ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಲ್ಲಿ ಮನೆಗಳನ್ನು ನಿರ್ಮಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ 863 ಮನೆಗಳು ಮಂಜೂರಾಗಿದ್ದು, ಮನೆ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆಸಲಾಗುತ್ತಿರುವ ಕುರಿತು ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕೂಡಲೇ ಈ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಸ್ಲಂ ಬೋರ್ಡ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್,ಮಾನ್ವಿ ಮಾತನಾಡಿ, ಅಧಿಕಾರಿಗಳು ಸ್ಲಂ ಸಮಿತಿಯ ಮನವಿಗೆ ಪ್ರಾಮಾಣಿಕವಾಗಿ ಸ್ಪಂದಿಸದೇ ನಮ್ಮ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಸ್ಲಂ ಬೋರ್ಡ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸೇರಿ ಸ್ಲಂ ಜನರಿಗೆ ಮೋಸ ಮಾಡಿ ಸರ್ಕಾರದ ವಸತಿ ಯೋಜನೆಯ ಮನೆಗಳನ್ನು ಮಾರಾಟ ಮಾಡುವ ವ್ಯವಹಾರಕ್ಕೆ ನಿಂತಿರುವುದನ್ನು ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಖಂಡಿಸುತ್ತೇವೆ. ಹಕ್ಕುಪತ್ರಗಳ ನೋಂದಣಿಯಲ್ಲಿ ಈ ಹಿಂದೆ ನಡೆಸಲಾಗಿರುವ ಹಣದ ಅವ್ಯವಹಾರ ಕುರಿತು ಕಚೇರಿ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸ್ಲಂ ಸಮಿತಿಯ ಪ್ರಮುಖರಾದ ಅಶೋಕ ಕುಸಬಿ, ಪರವೀನಬಾನು ಹವಾಲ್ದಾರ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ದುರ್ಗಪ್ಪ ಮಣ್ಣವಡ್ಡರ, ಮೆಹರುನಿಸಾ ಡಂಬಳ, ಮೈಮುನ ಬೈರಕದಾರ, ಆಯೀಷಾ ಉಮಚಗಿ, ಪ್ರೇಮಾ ಮಣವಡ್ಡರ, ಸುಶೀಲಮ್ಮ ಗೊಂದಾರ, ಮೆಹಬೂಬಸಾಬ ಬಳ್ಳಾರಿ, ಸಾಕ್ರುಬಾಯಿ ಗೋಸಾವಿ, ಖಾಜೇಸಾಬ ಇಸ್ಮಾಯಿಲನವರ, ಮಕ್ತುಮಸಾಬ ಮುಲ್ಲಾನವರ, ಈರಮ್ಮ ಬೇವಿನಮರದ, ನಾಗರಾಜ ಮಣವಡ್ಡರ, ದಾದು ಗೋಸಾವಿ, ಮಲೇಶಪ್ಪ ಕಲಾಲ, ಚಂದ್ರಪ್ಪ ಲಕ್ಕುಂಡಿ, ಶಂಕ್ರಪ್ಪ ಹದ್ಲಿ ಮುಂತಾದವರು ಭಾಗವಹಿಸಿದ್ದರು.