ನವದೆಹಲಿ: ದೇಶದ ಆರ್ಥಿಕ ಭದ್ರತೆಯನ್ನು ಬಲಪಡಿಸಲು ಮತ್ತು ವಿದೇಶಗಳಿಗೆ ಹರಿದುಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿ ಮೌಲ್ಯದ ಡಾಲರ್ ಹೊರಹರಿವನ್ನು ತಗ್ಗಿಸಲು ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ‘ಉಳಿತಾಯದ ಮಹಾ ಅಭಿಯಾನ’ಕ್ಕೆ ಕರೆ ನೀಡಿದ್ದಾರೆ.
ಜಾಗತಿಕ ಯುದ್ಧ ಪರಿಸ್ಥಿತಿಯಿಂದಾಗಿ ರಸಗೊಬ್ಬರ, ಕಚ್ಚಾತೈಲ ಮತ್ತು ಇಂಧನ ಬೆಲೆಗಳು ಏರಿಕೆಯಾಗಿದ್ದರೂ, ಸರ್ಕಾರವು ಅದರ ಹೊರೆಯನ್ನು ಹೊತ್ತು ಜನರಿಗೆ ಕಡಿಮೆ ದರದಲ್ಲಿ ಸೇವೆ ನೀಡುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬ ಭಾರತೀಯನು ಸಣ್ಣ ಮಟ್ಟದ ಉಳಿತಾಯದ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ನೀಡಿರುವ ಸಲಹೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವುದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಾದ ಬಸ್ ಮತ್ತು ಮೆಟ್ರೋಗಳನ್ನು ಹೆಚ್ಚು ಬಳಸುವುದು, ಸಾಧ್ಯವಾದರೆ ವರ್ಕ್ ಫ್ರಮ್ ಹೋಮ್ ಅನುಸರಿಸುವುದು ಸೇರಿವೆ.
ಇದಲ್ಲದೆ, ಅನಗತ್ಯವಾಗಿ ಚಿನ್ನ ಖರೀದಿಸುವುದನ್ನು ತಪ್ಪಿಸುವಂತೆ ಅವರು ಕರೆ ನೀಡಿದ್ದಾರೆ. ಚಿನ್ನವು ದೇಶದ ಅತಿ ದೊಡ್ಡ ಆಮದು ವೆಚ್ಚಗಳಲ್ಲಿ ಒಂದಾಗಿದ್ದು, ಭಾರತವು ಚೀನಾದ ನಂತರ ವಿಶ್ವದಲ್ಲೇ ಅತಿ ಹೆಚ್ಚು ಚಿನ್ನ ಆಮದು ಮಾಡಿಕೊಳ್ಳುವ ರಾಷ್ಟ್ರವಾಗಿದೆ. 2026ರ ಅಂದಾಜಿನ ಪ್ರಕಾರ, ಭಾರತವು ಸುಮಾರು 6.76 ಲಕ್ಷ ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳುತ್ತಿದೆ. ಚಿನ್ನ ಖರೀದಿ ಕಡಿಮೆಯಾದರೆ ವರ್ಷಕ್ಕೆ 2 ರಿಂದ 3 ಲಕ್ಷ ಕೋಟಿ ರೂಪಾಯಿ ಉಳಿತಾಯ ಸಾಧ್ಯವೆಂದು ಅಂದಾಜಿಸಲಾಗಿದೆ.
ಸದ್ಯ ಭಾರತವು ವರ್ಷಕ್ಕೆ ಸುಮಾರು 17 ಲಕ್ಷ ಕೋಟಿ ರೂಪಾಯಿ ಮೌಲ್ಯದ ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯಿಂದ ತೈಲ ಬೆಲೆ ಏರಿಕೆಯಾಗಿರುವುದರಿಂದ ಇಂಧನ ಬಳಕೆಯನ್ನು ಕಡಿಮೆ ಮಾಡುವ ಮೂಲಕ ವಿದೇಶಿ ವಿನಿಮಯ ವೆಚ್ಚವನ್ನು ತಗ್ಗಿಸಬಹುದು ಎಂದು ಮೋದಿ ಹೇಳಿದ್ದಾರೆ.
ಅಡುಗೆ ಎಣ್ಣೆ ಬಳಕೆಯನ್ನು ಮಿತಿಗೊಳಿಸುವುದು, ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವುದು ಮತ್ತು ರಾಸಾಯನಿಕ ಗೊಬ್ಬರದ ಬದಲು ಸಾವಯವ ಕೃಷಿಗೆ ಒತ್ತು ನೀಡುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ. 2026ರಲ್ಲಿ ಭಾರತವು ಸುಮಾರು 1.83 ಲಕ್ಷ ಕೋಟಿ ರೂಪಾಯಿ ಮೌಲ್ಯದ ಖಾದ್ಯ ತೈಲ ಮತ್ತು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುವ ನಿರೀಕ್ಷೆಯಿದೆ.
ಅಮೆರಿಕನ್ ಡಾಲರ್ ಜಾಗತಿಕ ವ್ಯಾಪಾರದ ಪ್ರಮುಖ ಕರೆನ್ಸಿಯಾಗಿರುವುದರಿಂದ, ಭಾರತ ಹೆಚ್ಚು ಆಮದು ಮಾಡಿದಷ್ಟೂ ಡಾಲರ್ ಬೇಡಿಕೆ ಹೆಚ್ಚುತ್ತದೆ. ಇದರಿಂದ ರೂಪಾಯಿ ಮೌಲ್ಯ ಕುಸಿಯುವ ಸಾಧ್ಯತೆ ಹೆಚ್ಚುತ್ತದೆ. ಆಮದು ಕಡಿಮೆಯಾದರೆ ಡಾಲರ್ ಮೇಲಿನ ಅವಲಂಬನೆ ತಗ್ಗಿ, ರೂಪಾಯಿ ಬಲವಾಗುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆಮದು ವೆಚ್ಚ ಕಡಿಮೆಯಾದಷ್ಟೂ ದೇಶದ ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳವಾಗಲಿದ್ದು, ಬೆಲೆ ಏರಿಕೆಯ ಮೇಲಿನ ಒತ್ತಡವೂ ತಗ್ಗಲಿದೆ. ದೇಶದ ಆರ್ಥಿಕ ಸ್ಥಿರತೆ ಮತ್ತು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಜನರ ಸಣ್ಣ ಉಳಿತಾಯವೂ ದೊಡ್ಡ ಕೊಡುಗೆ ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.



