ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣಾ ನೀತಿ ಕುರಿತು ಗಮನದಲ್ಲಿಟ್ಟುಕೊಂಡು ಮಕ್ಕಳ ರಕ್ಷಣಾ ನೀತಿ ಕುರಿತಂತೆ ತರಬೇತಿ ನೀಡುತ್ತಿದೆ. ಪ್ರತಿಯೊಬ್ಬ ಪ್ರಾಂಶುಪಾಲರು ಪ್ರತಿ ಮಗುವಿಗೆ ರಕ್ಷಣೆ, ಕಾನೂನಿನ ರಕ್ಷಣೆ, ಕುಟುಂಬ ವಾತಾವರಣ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗದಗ ಇವರ ಸಹಯೋಗದಲ್ಲಿ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಐ.ಟಿ.ಐ, ನರ್ಸಿಂಗ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರುಗಳಿಗೆ ಹಮ್ಮಿಕೊಂಡಿದ್ದ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ, ಸಲಹಾ ಪೆಟ್ಟಿಗೆ, 1098 ಶಾಶ್ವತ ಗೋಡೆ ಬರಹ ಮೂಲಭೂತ ಸೌಕರ್ಯಗಳ ಕುರಿತು ಗಮನ ಹರಿಸಬೇಕು. ನಿಯಮ ಬದಲಾವಣೆ ಆದಂತೆ ಅದನ್ನು ತಿಳಿದು ಮಗುವಿನ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆ, ಪೊಕ್ಸೋ, ಬಾಲಕಾರ್ಮಿಕ ನಿಷೇಧ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಹೆಚ್ಚು ಹೆಚ್ಚು ತರಬೇತಿ ಅರಿವು ಕಾರ್ಯಕ್ರಮಗಳು ಆಗಬೇಕು. ಕಾಯ್ದೆಯ ಸರಿಯಾದ ತಿಳುವಳಿಕೆ ಇಲ್ಲದೆ ಇರುವವರು ತರಬೇತಿ ಪಡೆದು ಕಾಯ್ದೆಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ ಮಾತನಾಡುತ್ತಾ, ಮಕ್ಕಳ ರಕ್ಷಣಾ ಸಂಬಂಧಿತ ಕಾಯ್ದೆಗಳನ್ನು ಕಾಲೇಜುಗಳಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಹನುಮಂತ ರೆಡ್ಡಿ, ಬಿ.ಆರ್.ಪಿ ಪ್ರೌಢಶಾಲೆ ವಿಭಾಗ, ಬಿ.ಆರ್.ಸಿ, ಮುಂಡರಗಿ ಇವರು ಮಕ್ಕಳ ರಕ್ಷಣಾ ನೀತಿ-2016, ಪೊಕ್ಸೋ-2012 ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಪಿ.ಎಸ್.ಐ ಹೆಚ್.ಡಿ. ಓದುಗೌಡರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜಯದೇವಿ ಕವಲೂರು, ಪೂರ್ಣಿಮಾ ಹೊಸಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. ಮಲ್ಲಪ್ಪ ಹೊಸಳ್ಳಿ ನಿರೂಪಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್ ಮಾತನಾಡಿ, ಪ್ರಾಂಶುಪಾಲರು ತರಬೇತಿಯಲ್ಲಿ ಪಡೆಯುವ ಎಲ್ಲಾ ಅಂಶಗಳನ್ನು ತಮ್ಮ ದಿನನಿತ್ಯದ ಕಾರ್ಯಚಟುವಟಿಕೆಗಳಲ್ಲಿ ಅಳವಡಿಸಿಕೊಂಡು ಮಕ್ಕಳಿಗೆ ಗುಣಮಟ್ಟದ, ಸಂಸ್ಕಾರಭರಿತ, ಮಾನವೀಯ ಮೌಲ್ಯಗಳನ್ನು ಒಳಗೊಂಡ ಶಿಕ್ಷಣವನ್ನು ನೀಡಬೇಕು. ಕಾಲೇಜು ಅವಧಿಯಲ್ಲಿ ಮಕ್ಕಳ ಮೇಲೆ ನಿಗಾವಹಿಸಬೇಕು ಹಾಗೂ ಮಕ್ಕಳು ಮೊಬೈಲ್ನ್ನು ಬಳಕೆ ಮಾಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.



