ಸಾಧಕರ ಜೀವನ ಚರಿತ್ರೆ ಓದಿ

0
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ವಿದ್ಯಾರ್ಥಿ ಜೀವನದಲ್ಲಿ ಓದುವ ಹಾಗೂ ಬರೆಯುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು. ಸಾಧಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಸ್ಪೂರ್ತಿ ಪಡೆದುಕೊಳ್ಳಬೇಕು ಎಂದು ನರೇಗಲ್ಲ ಪೊಲೀಸ್ ಠಾಣೆಯ ಪಿಎಸ್‌ಐ ಐಶ್ವರ್ಯ ನಾಗರಾಳ ಹೇಳಿದರು.

Advertisement

ನರೇಗಲ್ಲ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಭಾನುವಾರ ವಿದ್ಯಾರ್ಥಿಗಳ ಕಲಿಕಾ ಪ್ರಗತಿಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಬೇಕಾದರೆ ಕನಿಷ್ಠ ಐದು ದಿನಪತ್ರಿಕೆಗಳನ್ನು ಓದುವ ಹಾಗೂ ಪ್ರೌಢಶಾಲಾ ಹಂತದಲ್ಲಿ ಒಂದು ಪತ್ರಿಕೆಯ ಎಲ್ಲಾ ಪುಟಗಳನ್ನು ಓದುವ ಹವಾಸವನ್ನು ರೂಢಿಸಿಕೊಳ್ಳಬೇಕು. ಗಣಿತ, ವಿಜ್ಞಾನ, ಇಂಗ್ಲಿಷ್‌ ನಂತಹ ವಿಷಯಗಳನ್ನು ಪದೇಪದೇ ಬಿಡಿಸುವ ಮೂಲಕ ಸರಳೀಕರಣಕ್ಕೆ ಮುಂದಾಗಬೇಕು. ಹಾಸ್ಟೆಲ್‌ನಲ್ಲಿ ಕಲಿಯಲು ಬಂದಿರುವ ಪ್ರತಿ ಮಗುವಿನ ಪಾಲಕರು ಶ್ರಮಿಕರಾಗಿದ್ದಾರೆ. ಅವರ ಜೀವನ ದುಡಿಮೆಯ ಮೇಲೆ ಅವಲಂಬನೆಯಾಗಿರುತ್ತದೆ. ಅದನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸದ ಕಡೆಗೆ ಮಹತ್ವ ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ವೈದ್ಯ ಡಾ. ಕೆ.ಬಿ. ಧನ್ನೂರ, ಪ್ರತಿದಿನ ಬೆಳಿಗ್ಗೆ ಬೇಗ ಎದ್ದು ಯೋಗ, ವ್ಯಾಯಾಮ, ಪ್ರಾರ್ಥನೆ ಮಾಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಚೆನ್ನಾಗಿ ಓದಿ ಸಾಧನೆ ಮಾಡುವ ಮೂಲಕ ಹಾಸ್ಟೆಲ್ ಹಾಗೂ ನಿಮ್ಮೂರಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.

ಈ ವೇಳೆ ಗದಗ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನರೇಗಲ್ಲ ಪಟ್ಟಣದ ಡಾ. ಆರ್.ಕೆ. ಗಚ್ಚಿನಮಠ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಅರುಣ ಕುಲಕರ್ಣಿ, ನಿಲಯ ಮೇಲ್ವಿಚಾರಕ ಪ್ರಭಾಕರ ಚಲವಾದಿ, ವಸಂತ ರಾಠೋಡ, ಸಿಬ್ಬಂದಿಗಳಾದ ಮಂಜುಳಾ ಕತ್ತಿಶೆಟ್ಟರ, ಸುರೇಶ ಮಾದರ, ಸರೋಜಾ ಲಮಾಣಿ ಇದ್ದರು.


Spread the love

LEAVE A REPLY

Please enter your comment!
Please enter your name here