ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡದಿದ್ದರೆ ಪ್ರಾಣ ತ್ಯಾಗಕ್ಕೂ ಸಿದ್ಧರಾಗಿರುವುದಾಗಿ ದಲಿತ ಮುಖಂಡ ಮೌನೇಶ ಹಾದಿಮನಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲರು ನಾಲ್ಕು ಬಾರಿ ಶಾಸಕರಾಗಿ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಪಕ್ಷ ವಹಿಸಿದ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದರೂ ಸಚಿವ ಸ್ಥಾನ ನೀಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿ ಬಾರಿಯೂ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೆ ಪಕ್ಷದ ವರಿಷ್ಠರು ನಮ್ಮ ತಾಳ್ಮೆಯ ಹೋರಾಟಕ್ಕೆ ಕಣ್ಣು ತೆರೆಯುತ್ತಿಲ್ಲ. ಪ್ರಾಮಾಣಿಕ ಕಾರ್ಯಕರ್ತರ ಕೂಗಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಈ ಬಾರಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ” ಎಂದು ಅವರು ಎಚ್ಚರಿಸಿದರು.
ರೋಣದ ಪ್ರತಿಷ್ಠಿತ ಪಾಟೀಲರ ಕುಟುಂಬ ಇತಿಹಾಸದುದ್ದಕ್ಕೂ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಉಳಿಸಿಕೊಂಡು ಬಂದಿದೆ. ಮಾಜಿ ಸಂಸದ ಆರ್.ಎಸ್. ಪಾಟೀಲ ಕೂಡ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸಿದ್ದಾರೆ. ಕುಟುಂಬದ ಪ್ರತಿಯೊಬ್ಬರೂ ಜಾತ್ಯಾತೀತ ಮನೋಭಾವ ಹೊಂದಿದ್ದು, ಪಕ್ಷ ಸಂಘಟನೆಗೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಶಾಸಕ ಜಿ.ಎಸ್. ಪಾಟೀಲರು ಪಕ್ಷದ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಬಂದ ಹಿರಿಯ ನಾಯಕರಾಗಿದ್ದು, ಅವರ ಹಿರಿತನಕ್ಕೆ ಗೌರವ ನೀಡಿ ಈ ಬಾರಿ ಸಚಿವ ಸ್ಥಾನ ನೀಡಬೇಕು ಎಂದು ಮೌನೇಶ ಹಾದಿಮನಿ ಆಗ್ರಹಿಸಿದ್ದಾರೆ.
“ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ನಾಯಕರನ್ನು ನಿರ್ಲಕ್ಷಿಸಿದರೆ ಕಾರ್ಯಕರ್ತರ ಆಕ್ರೋಶ ಸ್ಫೋಟಗೊಳ್ಳಲಿದೆ. ಜಿ.ಎಸ್. ಪಾಟೀಲರಿಗೆ ಈ ಬಾರಿ ಸಚಿವ ಸ್ಥಾನ ಸಿಗಲೇಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಅನಿವಾರ್ಯ”ಮೌನೇಶ ಹಾದಿಮನಿ



