ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಿಂದ ಹರಡಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಬೇಕು. ಗ್ರಾಮಗಳಲ್ಲಿಯ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ಹಾಗೂ ಸರಬರಾಜುವಿನ ಬಗ್ಗೆ ನಿರಂತರವಾಗಿ ಕ್ರಮವಹಿಸಬೇಕು. ಸಾಂಕ್ರಾಮಿಕ ರೋಗಗಳಾದ ಕರಳುಬೇನೆ, ಕಾಲರಾ, ವಿಷಮ ಶೀತಜ್ವರ, ಕಾಮಾಲೆ, ಕೆಎಫ್ಡಿ, ಹಕ್ಕಿಜ್ವರ, ನಾಯಿಕಡಿತ ಹಾಗೂ ಹಾವು ಕಡಿತ ಕುರಿತು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಿಂದ ಹರಡಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗೃತೆ ವಹಿಸಬೇಕು. ಕುಡಿಯುವ ನೀರಿನ ಪೈಪ್ಲೈನ್ಗಳಲ್ಲಿ ಕಲುಷಿತ ನೀರು ಸೇರಿಕೊಳ್ಳದ ಹಾಗೆ ಕ್ರಮವಹಿಸಲು ಸಂಬಂಧಪಟ್ಟ ಗ್ರಾ.ಪಂ ಅಧಿಕಾರಿಗಳಿಗೆ ತಿಳಿಸಬೇಕು. ಎಲ್ಲ ಓಎಚ್ಟಿಗಳನ್ನು ನಿಯಮಿತವಾಗಿ ಸರಿಯಾಗಿ ಸ್ವಚ್ಛಗೊಳಿಸಲು ಕ್ರಮ ವಹಿಸಬೇಕು. ಓಎಚ್ಟಿಗಳಲ್ಲಿ ಶೇಖರಿಸಿದ ನೀರನ್ನು ಕ್ರಮಬದ್ಧವಾಗಿ ಕ್ಲೋರಿನೇಷನ್ ಮಾಡಿ ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೆಎಫ್ಡಿ ನಿಯಂತ್ರಣಕ್ಕೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು. ನಾಯಿ ಕಡಿತಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು ಜಿಲ್ಲೆಯಲ್ಲಿ ಸುಮಾರು 1000ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ನಾಯಿ ಕಡಿತಕ್ಕೆ ಸಂಬಂಧಿಸಿದಂತೆ ಲಸಿಕೆಯನ್ನು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕಾಯ್ದಿರಿಸಿಡಲು ನಿರ್ದೇಶಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಸೊಳ್ಳೆಗಳಿಂದ ಹರಡುಬಹುದಾದ ರೋಗಗಳನ್ನು ತಡೆಗಟ್ಟಲು ಚರಂಡಿ, ಗಟಾರಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ಲಾರ್ವಾ ಸಮೀಕ್ಷೆಯನ್ನು ತೀವ್ರಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ್ ಮಾತನಾಡಿ, ಜಿಲ್ಲೆಯಲ್ಲಿ 2024ರಲ್ಲಿ 410 ಡೆಂಘೀ ಪ್ರಕರಣಗಳು ಹಾಗೂ 14 ಚಿಕುನ್ಗುನ್ಯಾ ಪ್ರಕರಣಗಳು ವರದಿಯಾಗಿವೆ. ಗದಗ ಜಿಲ್ಲೆಯು ಕೂಡ ಕೆಎಫ್ಡಿ ಬಾಧಿತ ಎಂಡಮಿಕ್ ಜಿಲ್ಲೆಯಾಗಿದ್ದು, ಕೆಎಫ್ಡಿ ವೈರಸ್ನಿಂದ ಸೋಂಕಿತ ಉಣ್ಣೆಯು ಕಚ್ಚುವುದರಿಂದ ಹರಡುವ ವೈರಲ್ ಜ್ವರವಾಗಿದೆ. ಈ ಖಾಯಿಲೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಜಿಲ್ಲೆಯಿಂದ ಈಗಾಗಲೇ 11 ರಕ್ತದ ಮಾದರಿಗಳನ್ನು ಹಾಗೂ 16-ಟಿಕ್ಪೂಲ್ ಮಾದರಿಗಳನ್ನು ಕೆಎಫ್ಡಿ ವೈರಸ್ ಪತ್ತೆಗಾಗಿ ವಿಡಿಎಲ್ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲ ರಕ್ತದ ಮಾದರಿಗಳು ನೆಗೆಟಿವ್ ಎಂದು ವರದಿಯಾಗಿದ್ದು, ಟಿಕ್ಪೂಲ್ ಮಾದರಿಗಳ ಫಲಿತಾಂಶ ನಿರೀಕ್ಷಣೆಯಲ್ಲಿವೆ. ಜಿಲ್ಲೆಯಲ್ಲಿ ಯಾವುದೇ ಮಂಗಗಳ ಸಾವಿನ ವರದಿಯಾಗಿಲ್ಲ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಜಿಲ್ಲೆಯಲ್ಲಿ 2024ರಲ್ಲಿ ಒಟ್ಟು 206 ಹಾವು ಕಡಿತದ ಪ್ರಕರಣಗಳು ವರದಿಯಾಗಿದ್ದು, ಪ್ರಕರಣಗಳಿಗೆ ಸಂಬಂಧಿಸಿದಂತೆ ಲಸಿಕೆಗಳನ್ನು ಅಗತ್ಯಕ್ಕನುಗುಣವಾಗಿ ಆರೋಗ್ಯ ಸಂಸ್ಥೆಗಳಲ್ಲಿ ಕಾಯ್ದಿರಿಸಬೇಕು. ಹಾವು ಕಡಿತದ ಹೊಸದಾಗಿ ನಿರ್ದೇಶನಾಲಯದ ಮಾರ್ಗಸೂಚಿಯನ್ನು ಅನುಸರಿಸಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ತರಬೇತಿಯನ್ನು ನೀಡಲು ಹಾಗೂ ರಾಷ್ಟ್ರೀಯ ಅಯೋಡಿನ್ ಕೊರತೆಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಅಯೋಡಿನ್ ಮಹತ್ವವನ್ನು ತಿಳಿಸುವ ಆರೋಗ್ಯ ಶಿಕ್ಷಣವನ್ನು ನೀಡಲು ಸಭೆಯಲ್ಲಿ ಸೂಚಿಸಲಾಯಿತು.