ನವದೆಹಲಿ:- ಶುಕ್ರವಾರ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಆಗಮಿಸಲಿದ್ದಾರೆ.
ಶುಕ್ರವಾರ ವಿಶೇಷ ವಿಮಾನದಲ್ಲಿ ಬೆಳಗ್ಗೆ ಮಂಗಳೂರಿಗೆ ಬಂದಿಳಿಯಲಿರುವ ಪ್ರಧಾನಿ ಮೋದಿ, ಉಡುಪಿಗೆ ಸೇನಾ ಹೆಲಿಕಾಪ್ಟರ್ನಲ್ಲಿ ಆಗಮಿಸಲಿದ್ದಾರೆ. ಮೋದಿಗಾಗಿ ಹೊಸ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು ಆವರಣದೊಳಗೆ ಹೊರಗೆ ವಿಶಾಲ ರಸ್ತೆ ನಿರ್ಮಿಸಲಾಗಿದೆ.
ಬೆಳಗ್ಗೆ 11ಕ್ಕೆ ರಥಬೀದಿ ಮೂಲಕ ಆಗಮಿಸುವ ಪ್ರಧಾನಿ ಮೋದಿ ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಸುವರ್ಣ ಕನಕನ ಕಿಂಡಿ ಉದ್ಘಾಟಿಸಿ ಕನಕದಾಸರ ಗುಡಿ ದರ್ಶನ ಮಾಡುತ್ತಾರೆ. ಮಠದೊಳಗೆ ಬಂದು ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆಗೈದು ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಚಿನ್ನದ ತೀರ್ಥ ಮಂಟಪವನ್ನು ಉದ್ಘಾಟಿಸಿ, ಅಷ್ಟಮಠಾಧೀಶರನ್ನು ಭೇಟಿ ಮಾಡಿ ಪ್ರಸಾದ ಸ್ವೀಕರಿಸಿ ಗೀತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಇಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ.
ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಎಕ್ಸ್ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.


