ವಿಜಯಸಾಕ್ಷಿ ಸುದ್ದಿ, ಗದಗ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ 2025ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು, ನಿರುದ್ಯೋಗಿಗಳು ಸೇವಾಸಿಂಧು ವೆಬ್ ಪೋರ್ಟಲ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಗದಗ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಸ್ನಾತಕೋತ್ತರ ಪದವಿ, ಪದವಿ ಹಾಗೂ ಡಿಪ್ಲೋಮಾ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಕಳೆದ 6 ತಿಂಗಳುಗಳ ಕಾಲ ಸರಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇದ್ದವರು ಮತ್ತು ಕನಿಷ್ಠ 6 ವರ್ಷಗಳ ಕಾಲ ಕರ್ನಾಟಕದ ರಹವಾಸಿಯಾಗಿರುವವರು ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆಯಬಹುದಾಗಿದೆ.
ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು 3,000 ರೂ ಹಾಗೂ ಡಿಪ್ಲೋಮಾ ಉತ್ತೀರ್ಣರಾದವರಿಗೆ 1,500 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಫಲಿತಾಂಶದ ನಂತರ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿ ನಂತರವೂ ನಿರುದ್ಯೋಗಿಗಳಾಗಿದ್ದಲ್ಲಿ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.
ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನ ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಪ್ರತಿ ತಿಂಗಳು ತಾನು ನಿರುದ್ಯೋಗಿ ಎಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಪ್ರತಿ ತ್ರೈಮಾಸಿಕ 1ರಿಂದ 25ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದೆ.
ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿ ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ಸೈಟ್ಗೆ ಭೇಟಿ ನೀಡಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಜೊತೆಗೆ ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಮೋಕ್ಷಗುಂಡ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮೂಲಕ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ಪಡೆಯಬುದಾಗಿದೆ ಎಂದು ಅಶೋಕ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ಹೊಂದಿರಬೇಕು. ಅರ್ಜಿ ಸಲ್ಲಿಸಿದ ನಂತರ ಪೋರ್ಟಲ್ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು. ಜೊತೆಗೆ ಸಹಾಯವಾಣಿ ಸಂಖ್ಯೆ 1800-599-7154 ಸಂಪರ್ಕಿಸಬಹುದಾಗಿದೆ.