ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ್ ಫ್ರೀ ನಂ: 1077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರಗಳಲ್ಲಿ ಕರೆಗಳನ್ನು ಸ್ವೀಕರಿಸಲು ವಾರದ 7 ದಿನಗಳಲ್ಲಿ ಹಗಲು-ರಾತ್ರಿ ಪಾಳಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ.
ಸಿಬ್ಬಂದಿಯವರು ನಿಗದಿತ ಸಮಯದಲ್ಲಿ ಸಹಾಯವಾಣಿ ಕೇಂದ್ರದಲ್ಲಿ ಹಾಜರಿದ್ದು, ದೂರವಾಣಿಯ ಮೂಲಕ ಸ್ವೀಕರಿಸುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಸೀಲ್ದಾರರಿಗೆ ಮತ್ತು ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡುವರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಈ ಸಹಾಯವಾಣಿ ಕೇಂದ್ರ ಮೇಲುಸ್ತುವಾರಿ ಅಧಿಕಾರಿಯನ್ನಾಗಿ ಧಾರವಾಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ ಬಗಲಿ (ದೂರವಾಣಿ ಸಂಖ್ಯೆ: 9148431516) ಅವರನ್ನು ನೇಮಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.



