ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಜು. 19ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸಭಾಭವನದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ಮಲ್ಲು ಕಳಸಾಪುರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾಹಿತಿ ನೀಡಿ, ಇತ್ತೀಚಿನ ದಿನಗಳಲ್ಲಿ ರಕ್ತದಾನದ ಅವಶ್ಯಕತೆ ಸಾಕಷ್ಟಿದ್ದು, ಈ ನಿಟ್ಟಿನಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ವಿವಿಧ ಕನ್ನಡಪರ ಸಂಘಟನೆಗಳು, ಯುವಕರು, ಶಿಕ್ಷಕರು, ನೌಕರ ವರ್ಗದವರು ಸೇರಿ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಆರೋಗ್ಯಕರ ಸಮಾಜಕ್ಕೆ ಅಳಿಲು ಸೇವೆ ಮಾಡೋಣ ಎಂದರು.
ಕಾರ್ಯಕ್ರಮವನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸುವರು. ತಾಲೂಕಾ ವೈದ್ಯಾಧಿಕಾರಿ ಡಾ. ಸುಭಾಷ್ ದಾಯಗೊಂಡ, ಲಕ್ಷ್ಮೇಶ್ವರ ತಾಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ. ಪಿ.ಡಿ. ತೋಟದ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀಕಾಂತ ಕಾಟೇವಾಲೆ, ಗದಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ ಸೇರಿದಂತೆ ಜಿಮ್ಸ್ನ ಬ್ಲಡ್ ಬ್ಯಾಂಕಿನ ವೈದ್ಯರು, ಗಣ್ಯರು ಉಪಸ್ಥಿತರಿರುವರು. ಈ ವೇಳೆ ಹಿರಿಯ ವೈದ್ಯರು, ಸಮಾಜ ಸೇವಕರನ್ನು ಸನ್ಮಾನಿಸಲಾಗುವುದು ಎಂದರು.
ಹಿರಿಯ ಪತ್ರಕರ್ತರಾದ ರಮೇಶ ನಾಡಿಗೇರ, ದಿಗಂಬರ ಪೂಜಾರ, ನಾಗರಾಜ ಹಣಗಿ, ಅಶೋಕ ಸೊರಟೂರ, ಸೋಮಣ್ಣ ಯತ್ತಿನಹಳ್ಳಿ, ಶಿವಲಿಂಗಯ್ಯ ಹೊತಗಿಮಠ, ಮಂಜುನಾಥ ರಾಠೋಡ, ಕರಿಯಪ್ಪ ಶಿರಹಟ್ಟಿ, ಪರಮೇಶ ಲಮಾಣಿ ಇದ್ದರು.