ನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿ ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸಿದೆ. ಆದರೆ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಗಣನೀಯವಾಗಿ ಕಡಿಮೆಯಾಗುತ್ತಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ ಎಂದು ಸಂಸದ ಈರಣ್ಣ ಕಡಾಡಿ ರಾಜ್ಯಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ವಿಷಯವನ್ನು ಸದನದ ಗಮನಕ್ಕೆ ತಂದ ಅವರು, ಬೆಳಗಾವಿ ವಿಮಾನ ನಿಲ್ದಾಣವನ್ನು 262.64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಪ್ರಸ್ತುತ 25.98 ಕೋಟಿ ರೂ. ವೆಚ್ಚದಲ್ಲಿ ವಿಸ್ತರಣಾ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು. ಈ ಹಿಂದೆ ಐದು ವಿಮಾನಯಾನ ಸಂಸ್ಥೆಗಳು 13 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದರೆ, ಇದೀಗ ಕೇವಲ ಎರಡು ಸಂಸ್ಥೆಗಳು ಮಾತ್ರ ಸೇವೆ ನೀಡುತ್ತಿದ್ದು, ಹಾರಾಟಗಳು ಐದು ನಗರಗಳಿಗೆ ಮಾತ್ರ ಸೀಮಿತವಾಗಿವೆ ಎಂದು ಹೇಳಿದರು.
2024-25ನೇ ಸಾಲಿನಲ್ಲಿ ಸುಮಾರು 3.40 ಲಕ್ಷ ಪ್ರಯಾಣಿಕರು ಬೆಳಗಾವಿ ವಿಮಾನ ನಿಲ್ದಾಣವನ್ನು ಬಳಸಿದ್ದಾರೆ. ಪ್ರಯಾಣಿಕರ ಸಂಖ್ಯೆಯಲ್ಲಿ ಯಾವುದೇ ಇಳಿಕೆ ಕಂಡುಬರದಿದ್ದರೂ ವಿಮಾನಯಾನ ಸೇವೆಗಳು ಹಂತ ಹಂತವಾಗಿ ಸ್ಥಗಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಈರಣ್ಣ ಕಡಾಡಿ ಹೇಳಿದರು.
ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಸಬ್ಸಿಡಿ ದೊರೆಯುವವರೆಗೂ ಮಾತ್ರ ವಿಮಾನಯಾನ ಸಂಸ್ಥೆಗಳು ಸೇವೆ ಮುಂದುವರಿಸಿ, ಯೋಜನೆ ಮುಗಿದ ಬಳಿಕ ಹಾರಾಟಗಳನ್ನು ನಿಲ್ಲಿಸುತ್ತಿವೆ ಎಂದು ಅವರು ಆರೋಪಿಸಿದರು. ಬೆಳಗಾವಿಯಿಂದ ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಗೆ ಸುಮಾರು 85% ಪ್ರಯಾಣಿಕರು ಪ್ರಯಾಣಿಸುತ್ತಿರುವಾಗಲೂ ಸೇವೆಗಳನ್ನು ಕಡಿತಗೊಳಿಸಿರುವುದು ಅಸಮಂಜಸವಾಗಿದೆ ಎಂದು ಹೇಳಿದರು.
ಹೀಗಾಗಿ, ಸೇವೆಗಳನ್ನು ಸ್ಥಗಿತಗೊಳಿಸಿರುವ ವಿಮಾನಯಾನ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಬೇಕು ಎಂದು ಅವರು ರಾಜ್ಯಸಭೆಯಲ್ಲಿ ಒತ್ತಾಯಿಸಿದರು. ಜೊತೆಗೆ ಮುಂಬೈ, ಪುಣೆ, ಇಂದೋರ್ ಹಾಗೂ ಚೆನ್ನೈ ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕವನ್ನು ಪುನರಾರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.



