HomeGadag Newsಪಿಡಿಪಿಎಸ್ ಯೋಜನೆಯಡಿ ಮೆಕ್ಕೆಜೋಳ ಖರೀದಿ

ಪಿಡಿಪಿಎಸ್ ಯೋಜನೆಯಡಿ ಮೆಕ್ಕೆಜೋಳ ಖರೀದಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಸಕ್ತ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ (ಪಿಡಿಪಿಎಸ್) ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಲ್‌ಗೆ 2150ರಂತೆ ಸರ್ಕಾರ ಜನವರಿ 4ರಿಂದ ಆದೇಶ ಹೊರಡಿಸಿದೆ. ಮೆಕ್ಕೆಜೋಳವನ್ನು ರಾಜ್ಯ ಸಹಕಾರಿ ಮಾರಾಟ ಮಂಡಳಿ ನಿಯಮಿತ ಇವರ ಮುಖಾಂತರ ಖರೀದಿಸಲು ತಿಳಿಸಿದೆ. ಪ್ರಸಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಪ್ರತಿ ಕ್ವಿಂಟಲ್‌ಗೆ 1,900ರಲ್ಲಿ ವಹಿವಾಟಾಗುತ್ತಿದ್ದು, ವ್ಯತ್ಯಾಸದ ಮೊತ್ತ ರೂ. 250ನ್ನು ಸರ್ಕಾರದ ನಿಯಮಾನುಸಾರ ಅರ್ಹ ರೈತರಿಗೆ ತಲುಪಿಸುವ ಕ್ರಮ ಸಮರ್ಪಕವಾಗಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆದೇಶಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಮೆಕ್ಕೆಜೋಳ ಉತ್ಪನ್ನವನ್ನು ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕೃಷಿ ಉತ್ಪನ್ನ ಮಾರುಕಟ್ಟೆ /ಉಪ ಮಾರುಕಟ್ಟೆಗಳಲ್ಲಿ ಯುಎಂಪಿ ವೇದಿಕೆ ಮೂಲಕ 3.86 ಲಕ್ಷ ಕ್ವಿಂಟಲ್ ಪ್ರಮಾಣದಲ್ಲಿ ಸರ್ಕಾರದ ಆದೇಶದನ್ವಯ ವಹಿವಾಟು ಮಾಡಲು ತೀರ್ಮಾನಿಸಲಾಗಿದ್ದು, ಅದರಂತೆ ಕ್ರಮ ವಹಿಸುವಂತೆ ಸೂಚಿಸಿದರು.

ಈ ಯೋಜನೆಯಿಂದ ಪ್ರತಿ ಎಕರೆಗೆ 12 ಕ್ವಿಂಟಲ್‌ನತೆ, ಫ್ರುಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಲ್‌ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡಬೇಕು. ಮೆಕ್ಕೆಜೋಳದ ಎಫ್.ಎ.ಕ್ಯೂ ಗುಣಮಟ್ಟವನ್ನು ಕಡ್ಡಾಯವಾಗಿ ಪರಿಶೀಲಿಸಿ ದೃಢೀಕರಿಸಲು ತಾಂತ್ರಿಕ ಅಧಿಕಾರಿಗಳನ್ನು ನೇಮಿಸಬೇಕು. ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಎಥೆನಾಲ್ ಉತ್ಪಾದನೆಗಾಗಿ, ಕುಕ್ಕುಟ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಹಾಗೂ ಕೆಎಂಎಫ್‌ಗಳಿಗೆ ಅವಶ್ಯವಿರುವ ಮೆಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಸದರಿ ಯೋಜನೆಯು ಅನ್ವಯಿಸದಂತೆ ತಂತ್ರಾಂಶದಲ್ಲಿ ಇಂದೀಕರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸರ್ಕಾರದಿಂದ ಮೆಕ್ಕೆಜೋಳದ ಬೆಲೆ ವ್ಯತ್ಯಾಸ ಮೊತ್ತ ಪಾವತಿಯನ್ನು ಡಿಬಿಟಿ ಮೂಲಕ ರೈತರಿಗೆ ಪಾವತಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸದರಿ ಯೋಜನೆಯಡಿ ರೈತರ ನೋಂದಣಿ ಕಾರ್ಯವನ್ನು ಯೋಜನಾ ಅನುಷ್ಟಾನದ ಏಜೆನ್ಸಿ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಪಿಎಂಸಿ ಪ್ರಾಂಗಣದಲ್ಲಿ ತೆರೆಯುವ ಕೇಂದ್ರಗಳಲ್ಲಿ ಮಾತ್ರ ನೋಂದಾಯಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಸದರಿ ಯೋಜನೆಯ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯ ಗದಗ, ನರಗುಂದ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ಎಪಿಎಂಸಿ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಹಕಾರ ಸಂಘಗಳ ಇಲಾಖೆ ಅಧಿಕಾರಿಗಳು, ಮಾರ್ಕೆಟಿಂಗ್ ಫೆಡರೇಷನ್ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಇತರರು ಹಾಜರಿದ್ದರು.

ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ರಾಜ್ಯಾದ್ಯಂತ ಒಂದು ತಿಂಗಳ ಅವಧಿಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿಯೇ ಅರ್ಹ ರೈತರಿಗೆ ಸೌಲಭ್ಯ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ರಾಜ್ಯ ಸಹಕಾರ ಮಾರಾಟ ಮಂಡಳ ಮತ್ತು ಎಪಿಎಂಸಿ ಸಮಿತಿಯ ಕಾರ್ಯದರ್ಶಿಗಳು ದಿನಂಪ್ರತಿ ಆವಕವಾಗುವ ಮೆಕ್ಕೆಜೋಳದ ಉತ್ಪನ್ನದ ಪ್ರಮಾಣ, ವಹಿವಾಟಾದ ಪ್ರಮಾಣ ಮತ್ತು ರೈತರ ಸಂಖ್ಯೆ ಇತ್ಯಾದಿ ವಿವರಗಳನ್ನು ಅಂದಿನ ದಿನವೇ ಯುಎಂಪಿ ವೇದಿಕೆಯಲ್ಲಿ ತಪ್ಪದೇ ಇಂದೀಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!