ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಸಾರಿಗೆ ಸಂಸ್ಥೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಕಳೆದ 7-8 ವರ್ಷಗಳಿಂದ ನಡೆದಿದಿಲ್ಲ. 9 ಸಾವಿರ ಜನರ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರನ್ನು ಅನುಕಂಪದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಶುಕ್ರವಾರಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರೂ. 1 ಕೋಟಿ ವಿಮೆಯನ್ನು ವಿತರಣೆ ಮಾಡಲು ಕ್ರಮ ವಹಿಸಲಾಗುವುದು. ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯಡಿ ನೌಕರರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದರು.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಸಾರಿಗೆ ಸಂಸ್ಥೆಗಳಿಗೆ 800 ಬಸ್ ನೀಡುವ ನಿಟ್ಟಿನಲ್ಲಿ ಈಗಾಗಲೇ 584 ಬಸ್ಗಳನ್ನು ಒದಗಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಉಳಿದ ಬಸ್ಗಳು ಬರಲಿವೆ. ಶಕ್ತಿ ಯೋಜನೆಯು ಭಾರತ ದೇಶದಲ್ಲಿ ಉಚಿತ ಪ್ರಯಾಣ ನೀಡುವ ಮೂಲಕ ದಾಖಲೆ ಮಾಡಿದೆ ಎಂದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಭರಮಗೌಡ (ರಾಜು) ಅಲಗೌಡ ಕಾಗೆ ಮಾತನಾಡಿ, ಪ್ರತಿದಿನ 5 ಸಾವಿರ ಸಾರಿಗೆ ಬಸ್ಗಳಲ್ಲಿ 25 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದು, ಪ್ರತಿದಿನ ಬಸ್ಗಳು 16 ಲಕ್ಷ ಕಿ.ಮೀ. ಸಂಚಾರ ಮಾಡುತ್ತಿವೆ. ಬಡವರಿಗೆ ಸಾರಿಗೆ ಬಸ್ಗಳು ಅನುಕೂಲಕರವಾಗಿವೆ. ನೌಕರರು ಕ್ರೀಡೆಯಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದು, ಅವರಿಗೂ ಸಹ ಪ್ರೋತ್ಸಾಹ ನೀಡಬೇಕು. ಅವರು ಸಹ ಅಂತಾರಾಷ್ಟಿçÃಯ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಹೇಳಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಂ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೀಪಾವಳಿ ಸಂದರ್ಭದಲ್ಲಿ ರೂ.8.69 ಕೋಟಿ ಆದಾಯವನ್ನು ಗಳಿಸಲಾಗಿದ್ದು, ಸಂಸ್ಥೆಗೆ ಉನ್ನತ ಸೇವೆ ಮಾಡುವ ನಿಟ್ಟಿನಲ್ಲಿ ನೌಕರರು ಮುಂದಾಗಬೇಕು ಎಂದು ತಿಳಿಸಿದರು.