ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ : ಎನ್.ಎಚ್. ಕೋನರೆಡ್ಡಿ

0
Quarterly progress review meeting
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಗ್ರಾಮೀಣ ಭಾಗದಲ್ಲಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ತುರ್ತಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.

Advertisement

ಸೋಮವಾರ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ನವಲಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಗ್ರಾಮೀಣ ಭಾಗದಲ್ಲಿ ರಸ್ತೆಗಳು ಹದೆಗೆಟ್ಟಿವೆ. ಅಧಿಕಾರಿಗಳು ಒಟ್ಟಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರಕ್ಕೆ ಗೌರವ ತರುವ ನಿಟ್ಟಿನಲ್ಲಿ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಅವರು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ವಸತಿ ನಿಲಯಗಳ ಪ್ರವೇಶದಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು. ಉಳಿದ ಸ್ಥಾನಗಳನ್ನು ಬೇರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ನೀಡಬಹುದು. ಹೊಸ ವಸತಿ ನಿಲಯಗಳು ಅವಶ್ಯಕತೆಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೆಚ್ಚು ವಸತಿ ನಿಲಯಗಳನ್ನು ನಿರ್ಮಿಸಿ ಕೊಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ಗ್ರಾಮೀಣ ಭಾಗದಲ್ಲಿನ ವಿದ್ಯುತ್ ಕಂಬಗಳು ನಿರಂತರ ಮಳೆಯಿಂದಾಗಿ ಉರುಳಿವೆ. ಪುನಃ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ( ಟ್ರಾನ್ಸಫಾರ್ಮರ್)ಗಳನ್ನು ಅಳವಡಿಸಲು ಹೆಸ್ಕಾಂ ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕರು ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಠಿಕ ಆಹಾರವನ್ನು ಒದಗಿಸಬೇಕು. ಕಳಪೆ ಆಹಾರವನ್ನು ನೀಡಬಾರದು. ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದ ನಂತರ ವಿತರಿಸಬೇಕು. ಬೇಡಿಕೆ ಅನುಸಾರವಾಗಿ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಈ ಕುರಿತು ಅಧಿಕಾರಿಗಳು ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಗಂಗೋತ್ರಿ, ರಾಣಿ ಚಿಕ್ಕನಗೌಡರ, ಮಹಾಲಕ್ಷ್ಮಿ ಅವರಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು. ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರು ಹಾಗೂ ಗ್ಯಾರಂಟಿ ಯೋಜನೆಯ ನವಲಗುಂದ ತಾಲೂಕಿನ ಅಧ್ಯಕ್ಷ ವರ್ಧಮಾನ ಹಿರೇಗೌಡ, ಅಣ್ಣಿಗೇರಿ ತಾಲೂಕು ಅಧ್ಯಕ್ಷ ಮಂಜುನಾಥ ಮಾಯಣ್ಣವರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಗಳ ಪ್ರಗತಿ ವರದಿಯನ್ನು ಸಭೆಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ, ವಿವಿಧ ತಾಲೂಕುಗಳ ತಹಸೀಲ್ದಾರರಾದ ಸುಧೀರ ಸಾಹುಕಾರ, ಪ್ರಕಾಶ ನಾಶಿ, ಎಂ.ಜಿ. ದಾಸಪ್ಪನವರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಾಗ್ಯಶ್ರೀ ಜಹಗೀರದಾರ್, ಮದನಕುಮಾರ ಸಿಂಧೆ, ಆಡಳಿತಾಧಿಕಾರಿ ಲಲಿತಾ ಲಮಾಣಿ ಸೇರಿದಂತೆ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ತಾಲೂಕುಗಳ ತಾಲೂಕಾ ಮಟ್ಟದ ಅಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಜಾನುವಾರುಗಳಿವೆ. ಗ್ರಾಮೀಣ ಭಾಗದಲ್ಲಿ ದೇಸೀ ತಳಿಯ ಜಾನುವಾರುಗಳು ಕಾಣಸಿಗುತ್ತಿಲ್ಲ. ಹೀಗಾಗಿ ದೇಸೀ ತಳಿಯ ಜಾನುವಾರುಗಳನ್ನು ಹೆಚ್ಚಿಸಬೇಕು. ಭದ್ರಾಪುರ ಹಾಗೂ ಕೋಳಿವಾಡ ಸುತ್ತಮುತ್ತಲಿನ ಹೊಲಗಳಿಗೆ ಜಿಂಕೆ, ಚಿಗರಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ರಸ್ತೆಗಳ ಬದಿಗಳಲ್ಲಿ ಹಣ್ಣು ಬಿಡುವ ಸಸಿಗಳನ್ನು ಹೆಚ್ಚಾಗಿ ನೆಡಬೇಕು ಎಂದರಲ್ಲದೆ, ಮುಂದಿನ ದಿನಗಳಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಸಸಿಗಳನ್ನು ನೆಡುವಂತೆ ಶಾಸಕ ಎನ್.ಎಚ್. ಕೋನರೆಡ್ಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.


Spread the love

LEAVE A REPLY

Please enter your comment!
Please enter your name here