ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಸೂಚನೆಯಂತೆ, ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುತ್ತೋಲೆಯ ಪ್ರಕಾರ ಸರ್ಕಾರದಿಂದ ಅನುದಾನ ಪಡೆದು ನಿರ್ಮಿಸಲಾಗಿರುವ ಶಾದಿ ಮಹಲ್, ಸಮುದಾಯ ಭವನಗಳು ಬಡ ಅಲ್ಪಸಂಖ್ಯಾತರ ಕುಟುಂಬಗಳ ಮದುವೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಕೈಗೆಟುಕುವ ದರದಲ್ಲಿ ಸಿಗುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬಾಡಿಗೆ ನಿಯಂತ್ರಣ ಸಮಿತಿಯನ್ನು ರಚನೆ ಮಾಡಬೇಕೆಂದು ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಆಗ್ರಹಿಸಿದರು.
ಅವರು ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ವಾಸಿಸುತ್ತಿರುವ ಬಡ ಅಲ್ಪಸಂಖ್ಯಾತರ ಸಮುದಾಯದ ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಖಾಂತರ ಸಮುದಾಯ ಭವನಗಳನ್ನು ನಿರ್ಮಿಸುತ್ತಿದೆ. ಆದರೆ ಖಾಸಗಿ ಸಂಸ್ಥೆಗಳು ಬಡವರ ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ 30ರಿಂದ 40 ಸಾವಿರ ಬಾಡಿಗೆಯನ್ನು ಪಡೆಯುವ ಮೂಲಕ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ್ದಾರೆ. ಸಮುದಾಯ ಭವನಗಳನ್ನು ನಿರ್ಮಿಸಲು ಅಲ್ಪಸಂಖ್ಯಾತರ ಹೆಸರಲ್ಲಿ ಅನುದಾನ ಪಡೆದುಕೊಳ್ಳುತ್ತಿರುವ ಖಾಸಗಿ ಸಂಸ್ಥೆಯವರು ಭವನಗಳ ನಿರ್ಮಾಣದ ನಂತರ ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ತಮ್ಮಗೆ ಮನಬಂದಂತೆ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದ ಸುತ್ತೋಲೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮುದಾಯ ಭವನಗಳ ಬಾಡಿಗೆ ನಿಯಂತ್ರಣ ಸಮಿತಿಗಳನ್ನು ರಚನೆ ಮಾಡುವ ಮೂಲಕ ಬಡ ಕುಟುಂಬಗಳ ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಯೋಗ್ಯ ದರದಲ್ಲಿ ಸಮುದಾಯ ಭವನಗಳನ್ನು ನೀಡಲು ಹಾಗೂ ಸಮುದಾಯ ಭವನಗಳನ್ನು ಪಡೆಯುವರು ಆನಲೈನ್ ಮೂಲಕ ಮುಂಗಡ ಕಾಯ್ದಿರಿಸುವಂತೆ ವ್ಯವಸ್ಥೆ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ. ಆದರೆ ಈವರೆಗೂ ಈ ಹಗಲು ದರೋಡೆಗೆ ಕಡಿವಾಣ ಬಿದ್ದಿಲ್ಲ ಎಂದರು.
ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮಗಳಲ್ಲಿ ಸಿಗುವ ವಿವಿಧ ಯೋಜನೆಗಳ ಮಾಹಿತಿಯನ್ನು ವ್ಯಾಪಕವಾಗಿ ಪ್ರಚಾರ ಮಾಡುವಲ್ಲಿ ಅಧಿಕಾರಿಗಳಿಂದ ಆಗುತ್ತಿರುವ ನಿರ್ಲಕ್ಷ್ಯ ಖಂಡಿಸಿ ಮತ್ತು ಇನ್ನು ಹಲವಾರು ಬೇಡಿಕೆಗಳಿಗೆ ಆಗ್ರಹಿಸಿ ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮೌಲಾನಾ ಆಜಾದ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾವುದೆಂದು ಎಚ್ಚರಿಸಿದರು.
ಅಲ್ಪಸಂಖ್ಯಾತರ ಹೋರಾಟ ಸಮಿತಿಯ ಉಪಾಧ್ಯಕ್ಷ ಅಬ್ದುಲಕರೀಮ ಬಳಗಾನೂರ, ಕಾರ್ಯದರ್ಶಿ ಇಬ್ರಾಹಿಂ ಹಳ್ಳಿಕೇರಿ, ಸಮಿತಿ ಮುಖಂಡರಾದ ಮಹ್ಮದರಫೀಕ ಮದ್ಲಿವಾಲೆ, ಮೆಹಬೂಬಸಾಬ ಬಳ್ಳಾರಿ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಬಾಬುಸಾಬ ಅಗಡಿ, ಖಾಜಾಸಾಬ ಇಸ್ಮಾಯಿಲನವರ, ಮಕ್ತುಮಸಾಬ ಮುಲ್ಲಾನವರ ಉಪಸ್ಥಿತರಿದ್ದರು.
ಸಮಿತಿಯ ಉಪಾಧ್ಯಕ್ಷ ಅಬ್ದುಲಕರೀಮ ಬಳಗಾನೂರ ಮಾತನಾಡಿ, ಅಲ್ಪಸಂಖ್ಯಾತರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಕಾಣಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಬಿವೃದ್ಧಿ ನಿಗಮದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗದಗ ಜಿಲ್ಲೆಯ ಹಾಗೂ ಗದಗ-ಬೆಟಗೇರಿ ನಗರದಲ್ಲಿ ಸಾವಿರಾರು ಬಡ ಕುಟುಂಬಗಳು ಸರ್ಕಾರದ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳು ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಅನುಷ್ಠಾಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.