸವಿವರವಾಗಿ ತಿಳಿಸಬಲ್ಲ ನುರಿತ ಉಪನ್ಯಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಎಂ. ತುಂಬರಮಟ್ಟಿ ಮಾತನಾಡಿ, ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಸಮಾಜದ ಹಿರಿಯರಾದ ಪಕೀರಪ್ಪ ಹೆಬಸೂರ್, ಆರ್.ಡಿ. ಕಡ್ಲಿಕೊಪ್ಪ, ಎಸ್.ಮಲ್ಲಿಕಾರ್ಜುನ, ರುದ್ರಣ್ಣ ಗುಳಗುಳಿ, ಹರೀಶ್ ಪೂಜಾರ್, ಮೋಹನ್ ಚಂದಪ್ಪನವರ್, ಶಿವಪ್ಪ ಮಡಿವಾಳರ, ದ್ಯಾಮಣ್ಣ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಬಸವರಾಜ ಬಳ್ಳಾರಿ ಮಾತನಾಡಿ, ಗದಗ ತಾಲೂಕಿನ ಮತ್ತು ಗದಗ ಜಿಲ್ಲೆಯಲ್ಲಿ ಇರುವ ವಸತಿ ನಿಲಯಗಳಲ್ಲಿ ಡಿ. ದೇವರಾಜ ಅರಸು ಅವರ 110ನೇ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ ಸ್ಪರ್ಧೆ ಮತ್ತು ಒಳಾಂಗಣ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುವದು ಎಂದು ತಿಳಿಸಿದರು.



