ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದ್ದು, ಮತ್ತೊಂದು ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಈ ಮೂಲಕ ಪುನೀತ್ ಕೆರೆಹಳ್ಳಿಗೆ ಭಾಗಶಃ ರಿಲೀಫ್ ಲಭಿಸಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಎಲ್ಲೆಡೆ ಅಕ್ರಮ ವಲಸಿಗರು ಇದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಕ್ರಮ ವಲಸಿಗರನ್ನು ಗುರುತಿಸಿ ತೋರಿಸಿದವರ ಮೇಲೆಯೇ ಪ್ರಕರಣ ದಾಖಲಿಸುವುದು ಸರಿಯೇ ಎಂದು ಪ್ರಶ್ನಿಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು. ವಲಸಿಗರ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬುದನ್ನು ತಿಳಿಸುವಂತೆ ಪೀಠ ಸರ್ಕಾರವನ್ನು ಪ್ರಶ್ನಿಸಿತು. ಈ ಸಂಬಂಧ ಸರ್ಕಾರದ ಪ್ರತಿಕ್ರಿಯೆ ಪಡೆಯಲು ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್. ಬಿಂಗೀಪುರ ಗ್ರಾಮದಲ್ಲಿ ಶಂಕಿತ ಬಾಂಗ್ಲಾದೇಶಿ ವಲಸಿಗರು ಇರುವ ಮಾಹಿತಿ ಮೇರೆಗೆ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡ ಸ್ಥಳಕ್ಕೆ ತೆರಳಿತ್ತು. ಅಲ್ಲಿ ವಲಸೆ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಿ ಪೊಲೀಸರಿಗೆ ಒಪ್ಪಿಸಲಾಗಿತ್ತು. ಈ ನಂತರ ಜಾಗದ ಮಾಲೀಕ ಸಿದ್ದೇಶ್, ಪುನೀತ್ ಕೆರೆಹಳ್ಳಿ, ಡಾ. ನಾಗೇಂದ್ರಪ್ಪ ಸೇರಿದಂತೆ ಇತರರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಬನ್ನೇರುಘಟ್ಟ ಪೊಲೀಸರು ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು. ಇದಕ್ಕೆ ವಿರೋಧವಾಗಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಷರತ್ತುಬದ್ಧ ಜಾಮೀನು ಪಡೆದಿದ್ದರು. ಇದೀಗ ಇದೇ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಇನ್ನು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ ಕಾರ್ಯಾಚರಣೆ ವೇಳೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಸೂಚನೆ ನೀಡಿ ಆದೇಶ ಹೊರಡಿಸಿದೆ.



