ಮೈಸೂರು: ಹಳೆಯ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಕ್ರೂರ ಹಲ್ಲೆ ನಡೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ.
ಪೂರ್ಣಿಮಾ ಎಂಬ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದ ವೇಳೆ, ಆಕೆಯ ಸೋದರ ಮಾವ ಸೋಮಣ್ಣ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ನೀನು ಓದಬಾರದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬಾರದು ಎಂಬ ದ್ವೇಷದಿಂದಲೇ ಹಲ್ಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪೂರ್ಣಿಮಾ ಸೋದರ ಮಾವನ ಆಶ್ರಯದಲ್ಲೇ ಬೆಳೆದಿದ್ದರೂ ಸಹ, ಶಿಕ್ಷಣ ಮುಂದುವರಿಸುತ್ತಿರುವುದಕ್ಕೆ ಕೋಪಗೊಂಡು ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ ಸೋಮಣ್ಣ ಹಾಗೂ ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಪೂರ್ಣಿಮಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮಣ್ಣ ಸೇರಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



