ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರ ಕುರಿತು ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1,12,438 ಹೆಕ್ಟೇರ್ ಪ್ರದೇಶ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು ಶೀಘ್ರವೇ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಬೆಳೆ ಹಾನಿ ಸಮೀಕ್ಷೆ ಹಾಗೂ ಜನತಾ ದರ್ಶನ, ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ನಂತರ ಪತ್ರಿಕಾಗೋಷ್ಠಿಯ ಉದ್ದೇಶಿಸಿ ಅವರು ಮಾತನಾಡಿದರು.
ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ 11,348 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 10.36 ಕೋಟಿ ರೂ ಪರಿಹಾರಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಕೃಷಿ ಬೆಳೆ ಹಾನಿಗೆ ಸಂಬಂಧಿಸಿದಂತೆ 4337 ರೈತರಿಂದ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಿ ವರದಿಯಲ್ಲಿ ಅಳವಡಿಸಲಾಗುವುದು. ಕೃಷಿಗೆ ಸಂಬಂಧಿಸಿದಂತೆ 4.36 ಕೋಟಿ ರೂ ಹಾಗೂ ತೋಟಗಾರಿಕೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ 1 ಕೋಟಿ ರೂ. ಪರಿಹಾರ ನೀಡಲು ಪ್ರಸ್ತಾವನೆಯಲ್ಲಿ ಸೇರಿಸಿ ಸಲ್ಲಿಸಲಾಗುವುದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಜನತಾ ದರ್ಶನ : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಮಹಾತ್ವಾಕಾಂಕ್ಷಿ ಜನತಾ ದರ್ಶನ ಕಾರ್ಯಕ್ರಮ ಪರಿಣಾಮಕಾರಿಯಾಗಿ ಜರುಗಿಸಲಾಗಿದೆ. ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಜನತಾ ದರ್ಶನದಲ್ಲಿ ವಿಲೇವಾರಿಯಾಗದ ಅರ್ಜಿಗಳಲ್ಲಿ ಕೆಲವೊಂದು ಅರ್ಜಿಗಳು ಅನುದಾನದ ಲಭ್ಯತೆ ಇಲ್ಲದೇ ವಿಲೇವಾರಿಯಾಗಿರುವುದಿಲ್ಲ. ಸಂಬಂಧಿತ ಇಲಾಖೆಯ ಅಧಿಕಾರಿಗಳು ಮೇಲಾಧಿಕಾರಿಗಳೊಂದಿಗೆ ಸಂಪರ್ಕಿಸಿ ಅನುದಾನ ತರಿಸಿಕೊಂಡು ಅರ್ಜಿ ವಿಲೇವಾರಿಗೆ ಕ್ರಮ ವಹಿಸಬೇಕು. ಇನ್ನು ಕೆಲವು ಅರ್ಜಿಗಳ ವಿಲೇವಾರಿಗಾಗಿ ಆಯ್ಕೆ ಸಮಿತಿ ಸಭೆಗಳನ್ನು ಮಾಡಬೇಕಾಗಿದೆ. ಹೀಗೆ ವಿವಿಧ ಹಂತದಲ್ಲಿ ಬಾಕಿ ಇರುವ ಅರ್ಜಿಗಳನ್ನು ಇಲಾಖೆ ಅಧಿಕಾರಿಗಳು ಅಕ್ಟೋಬರ್ 10ರೊಳಗಾಗಿ ವಿಲೇವಾರಿ ಮಾಡಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ತಿಳಿಸಲಾಗಿದೆ ಎಂದರು.
ಪ್ರಭುವಿನೆಡೆಗೆ ಪ್ರಭುತ್ವ: ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮದಲ್ಲಿ ಒಟ್ಟು 21 ದೂರು ದಾಖಲಾಗಿವೆ. 13 ದೂರುಗಳಿಗೆ ಸಂಪೂರ್ಣ ಪರಿಹಾರ ಒದಗಿಸಲಾಗಿದೆ. 2 ಮನವಿಗಳು ಯೋಜನೆ ಅಳವಡಿಕೆ ಕುರಿತಂತೆ ಹಾಗೂ 5 ಅರ್ಜಿಗಳು ಬಾಕಿ ಇವೆ. ಬಾಕಿ ಇರುವ ದೂರುಗಳ ಕುರಿತು ಶೀಘ್ರ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ 17,997 ಅನರ್ಹರಿಗೆ ಪಿಂಚಣಿ ಮಂಜೂರಾತಿ ಆಗಿರುವುದು ತಿಳಿದು ಬಂದಿದ್ದು, ಇದರ ಸತ್ಯಾಸತ್ಯತೆಗಾಗಿ ಸಂಪೂರ್ಣ ತನಿಖೆಗೆ ಸೂಚಿಸಲಾಗಿದೆ. ಅನರ್ಹರಿಗೆ ವಿತರಣೆಯಾಗುತ್ತಿರುವ ಪಿಂಚಣಿ ಹಣ ತಕ್ಷಣ ನಿಲ್ಲಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಸಾಕಷ್ಟು ವಿಚಾರಣೆ ನಡೆಸಿ ಅನರ್ಹರಿಗೆ ಕೊಡುವಂತಹ ಸೌಲಭ್ಯ ನಿಲ್ಲಿಸುವ ಕುರಿತು ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಇದ್ದರು.
ಅಮಾನತು
ಗದಗ ತಹಸೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ ಕುರಿತಂತೆ ಸಾಮಾಜಿಕ ಭದ್ರತಾ ಯೋಜನೆಗಳಡಿ ಅನರ್ಹರಿಗೆ ಮಂಜೂರಾತಿ ಆರೋಪದಡಿ ಉಪ ತಹಸೀಲ್ದಾರ ಡಿ.ಟಿ. ವಾಲ್ಮೀಕಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ನಾನೇ ಖುದ್ದಾಗಿ ಕಚೇರಿಗೆ ಹೋಗಿ ಪರಿಶೀಲನೆ ನಡೆಸಲಾಗಿ, ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿರುವ ಕುರಿತು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತ್ತು ಕ್ರಮ ವಹಿಸಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.



