ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಮಸೂದೆಗಳ ಹಿಂದಿರುವ ನಿಜವಾದ ಉದ್ದೇಶ ಮಹಿಳಾ ಮೀಸಲಾತಿ ಅಲ್ಲ, ಕ್ಷೇತ್ರಗಳ ಮರುವಿಂಗಡಣೆ ಎಂಬುದಾಗಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪವು ಸಂವಿಧಾನದ ಮೇಲೆ ದಾಳಿ ಸಮಾನವಾಗಿದ್ದು, ಅತ್ಯಂತ ಅಪಾಯಕಾರಿ ಎಂದು ಅವರು ಟೀಕಿಸಿದ್ದಾರೆ. ಈ ಕುರಿತು ಅವರು ಬರೆದ ಲೇಖನವನ್ನು ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಅದನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲೋಕಸಭೆಯ ಬಲವರ್ಧನೆಗೆ ಸಂಬಂಧಿಸಿದ ಯಾವುದೇ ಗಡಿ ನಿರ್ಣಯವು ಗಣಿತದ ಆಧಾರದಲ್ಲಷ್ಟೇ ಅಲ್ಲ, ರಾಜಕೀಯ ಸಮತೋಲನದ ದೃಷ್ಟಿಯಿಂದಲೂ ಸಮಾನವಾಗಿರಬೇಕು ಎಂದು ಒತ್ತಿ ಹೇಳಿದ್ದಾರೆ.
ಇದೇ ವೇಳೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ತೀವ್ರಗೊಂಡಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಬಯಸಿರುವ ಮಸೂದೆಗಳಿಗೆ ಬೆಂಬಲ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳಿಗೆ ಮನವಿ ಮಾಡುತ್ತಿರುವುದನ್ನು ಅವರು ಉಲ್ಲೇಖಿಸಿದ್ದಾರೆ.
2023ರ ಸೆಪ್ಟೆಂಬರ್ನಲ್ಲಿ ಸಂಸತ್ತಿನಲ್ಲಿ ‘ನಾರಿ ಶಕ್ತಿ ವಂದನ ಅಧಿನಿಯಮ–2023’ನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಈ ಕಾಯ್ದೆಯ ಮೂಲಕ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸಲು ಸಂವಿಧಾನದ 334ಎ ವಿಧಿ ಸೇರಿಸಲಾಗಿದೆ. ಆದರೆ ಈ ಮೀಸಲಾತಿ ಮುಂದಿನ ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆಯ ನಂತರವೇ ಜಾರಿಗೆ ಬರಲಿದೆ.
ವಿಪಕ್ಷಗಳು ಈ ಷರತ್ತನ್ನು ಕೇಳಿರಲಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 2024ರ ಲೋಕಸಭಾ ಚುನಾವಣೆಯಿಂದಲೇ ಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದರು. ಆದರೆ ಸರ್ಕಾರ ಅದನ್ನು ಒಪ್ಪಲಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಈಗ 2029ರಿಂದ ಮಹಿಳಾ ಮೀಸಲಾತಿ ಜಾರಿಗೆ ತರಲು 334ಎ ವಿಧಿಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ. “ಪ್ರಧಾನಿ ಯೂ-ಟರ್ನ್ ತೆಗೆದುಕೊಳ್ಳಲು 30 ತಿಂಗಳು ಏಕೆ ಬೇಕಾಯಿತು? ವಿಶೇಷ ಅಧಿವೇಶನ ಕರೆಯಲು ಇನ್ನೂ ಕೆಲವು ವಾರ ಕಾಯಬಹುದಿರಲಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಏಪ್ರಿಲ್ 29ರಂದು ಪಶ್ಚಿಮ ಬಂಗಾಳದ ಕೊನೆಯ ಹಂತದ ಮತದಾನ ಮುಗಿದ ಬಳಿಕ ಹೊಸ ಪ್ರಸ್ತಾಪಗಳ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ವಿಪಕ್ಷ ನಾಯಕರು ಮೂರು ಬಾರಿ ಪತ್ರ ಬರೆದಿದ್ದರೂ, ಸರ್ಕಾರ ಅದನ್ನು ನಿರಾಕರಿಸಿದೆ ಎಂದು ತಿಳಿಸಿದ್ದಾರೆ.
ಇದರ ಬದಲು ಪ್ರಧಾನಿ ಸಾರ್ವಜನಿಕ ಮನವಿ ಹಾಗೂ ಸಭೆಗಳಲ್ಲಿ ನಿರತರಾಗಿದ್ದು, ಇದು ಏಕಪಕ್ಷೀಯ ನಿರ್ಧಾರಗಳ ಸಂಕೇತವಾಗಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.



