ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಘೀ ರೋಗದ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಗ್ರಾಮ ಮಟ್ಟದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ವೈಯಕ್ತಿಕ ಶೌಚಾಲಯ ನಿರ್ಮಾಣದ ವಿಷಯವಾಗಿ ಅಗತ್ಯಕ್ಕನುಸಾರ ವೈಯಕ್ತಿಕ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣ ಮಾಡಲು ಕಾರ್ಯಾದೇಶ ವಿತರಿಸಿ ತುರ್ತಾಗಿ ಪ್ರಗತಿ ಸಾಧಿಸುವಂತೆ ಜಿ.ಪಂ ಸಿಇಓ ಭರತ್ ಎಸ್ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಕೊಳಚೆ ನೀರು ನಿರ್ವಹಣೆಯ ವಿಷಯವಾಗಿ ಹಲವಾರು ಸವಾಲುಗಳು ತಲೆದೋರುತ್ತಿದ್ದು, ತುರ್ತಾಗಿ ಬೂದು ನೀರು ನಿರ್ವಹಣೆ ಕಾಮಗಾರಿಗಳನ್ನು ಪ್ರಾರಂಭಿಸಿ ಮುಕ್ತಾಯಗೊಳಿಸಲು ಕ್ರಮ ವಹಿಸಬೇಕೆಂದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ, ಗುತಿಸಿರುವ ವೈಯಕ್ತಿಕ ಫಲಾನುಭವಿಗಳಿಗೆ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವೈಯಕ್ತಿಕ ಶೌಚಾಲಯ ಕಾಮಗಾರಿ ಆದೇಶವನ್ನು ನೀಡಿ ಕೂಡಲೇ ಶೌಚಾಲಯವನ್ನು ನಿರ್ಮಾಣ ಮಾಡಿಕೊಳ್ಳುವಂತೆ ಪ್ರೇರೇಪಿಸಬೇಕು.
ಗ್ರಾಮಗಳಲ್ಲಿ ಮನೆ-ಮನೆಗಳಿಂದ ಸಂಗ್ರಹಿಸಬೇಕಿದೆ. ಹಸಿ ಮತ್ತು ಒಣ ಕಸಗಳನ್ನು ವಿಂಗಡಣೆ ಮಾಡಿ ಸಮಗ್ರವಾಗಿ ನಿರ್ವಹಣೆ ಮಾಡುವ ಬಗ್ಗೆ ಎಲ್ಲಾ ಪಂಚಾಯಿತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು.
ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಿಂದ ಮುಕ್ತಾಯಗೊಳಿಸದೇ ಬಾಕಿ ಉಳಿದಿರುವ ಹಲವು ಕಾಮಗಾರಿಗಳನ್ನು ಗ್ರಾ.ಪಂ ಮಟ್ಟದಲ್ಲಿ ಮುಕ್ತಾಯಗೊಳಿಸದೇ ಇರುವುದು ಕಂಡುಬಂದಿದೆ. ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಗಳು ಈ ಬಗ್ಗೆ ತುರ್ತಾಗಿ ಕಾಮಗಾರಿವಾರು ಮತ್ತೊಮ್ಮೆ ಪರಿಶೀಲಿಸಿ ಮುಕ್ತಾಯಗೊಳಿಸಬೇಕು.
ಸಾಮಾಜಿಕ ಲೆಕ್ಕ ಪರಿಶೋಧನೆ ಅಡಾಕ್ ಸಭೆ ಆಯೋಜನೆ, ವಸೂಲಾತಿ ಬಗ್ಗೆ ರಾಜ್ಯ ಮಟ್ಟದಲ್ಲಿ ಪ್ರಗತಿ ಪರಿಶೀಲನೆ ಕೈಗೊಳ್ಳುತ್ತಿದ್ದು, ತಾಲೂಕು ಮಟ್ಟದಲ್ಲಿ ನಿಯಮಾನುಸಾರ ವೇಳಾಪಟ್ಟಿಯಂತೆ ಅಡಾಕ್ ಸಭೆಗಳನ್ನು ಆಯೋಜಿಸುವುದು ಹಾಗೂ ಜಿಲ್ಲೆಯಲ್ಲಿ ದಾಖಲಾಗಿರುವ ಸಾಮಾಜಿಕ ಲೆಕ್ಕ ಪರಿಶೋಧನಾ ದೂರುಗಳನ್ನು ವಸೂಲಾತಿ ಮಾಡಿ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಮುಖ್ಯ ಯೋಜನಾಧಿಕಾರಿ, ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು-ಸಿಬ್ಬಂದಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ, ತಾಲೂಕು ಮಟ್ಟದ ಎಲ್ಲಾ ಯೋಜನೆಗಳ ಸಿಬ್ಬಂದಿಗಳು ಹಾಜರಿದ್ದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಸರ್ವೆ ಮಾಡಿಸಲು ಸೂಚಿಸಲಾಗಿತ್ತು. ಅದರಂತೆ ಆಸ್ತಿ ಸರ್ವೆ ಮಾಡಲು ಬಾಕಿ ಇರುವವರು ಕೂಡಲೇ ಪ್ರಗತಿ ಸಾಧಿಸಬೇಕು. ಎಲ್ಲಾ ವರ್ಗದ ಅಧಿಕಾರಿಗಳ ಪ್ರತಿ ದಿವಸದ ಹಾಜರಾತಿಯನ್ನು ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸುತ್ತಿದ್ದು, ಕಡ್ಡಾಯವಾಗಿ ಕಛೇರಿಗಳಿಗೆ ತೆರಳಿ ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿಲ್ಲಿ ಲಭ್ಯವಿರುವಂತೆ ಕಾರ್ಯನಿರ್ವಹಿಸಲು ಭರತ್ ಎಸ್ ತಿಳಿಸಿದರು.