ವಿಜಯಸಾಕ್ಷಿ ಸುದ್ದಿ, ಗದಗ : ಸರಕಾರದ ಆದೇಶದನ್ವಯ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಯಾದ ಹೆಸರುಕಾಳು ಹಾಗೂ ಸೂರ್ಯಕಾಂತಿ ಬೆಳೆಗಳಿಗೆ ಮೂರು ದಿನದೊಳಗಾಗಿ ಖರೀದಿ ಕೇಂದ್ರ ಆರಂಭವಾಗಲಿದೆ ಎಂದು ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರಕಾರವು ಈಗಾಗಲೇ ಹೆಸರುಕಾಳು, ಸೂರ್ಯಕಾಂತಿ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನಿಗದಿಪಡಿಸಿ ಆದೇಶಿಸಿದೆ. ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಹೆಸರುಕಾಳು ಬೆಳೆಗಳನ್ನು ಖರೀದಿಸಲು ಪ್ರತಿ ಕ್ವಿಂಟಾಲ್ಗೆ 8,682 ರೂ.ನಂತೆ ಪ್ರತಿ ಎಕರೆಗೆ ೨ ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಿ ರೈತರಿಗೆ ಅನುಕೂಲವಾಗುವಂತೆ ಖರೀದಿಸಲಾಗುತ್ತದೆ.
ಅದರಂತೆ ಸೂರ್ಯಕಾಂತಿ ಬೆಳೆಯನ್ನು ಪ್ರತಿ ಕ್ವಿಂಟಾಲ್ಗೆ 7,280 ರೂ.ನಂತೆ ಪ್ರತಿ ಎಕರೆಗೆ 3 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಖರೀದ ಪ್ರಮಾಣ ನಿಗದಿಪಡಿಸಿ ಖರೀದಿಸಲಾಗುತ್ತದೆ.
ಮೂರು ದಿನದೊಳಗಾಗಿ ಖರೀದಿ ಕೇಂದ್ರಗಳನ್ನು ತೆರೆದು ನೊಂದಣಿ ಕಾರ್ಯ ಪ್ರಾರಂಭವಾಗಲಿದೆ. ಆದ್ದರಿಂದ ರೈತರು ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ತಮ್ಮ ಬೆಳೆಗಳಿಗೆ ಸೂಕ್ತ ಬೆಲೆಯನ್ನು ಪಡೆಯಬಹುದಾಗಿದೆ. ಜಿಲ್ಲೆಯ ಎಲ್ಲಾ ರೈತರು ಇದರ ಸದುಪಯೋಗ ಪಡೆಕೊಳ್ಳಬೇಕು ಎಂದು ಜಿ.ಎಸ್. ಪಾಟೀಲ ಮನವಿ ಮಾಡಿದ್ದಾರೆ.