ಐಪಿಎಲ್ನಲ್ಲಿ ಭಾರಿ ಅಭಿಮಾನಿ ಬಳಗ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು ಮುಖಾಮುಖಿಯಾಗಲಿರುವ ಹಿನ್ನೆಲೆ ನಗರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕಟ್ಟು ನಿಟ್ಟಾಗಿ ಮಾಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಸುಮಾರು 2,300 ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಹಿಂದಿನ ಪಂದ್ಯದಲ್ಲಿ ಕಂಡುಬಂದ ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಲು ಈ ಬಾರಿ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರೇಕ್ಷಕರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ಬ್ಯಾಗೇಜ್ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ. ಕಳೆದ ಬಾರಿ ಪಂದ್ಯ ಸಂದರ್ಭದಲ್ಲೇ 70ಕ್ಕೂ ಹೆಚ್ಚು ಮೊಬೈಲ್ಗಳು ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ, ಈ ಬಾರಿ ಕಳ್ಳತನ ತಡೆಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ. ಮೈದಾನದಲ್ಲಿ ಹೆಚ್ಚಿನ ಸೈನ್ಬೋರ್ಡ್ಗಳನ್ನು ಅಳವಡಿಸಲಾಗಿದ್ದು, ಮೈಕ್ ಮೂಲಕ ನಿರಂತರವಾಗಿ ಜಾಗೃತಿ ಸಂದೇಶಗಳನ್ನು ನೀಡಲಾಗುತ್ತಿದೆ.
ಭಾರೀ ಜನಸಂದಣಿಯನ್ನು ನಿಯಂತ್ರಿಸಲು ವಿಶೇಷ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಹಾಗೂ ಮೆಟ್ರೋ ಸಂಚಾರ ವ್ಯವಸ್ಥೆಗಳು ಹಿಂದಿನಂತೆಯೇ ಮುಂದುವರಿಯಲಿವೆ. ಟಿಕೆಟ್ ಇಲ್ಲದವರಿಗೆ ಸ್ಟೇಡಿಯಂ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ನಕಲಿ ಟಿಕೆಟ್ ಮಾರಾಟ ಸೇರಿದಂತೆ ಅಕ್ರಮ ಚಟುವಟಿಕೆಗಳ ಮೇಲೆ ಸಿಸಿಬಿ ಕಣ್ಣಿಟ್ಟಿದ್ದು, ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ.



