ವಿಜಯಸಾಕ್ಷಿ ಸುದ್ದಿ, ಗದಗ: ಕಾಲೇಜು ಶಿಕ್ಷಣ ಇಲಾಖೆ ನಡೆಸುತ್ತಿರುವ ಕೌನ್ಸೆಲಿಂಗ್ ನಿಲ್ಲಿಸಬೇಕು, ಸೇವೆಯಲ್ಲಿ ಇರುವವರನ್ನು ಮುಂದುವರೆಸಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ನಗರದಲ್ಲಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿ ಸತ್ಯಾಗ್ರಹ ಬುಧವಾರ 10ನೇ ದಿನಕ್ಕೆ ಕಾಲಿಟ್ಟಿದ್ದು, ಗಾನಯೋಗಿ ಪಂಚಾಕ್ಷರಿ ಪುಟ್ಟರಾಜ ಕಲಾ ಬಳಗದಿಂದ ಸಂಗೀತ ಸೇವೆ ಸಲ್ಲಿಸಿ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರ ಮಾತನಾಡಿ, ಸರ್ಕಾರ ಶೀಘ್ರವಾಗಿ ಅತಿಥಿ ಉಪನ್ಯಾಸಕರಿಗೆ ನ್ಯಾಯ ನೀಡಬೇಕು. ಇಂತಹ ಪ್ರಜ್ಞಾವಂತರು ಬೀದಿಯಲ್ಲಿ ಕುಳಿತು ನ್ಯಾಯ ಕೇಳುವ ಪರಿಸ್ಥಿತಿ ಬಂದೊದಗಿದ್ದು ಖೇದಕರ ಸಂಗತಿ. ಅವರಿಗೆ ನ್ಯಾಯ ನೀಡಿ ಎಂದು ಹೇಳಿದರು.
ಹಿರಿಯ ಪತ್ರಕರ್ತ ಜಗದೀಶ್ ಕುಲಕರ್ಣಿ ಮಾತನಾಡಿ, ವರ್ಷಗಳ ಕಾಲ ಬಹಳ ಕಡಿಮೆ ವೇತನದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಟ್ಟಿದ ತಾವು ಧೈರ್ಯಗುಂದಬಾರದು. ನಿಮ್ಮ ನ್ಯಾಯಯುತವಾದ ಹೋರಾಟಕ್ಕೆ ಬೆಲೆ ಸಿಕ್ಕೇ ಸಿಗುತ್ತದೆ ಎಂದು ಆತ್ಮವಿಶ್ವಾಸ ತುಂಬಿದರು.
ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿ, ಈ ಹೋರಾಟದಲ್ಲಿ ನಮಗೂ ಕೂಡಾ ಬೋಧನೆ ಮಾಡಿದ ಗುರುವೃಂದವಿದೆ. ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರೆಸುವುದರ ಮೂಲಕ ನ್ಯಾಯ ನೀಡಬೇಕು ಎಂದು ಹೇಳಿದರು.
ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನಮಂತಗೌಡ ಆರ್. ಕಲ್ಮನಿ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಉನ್ನತ ಶಿಕ್ಷಣ ಸಚಿವರಾದ ಡಾ. ಎಮ್.ಸಿ. ಸುಧಾಕರ ಅವರು ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಹೋರಾಟದಲ್ಲಿ ಗದಗ, ಬಾಗಲಕೋಟೆ, ರಾಣೆಬೆನ್ನೂರ, ಅಂಕೊಲಾ, ಶಿರಸಿ, ಚಿಕ್ಕಮಗಳೂರು, ವಿಜಯನಗರ, ಹಾವೇರಿ, ಧಾರವಾಡ, ಕಡೂರ, ಕಲಘಟಗಿ, ಬಳ್ಳಾರಿ, ಹಾವೇರಿ, ತುಮಕೂರು, ಕೊಡಗು, ಬೆಳಗಾವಿ, ಚಿಕ್ಕಮಗಳೂರು, ಉಡುಪಿ, ಕಾರ್ಕಾಳ, ಹೊಸಪೇಟೆ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಅತಿಥಿ ಉಪನ್ಯಾಸಕರು ಇದ್ದರು.



