ವಿಜಯಸಾಕ್ಷಿ ಸುದ್ದಿ, ಗದಗ: ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚಗಳನ್ನು ರಚಿಸಿದೆ. ಗದಗ ಜಿಲ್ಲೆಯಲ್ಲಿ ಒಟ್ಟು 20227 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 4719 ಪ್ರಕರಣಗಳನ್ನು ಗುರುತಿಸಿದ್ದು, ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಮಾರ್ಚ್ 8ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ವಾರ್ತಾಧಿಕಾರಿ ವಸಂತ ಮಡ್ಲೂರ ಉಪಸ್ಥಿತರಿದ್ದರು.
ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡ್ರ ಮಾತನಾಡಿ, ಕಳೆದ ಡಿಸೆಂಬರ್-2024ರಂದು ಜರುಗಿದ ಲೋಕ ಅದಾಲತ್ನಲ್ಲಿ 3042 ಚಾಲ್ತಿ ಪ್ರಕರಣಗಳನ್ನು ಹಾಗೂ 31540 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 34582 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 17 ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ ಎಂದು ಹೇಳಿದರು.