ವಿಜಯಸಾಕ್ಷಿ ಸುದ್ದಿ, ಗದಗ: `ಪ್ರಭುವಿನೆಡೆಗೆ ಪ್ರಭುತ್ವ’ ಎಂಬ ವಿನೂತನ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದು, ಪ್ರಜಾಪ್ರಭುತ್ವದ ಆಡಳಿತದಲ್ಲಿ ಪ್ರಜೆಗಳಿಗೆ ತೀವ್ರವಾಗಿ ಸ್ಪಂದಿಸಿ, ಪಾರದರ್ಶಕತೆ ಮೆರೆಯಲು ದೊಡ್ಡ ಹೆಜ್ಜೆ ಇಟ್ಟಿದ್ದೇವೆ. ಇಂದು ಪ್ರ.ಪ್ರ ಕಾರ್ಯಕ್ರಮದ 6ನೇ ಎಸ್ಒಎಸ್ ಲೋಕಾರ್ಪಣೆಗೊಳಿಸಲಾಗಿದೆ ಎಂದು ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಅವರು ಗುರುವಾರ ಗದಗ ನಗರದ ಮುಳಗುಂದ ನಾಕಾದಲ್ಲಿ ಪ್ರ.ಪ್ರ ಕಾರ್ಯಕ್ರಮದ 6ನೇ ಎಸ್ಒಎಸ್ ಲೋಕಾರ್ಪಣೆಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗದಗ ನಗರದಲ್ಲಿ ಈ ಕಲ್ಪನೆ ದೇಶದಲ್ಲಿಯೇ ಮೊದಲ ಬಾರಿಗೆ ನಡೆಯುತ್ತಿದೆ. ಹಿಂದಿನ ಅರಸರ ಕಾಲದಲ್ಲಿ ನಾಗರಿಕರಿಗೆ ತೊಂದರೆ ಆದಾಗ ನ್ಯಾಯದ ಘಂಟೆಯನ್ನು ಬಾರಿಸಬೇಕಾಗಿತ್ತು. ಆದರೆ, ಈಗ ಕಾಲ ಬದಲಾಗಿದ್ದು, ತಂತ್ರಜ್ಞಾನಕ್ಕೆ ತಕ್ಕಂತೆ ಬಟನ್ ಒತ್ತುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಬಟನ್ ಒತ್ತಿದಾಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿರುವ ಕಮಾಂಡ್ ಸೆಂಟರ್ನವರು ಮಾಹಿತಿ ಪಡೆಯುತ್ತಾರೆ. ಜನರ ದೂರು ಆಲಿಸಿ ತಕ್ಷಣ ಸಂಬಂಧಿಸಿದವರಿಗೆ ಕಳುಹಿಸಿಕೊಡುತ್ತಾರೆ. ಇದರಿಂದ ಕೆಲವೇ ಗಂಟೆಗಳಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನಗರದ 16ನೇ ವಾರ್ಡ್ ಪೌರ ಕಾರ್ಮಿಕರಾದ ಮಂಜುಳಾ ದುರಗಪ್ಪ ಬಂಗಿ ಅವರು ಪ್ರ.ಪ್ರ ಮೂಲಕ ತಮಗೆ ಮನೆ ಮಂಜೂರು ಮಾಡಿಕೊಡುವಂತೆ ಅಹವಾಲನ್ನು ನಿವೇದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಪ್ರಭು ಬುರಬುರೆ, ಸಿದ್ದು ಪಾಟೀಲ, ಅಶೋಕ ಮಂದಾಲಿ, ಎಸ್.ಎನ್ ಬಳ್ಳಾರಿ, ಗಂಗಪ್ಪ ಎಂ, ಎ.ಎ. ಕಂಬಾಳಿಮಠ, ರಾಜಾರಾಮ್ ಪವಾರ, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ ಮುಂತಾದವರು ಉಪಸ್ಥಿತರಿದ್ದರು.
ಸಾಮಾನ್ಯರು ಅಂಜಿಕೆ, ಭಯ ಇಲ್ಲದೆ ನಿರ್ಭಯವಾಗಿ, ನಿಸ್ಸಂದೇಹದಿಂದ ದೂರು ನೀಡುವ ವಿನೂತನ ವ್ಯವಸ್ಥೆ ಇದಾಗಿದ್ದು, ಇದರಿಂದ ಆಡಳಿತ ವ್ಯವಸ್ಥೆ ಚುರುಕುಗೊಳ್ಳುತ್ತದೆ, ದೂರು ನೀಡಿದ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ಸಾರ್ವಜನಿಕರು ಯಾವುದೇ ಭಯವಿಲ್ಲದೆ ಡಿಸಿ, ಎಸ್ಪಿ, ಸಿಇಓ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು.
-
ಎಚ್.ಕೆ. ಪಾಟೀಲ.
ಜಿಲ್ಲಾ ಉಸ್ತುವಾರಿ ಸಚಿವರು.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಹಿರಿಯ ನಾಗರಿಕರ ರಕ್ಷಣೆ, ಅಕ್ರಮ ಮದ್ಯ ಮಾರಾಟ, ರಸ್ತೆ ಸುರಕ್ಷತಾ ಕ್ರಮ, ಸಮಾಜ ದ್ರೋಹಿ ಚಟುವಟಿಕೆ, ಅನುಮಾನಾಸ್ಪದ ವಸ್ತುಗಳು, ಜಮೀನು ಹಕ್ಕುಗಳ ಪ್ರಕರಣ, ಪಿಂಚಣಿ ಸಂಬಂಧಿಸಿದ ಪ್ರಕರಣ, ಪಂಚಾಯ್ತಿ ಸೇವೆಗೆ ಸಂಬಂಧಿಸಿ ಸಾರ್ವಜನಿಕರು ಪ್ರ.ಪ್ರ ಮೂಲಕ ದೂರು ಸಲ್ಲಿಸಬಹುದಾಗಿದೆ.



