ಶಿವಮೊಗ್ಗ/ಹಾವೇರಿ: ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಶಿವಮೊಗ್ಗ ಹಾಗೂ ಹಾವೇರಿ ಜಿಲ್ಲೆಗಳ ಜನತೆಗೆ ವರುಣ ದೇವ ಕೊಂಚ ತಂಪಿನ ಅನುಭವ ನೀಡಿದ್ದಾನೆ.
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಇನ್ನೂ ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ 37 ರಿಂದ 38 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗಿದ್ದ ತಾಪಮಾನದಿಂದ ಜನರು ಬೇಸತ್ತಿದ್ದರು. ಇದೀಗ ಸುರಿದ ಮಳೆಯಿಂದ ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸುಮಾರು 20 ನಿಮಿಷಗಳ ಕಾಲ ಧಾರಾಕಾರ ಮಳೆಯಾಗಿದ್ದು, ಬಿಸಿಲಿನಿಂದ ಒಣಗುತ್ತಿದ್ದ ಬೆಳೆಗಳಿಗೆ ಜೀವ ಬಂದಂತಾಗಿದೆ. ಮಳೆಯಾಗಿದ್ದಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.



