ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸಮಾಜದಲ್ಲಿ ಮಹಿಳೆಯರಿಗೆ ಗೌರಯುತವಾದ ಸ್ಥಾನವಿದ್ದು, ಇಂದು ಎಲ್ಲ ರಂಗಳಗಳಲ್ಲಿಯೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಆದರೆ ಸಮಾಜದಲ್ಲಿ ನಡೆಯುವ ಮಹಿಳೆಯ ಮೇಲಿನ ದೌರ್ಜನ್ಯ ತಡೆಯುವುದು ಎಲ್ಲರ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ವಿಶೇಷವಾದ ಕಾನೂನು ಸಹ ಇದೆ ಎಂದು ದಿವಾಣಿ ನ್ಯಾಯಾಧೀಶರಾದ ಸತೀಶ ಎಂ.ಹೇಳಿದರು.
ಅವರು ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಶಿರಹಟ್ಟಿ ಮತ್ತು ಲಕ್ಷೇಶ್ವರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿರಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹಿರೇಬಣದ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಿಗೆ ಅವರ ಉದ್ಯೋಗ ಸ್ಥಳದಲ್ಲಿ, ಸಮಾಜದಲ್ಲಿ ದೌರ್ಜನ್ಯಗಳು ನಡೆಯುತ್ತವೆ. ಇದರಿಂದ ಮಹಿಳೆಯರು ಮಾನಸಿಕವಾಗಿ ಕುಗ್ಗುವದುಂಟು. ಆದರೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗಾಗಿಯೇ ವಿಶೇಷ ಕಾನೂನುಗಳಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಬಗ್ಗೆ ದೂರುಗಳು ಬಂದಲ್ಲಿ ಕಾನೂನು ಅಂತವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಸಮಾಜದಲ್ಲಿ ಮಹಿಳೆಯರನ್ನು ಸಮಾನತೆಯಿಂದ ನೋಡುವದು ಅವಶ್ಯವಾಗಿದೆ. ಇಂತಹ ಸಮಸ್ಯೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಹಿಳೆಯರನ್ನು ಗೌರವಿಸುವ ಮೂಲಕ ಅವರಿಗೆ ಸೂಕ್ತ ಅವಕಾಶ, ಸ್ವಾತಂತ್ರ್ಯ, ಗೌರವ ನೀಡುವ ಕಾರ್ಯವಾದರೆ ಮಾತ್ರ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಹೇಳಿದರು.
ಸಹಾಯಕ ಸರ್ಕಾರಿ ಅಭಿಯೋಜಕಿ ಹೀನಾಕೌಸರ ಗಂಜಿಹಾಳ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ.ಡಿ.ಪಿ.ಓ. ಮೃತ್ಯುಂಜಯ ಗುಡ್ಡಧಾನ್ವೇರಿ ವಹಿಸಿದ್ದರು. ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಬಾಳೇಶ್ವರಮಠ,. ಪ್ಯಾನಲ್ ವಕೀಲರಾದ ಪಿ.ಎಂ. ವಾಲಿ, ವಿ.ಎಸ್. ಪಶುಪತಿಹಾಳ, ಆರ್.ಎಂ. ಕುರಿ ಪಾಲ್ಗೊಂಡಿದ್ದರು. ಅಂಗನವಾಡಿ ಮೇಲ್ವಿಚಾರಕಿ ನಂದಾ ನವಲೆ ಕಾರ್ಯಕ್ರಮ ನಿರ್ವಹಿಸಿದರು.