ಬೆಂಗಳೂರು:- ನೌಕರರ ಹಲವು ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ಕೊಟ್ಟ ಹಿನ್ನೆಲೆ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ. ಹೀಗಾಗಿ ನಾಳೆ ಡಿ.31ರಂದು ಎಂದಿನಂತೆ ಸಾರಿಗೆ ಸಂಸ್ಥೆ ಬಸ್ಗಳು ರಸ್ತೆಗಿಳಿಯಲಿವೆ.
ಅರಿಯರ್ಸ್ ಹಣ ಬಿಡುಗಡೆ, ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಅನಂತ್ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ಕೊಟ್ಟಿತ್ತು.
ಆದರೆ ಸಭೆಯಲ್ಲಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಡಿ. 31 ರಂದು ಜಂಟಿ ಕ್ರಿಯಾ ಸಮಿತಿಯವರು ವಿವಿಧ ಬೇಡಿಕೆಯನ್ನಿಟ್ಟು ಮುಷ್ಕರ ಮಾಡಲು ಮುಂದಾಗಿದ್ದರು. ನಮ್ಮ ಕಾರ್ಪೊರೇಷನ್ ಆರ್ಥಿಕ ಪರಿಸ್ಥಿತಿ ಅವರಿಗೂ ಗೊತ್ತಿದೆ.
ಹಿಂದೆ ಬಿಜೆಪಿ ಸರ್ಕಾರ ಇದ್ದಾಗ 5900 ಕೋಟಿ ರೂ. ಸಾಲ ಇಟ್ಟು ಹೋಗಿದ್ದಾರೆ. ಸಂಘಟನೆಯವರು ನೌಕರರ ಪರವಾಗಿ ಕೆಲಸ ಮಾಡಿದ್ದಾರೆ. ನಾನೂ ಕೂಡ ನೌಕರರ ಬೇಡಿಕೆಯನ್ನು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. 11 ಸಾವಿರ ನೌಕರರಿಗೆ ಬಾಕಿಯಿದ್ದ 220 ಕೋಟಿ ಬಿಡುಗಡೆ ಮಾಡಿದ್ದಾರೆ, ಮತ್ತೆ ಎರಡು ಸಾವಿರ ಕೋಟಿ ರೂ. ಸಿಎಂ ಬಿಡುಗಡೆ ಮಾಡಿದ್ದಾರೆ.
ಆ ಹಣ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ. ವೇತನ ಪರಿಷ್ಕರಣೆ ಬಗ್ಗೆ ಕೂಡ ಸಿಎಂ ಗೆ ಹೇಳಿದ್ದೇವೆ. ಫೆಬ್ರವರಿಯಲ್ಲಿ ಬಜೆಟ್ ಬರಲಿದೆ. ಆಗ ಅನುದಾನ ನೀಡಿ ಅಂತ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದರು.