ವಿಜಯಸಾಕ್ಷಿ ಸುದ್ದಿ, ಧಾರವಾಡ: ಪ್ರತಿಯೊಬ್ಬ ವ್ಯಕ್ತಿಯ ಘನತೆಯ ಬದುಕಿನ ಹಕ್ಕನ್ನು ಗೌರವಿಸಿ, ಸರ್ವರನ್ನೂ ಸಮಾನವಾಗಿ ಕಾಣುವ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
1948ರ ಡಿಸೆಂಬರ್ 10ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು (UDHR) ಅಂಗೀಕರಿಸಿತು. ಈ ಐತಿಹಾಸಿಕ ಕ್ಷಣದ ನೆನಪಿಗಾಗಿ ಪ್ರತಿ ವರ್ಷ ಡಿಸೆಂಬರ್ 10ರಂದು ಈ ದಿನವನ್ನು ಆಚರಿಸಲಾಗುತ್ತದೆ. ಮಾನವ ಹಕ್ಕುಗಳು ಪ್ರತಿಯೊಬ್ಬ ವ್ಯಕ್ತಿಯ ಘನತೆಯ ಬದುಕಿಗೆ ಅತ್ಯಗತ್ಯ. ಸಂವಿಧಾನವು ನಮಗೆ ನೀಡಿರುವ ಮೂಲಭೂತ ಹಕ್ಕುಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಇತರರ ಹಕ್ಕುಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಂವಿಧಾನಾತ್ಮಕವಾಗಿ ಮಾನವ ಹಕ್ಕುಗಳ ಸಂರಕ್ಷಣೆ ಕುರಿತ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಬೋಧಿಸಿದರು. ಜಾತಿ, ಮತ, ಲಿಂಗ ಭೇದವಿಲ್ಲದೆ ಎಲ್ಲರ ಹಕ್ಕುಗಳನ್ನು ರಕ್ಷಿಸಲು ಬದ್ಧರಾಗಿರುವುದಾಗಿ ಎಲ್ಲರೂ ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದರು.
ವೇದಿಕೆಯಲ್ಲಿ ಜಿ.ಪಂ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಕಾನೂನು സേവೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್.ದೊಡಮನಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಇದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ, ವಿವಿಧ ಇಲಾಖೆಗಳ ತಹಸೀಲ್ದಾರರಾದ ಡಾ. ಡಿ.ಎಚ್. ಹೂಗಾರ, ಬಸವರಾಜ ಬೆಣ್ಣಿಶಿರೂರ, ಪ್ರಭಾಕರ ಭಟ್, ಪ್ರವೀಣ ಹುಚ್ಚನ್ನವರ, ಶಿರಸ್ತೆದಾರರಾದ ಕೆ. ಶ್ರೀಧರ, ಶಿವಕುಮಾರ ಮೇಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ, ಆರ್.ಸಿ.ಎಚ್.ಓ ಅಧಿಕಾರಿ ಡಾ. ಸುಜಾತಾ ಹಸವಿಮಠ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾನೂನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಆದರೆ ಇದೇ ವೇಳೆ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾರಿಗೂ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳು ಯಾವುದೇ ಅಂಜಿಕೆಯಿಲ್ಲದೆ, ನಿರ್ಭೀತಿಯಿಂದ ಓಡಾಡುವುದು ಕೂಡ ಅವರ ಮೂಲಭೂತ ಮಾನವ ಹಕ್ಕು ಎಂದು ಡಿಸಿ ದಿವ್ಯ ಪ್ರಭು ತಿಳಿಸಿದರು.



