ಗದಗ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕೆ ನಿಯೋಜಿಸಲಾಗಿರುವ ಸರ್ಕಾರಿ ಶಾಲಾ ಶಿಕ್ಷಕರನ್ನು ಆದಷ್ಟು ಬೇಗ ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಿ, ತಮ್ಮ ಮೂಲ ಶಾಲೆಗಳಿಗೆ ಮರಳಿಸುವಂತೆ ಸಾಮಾಜಿಕ ಕಾರ್ಯಕರ್ತ ಸೈಯದ್ ಖಾಲಿದ್ ಕೊಪ್ಪಳ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ತಿಳಿಸಿರುವ ಅವರು, ರಾಜ್ಯದ ಅನೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ಅಡಚಣೆ ಉಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಶಾಲೆಗಳು ಆರಂಭವಾಗಿ ಸುಮಾರು ಒಂದು ತಿಂಗಳು ಕಳೆದಿದ್ದರೂ ಸಾವಿರಾರು ಸರ್ಕಾರಿ ಶಾಲೆಗಳ ಮಕ್ಕಳು ಸಮರ್ಪಕ ಬೋಧನೆಯಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯ ನೆಪದಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾಗಬಾರದು. ಶಿಕ್ಷಕರನ್ನು ದೀರ್ಘಾವಧಿಯವರೆಗೆ ಚುನಾವಣಾ ಕರ್ತವ್ಯಕ್ಕೆ ಬಳಸುವುದರಿಂದ ಸರ್ಕಾರಿ ಶಾಲೆಗಳ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಕರ ಸಂಖ್ಯೆ ಸಾಕಷ್ಟಿದ್ದು, ಅಗತ್ಯವಿದ್ದಲ್ಲಿ ಚುನಾವಣಾ ಆಯೋಗವು ಅಂತಹ ಯುವಕರ ಸೇವೆಯನ್ನು ಬಳಸಿಕೊಂಡು ಚುನಾವಣಾ ಕಾರ್ಯಗಳನ್ನು ನಿರ್ವಹಿಸಬಹುದು. ಇದರಿಂದ ಸರ್ಕಾರಿ ಶಾಲೆಗಳ ಶಿಕ್ಷಣಕ್ಕೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ.
ಇದೇ ವೇಳೆ ರಾಜ್ಯದ ಎಲ್ಲ ಮತದಾರರಿಗೂ ಮನವಿ ಮಾಡಿರುವ ಅವರು, ಎಸ್ಐಆರ್ ಎನ್ಯುಮರೇಷನ್ ಫಾರ್ಮ್ಗಳ ಸಲ್ಲಿಕೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ವಿಳಂಬ ಮಾಡದೆ ತಮ್ಮ ಬಳಿ ಇರುವ ಫಾರ್ಮ್ಗಳನ್ನು ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಗಳಿಗೆ ಶೀಘ್ರ ಸಲ್ಲಿಸುವಂತೆ ಕೋರಿದ್ದಾರೆ.
ಪ್ರಸ್ತುತ ಬಿಎಲ್ಒಗಳಾಗಿ ಕಾರ್ಯನಿರ್ವಹಿಸುತ್ತಿರುವವರು ಹೆಚ್ಚಾಗಿ ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಿಬ್ಬಂದಿಯಾಗಿದ್ದು, ಹಲವು ದಿನಗಳಿಂದ ಶಿಕ್ಷಕರು ಶಾಲೆಗಳಿಂದ ದೂರವಿರುವುದರಿಂದ ವಿದ್ಯಾರ್ಥಿಗಳ ಬೋಧನೆಗೆ ಅಡಚಣೆ ಉಂಟಾಗಿದೆ. ಇದೇ ರೀತಿ ಅನೇಕ ಸರ್ಕಾರಿ ಕಚೇರಿಗಳಲ್ಲಿಯೂ ಸಾರ್ವಜನಿಕ ಸೇವೆಗಳು ವಿಳಂಬವಾಗುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಮತದಾರರು ತಮ್ಮ ಜವಾಬ್ದಾರಿಯನ್ನು ಅರಿತು ಎನ್ಯುಮರೇಷನ್ ಫಾರ್ಮ್ಗಳನ್ನು ಶೀಘ್ರ ಸಲ್ಲಿಸಿದರೆ ಶಿಕ್ಷಕರು ಶಾಲೆಗಳಿಗೆ ಹಾಗೂ ಸರ್ಕಾರಿ ಸಿಬ್ಬಂದಿ ತಮ್ಮ ಮೂಲ ಕರ್ತವ್ಯಗಳಿಗೆ ಮರಳಲು ಅನುಕೂಲವಾಗುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಣಕ್ಕೂ ಮತದಾರರ ಪಟ್ಟಿಯ ಪರಿಷ್ಕರಣೆಯಷ್ಟೇ ಮಹತ್ವವಿದ್ದು, ಎಲ್ಲರೂ ಈ ಕಾರ್ಯಕ್ಕೆ ಸಹಕರಿಸಬೇಕು ಎಂದು ಸೈಯದ್ ಖಾಲಿದ್ ಕೊಪ್ಪಳ ಮನವಿ ಮಾಡಿದ್ದಾರೆ.



