ವಿಜಯಸಾಕ್ಷಿ ಸುದ್ದಿ, ಗದಗ : ಇಂದಿನ ವಿದ್ಯಾರ್ಥಿಗಳ ಕೈಯಲ್ಲಿ ಮುಂದಿನ ದೇಶದ ಭವಿಷ್ಯವಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಪಶುವಾಗದೇ ಉತ್ತಮ ಆರೋಗ್ಯದಿಂದ ಜೀವನದಲ್ಲಿ ಸಫಲರಾಗಿ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ ಹೇಳಿದರು.
ನಗರದ ಆದರ್ಶ ವಿದ್ಯಾಸಂಸ್ಥೆಯ ವ್ಹಿ.ಆರ್. ಕುಷ್ಠಗಿ ಮೆಮೋರಿಯಲ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವ್ಹಿ.ಆರ್. ಕುಷ್ಠಗಿ ಮೆಮೋರಿಯಲ್ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗು ರೆಡ್ ಕ್ರಾಸ್ ಅವರ ಸಹಯೋಗದಲ್ಲಿ `ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನ’ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಮೊದಲು ಬಡತನ, ಹಸಿವು, ಶಿಕ್ಷಣದಿಂದ ವಂಚಿತರಾದಂತ ಸಮಸ್ಯೆಗಳು ಇದ್ದವು. ಪ್ರಸ್ತುತವಾಗಿ ನಮ್ಮ ಸಮಾಜದಲ್ಲಿ ಮಾದಕ ವ್ಯಸನದಂತಹ ಗಂಭೀರ ಸಮಸ್ಯೆಗಳು ಹೆಚ್ಚಾಗಿದ್ದು ಜಗತ್ತಿನಲ್ಲಿ ಹಲವಾರು ಜನ ಈ ಮಾದಕ ವ್ಯಸನಕ್ಕೆ ಬಲಿಪಶುವಾಗುತ್ತಿದ್ದಾರೆ. ಇಂತಹ ಸಮಸ್ಯೆಯಿಂದ ಕೇವಲ ವಯಕ್ತಿಕ ಹಾನಿಯಲ್ಲದೆ, ದೇಶದ ಆರ್ಥಿಕತೆ ಸೇರಿದಂತೆ ದೇಶದ ಅಭಿವೃದ್ಧಿ ಹಿನ್ನಡೆಯಾಗುತ್ತಿದೆ ಎಂದರು.
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಕೇವಲ ಪೊಲೀಸ್ ಇಲಾಖೆಗೆಸೀಮಿತವಾಗಿದ್ದಲ್ಲ. ಸಾರ್ವಜನಿಕರು ಜವಾಬ್ದಾರಿಯುತರಾಗಿ, ಮಾದಕ ವಸ್ತುಗಳನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದು ತಿಳಿದು ಬಂದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ರಾಜೇಂದ್ರ ಬಸರಿಗಿಡದ ಮಾತನಾಡಿ, ಸಾಮಾಜಿಕ ಜಾಲತಾಣ ಮತ್ತು ಚಲನಚಿತ್ರಗಳ ಪ್ರಭಾವಕ್ಕೆ ಒಳಗಾಗಿ ಇಂದಿನ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ತುತ್ತಾಗುತ್ತಾರೆ. ಅಂತಹ ವಿದ್ಯಾರ್ಥಿಗಳು ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರದಿಂದ ನೀಡುವ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು ಎಂದರು.
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಅರವಿಂದ ಕೆ ಮಾತನಾಡಿ, ಚಿಕಿತ್ಸೆಗಿಂತ ತಡೆಗಟ್ಟವಿಕೆ ಉತ್ತಮವಾಗಿದ್ದು, ಒಂದು ಸಿಗರೇಟ್ ಸೇರುವುದರಿಂದ ಜೀವನದ ಅತ್ಯಮೂಲ್ಯ 11 ನಿಮಿಷಗಳನ್ನು ಕಳೆದುಕೊಳ್ಳುತ್ತೇವೆ. ಸಿಗರೇಟನಲ್ಲಿ 6000ಕ್ಕೂ ಹೆಚ್ಚು ಹಾನಿಕಾರಕ ರಾಸಾಯನಿಕಗಳಿರುತ್ತವೆ. ಅದರಲ್ಲಿ 60ಕ್ಕೂ ಹೆಚ್ಚು ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ದಾರಿಮಾಡಿಕೊಡುತ್ತವೆ. ವಿದ್ಯಾರ್ಥಿಗಳು ಕುತೂಹಲದಿಂದ ಮಾದಕ ವ್ಯಸನ ಪ್ರಾರಂಭಿಸಿ ಅದರಿಂದ ಹೊರಬರದಂತೆ ಅದಕ್ಕೆ ದಾಸರಾಗುತ್ತಾರೆ. ಹಾಗಾಗಿ ಒಳ್ಳೆಯ ಅಭ್ಯಾಸಗಳನ್ನು ರೂಢಿ ಮಾಡಿಕೊಂಡು ಜೀವನದಲ್ಲಿ ಸಫಲರಾಗಬೇಕೆಂದು ತಿಳಿಸಿದರಲ್ಲದೆ, ಪಿಪಿಟಿ ಮೂಲಕ ಮಾದಕ ವ್ಯಸನದ ಕಾರಣಗಳು, ಅದರಿಂದಾಗುವ ಪರಿಣಾಮ ಸೇರಿದಂತೆ ವ್ಯಸನದಿಂದ ಹೇಗೆ ಮುಕ್ತರಾಗಬೇಕೆಂದು ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಎಸ್.ಎಮ್. ಶಿರಗುಪ್ಪಿ, ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ, ಉಪ ಪ್ರಾಚಾರ್ಯ ಡಾ. ವಿ.ಟಿ. ನಾಯ್ಕರ, ಪ್ರಾಧ್ಯಾಪಕ ಆರ್.ಆರ್. ಕುಲಕರ್ಣಿ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರ್ವಹಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನಾಚರಣೆಯ ಈ ವರ್ಷದ ಘೋಷವಾಕ್ಯವಾದ `ಸಾಕ್ಷಿಗಳು ಸ್ಪಷ್ಟವಾಗಿವೆ: ತಡೆಗಟ್ಟುವಲ್ಲಿ ಹೂಡಿಕೆ ಮಾಡಿ’ ಎಂದು ತಿಳಿಸಿ, ಮಾದಕ ವ್ಯಸನದಿಂದ ದೇಹದ ಅಂಗಾಂಗಗಳು ವಿಫಲಗೊಳ್ಳುತ್ತವೆ. ಹಾಗಾಗಿ ಮಾದಕ ವಸ್ತುಗಳಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.