ನವದೆಹಲಿ: ಮತದಾರರ ಪಟ್ಟಿಯಿಂದ (ವೋಟರ್ ಲಿಸ್ಟ್) ವ್ಯಕ್ತಿಯ ಹೆಸರನ್ನು ಅಳಿಸುವುದರಿಂದ ಆತನ ಅಥವಾ ಆಕೆಯ ಪೌರತ್ವ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಸ್ಪಷ್ಟನೆ ನೀಡಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ನಿರ್ವಹಿಸುವ ಸಾಂವಿಧಾನಿಕ ಸಂಸ್ಥೆಯಾಗಿದ್ದರೂ, ಯಾವುದೇ ವ್ಯಕ್ತಿಯ ಪೌರತ್ವವನ್ನು ನಿರ್ಧರಿಸುವ ಅಧಿಕಾರ ಅದಕ್ಕಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಮಾಹಿತಿ ಬಹಿರಂಗಪಡಿಸುವಂತೆ ಕೋರಿ ಪಶ್ಚಿಮ ಬಂಗಾಳ ಕಾಂಗ್ರೆಸ್ನ ಎಸ್ಐಆರ್ ಸಮಿತಿ ಅಧ್ಯಕ್ಷ ಪ್ರಸೇನ್ಜಿತ್ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.
ಈ ಸಂಬಂಧ ಚುನಾವಣಾ ಆಯೋಗ, ಪಶ್ಚಿಮ ಬಂಗಾಳ ಸರ್ಕಾರ ಹಾಗೂ ರಾಜ್ಯ ಚುನಾವಣಾ ಸಮಿತಿಗೆ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಅರ್ಜಿದಾರರು, ಎಸ್ಐಆರ್ ಪ್ರಕ್ರಿಯೆ ಬಳಿಕ ಸ್ವೀಕರಿಸಲಾದ ಮತ್ತು ತಿರಸ್ಕರಿಸಲಾದ ಫಾರ್ಮ್-6 ಹಾಗೂ ಫಾರ್ಮ್-7 ಅರ್ಜಿಗಳ ಸಂಖ್ಯೆ, ಮೇಲ್ಮನವಿ ನ್ಯಾಯಮಂಡಳಿಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿವರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೋರಿದ್ದಾರೆ.
ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಬಿಹಾರ ಎಸ್ಐಆರ್ ಪ್ರಕರಣದಲ್ಲಿ ನೀಡಿದ್ದ ಹಿಂದಿನ ತೀರ್ಪನ್ನು ಉಲ್ಲೇಖಿಸಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವುದರಿಂದ ವ್ಯಕ್ತಿಯ ಪೌರತ್ವ ಕಳೆದುಹೋಗುವುದಿಲ್ಲ ಎಂದು ಪುನರುಚ್ಚರಿಸಿತು. ಪೌರತ್ವ ನಿರ್ಧಾರ ಮಾಡುವ ಅಧಿಕಾರ ಪೌರತ್ವ ಕಾಯ್ದೆಯಡಿ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಚುನಾವಣಾ ಆಯೋಗಕ್ಕೆ ಅಂತಹ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿತು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟವರಿಗೆ ಮೇಲ್ಮನವಿ ಸಲ್ಲಿಸಲು ರಚಿಸಲಾಗಿರುವ 18 ನ್ಯಾಯಮಂಡಳಿಗಳ ಕಾರ್ಯವೈಖರಿಯಲ್ಲಿ ವಿಳಂಬ ಮತ್ತು ಅಸಮರ್ಪಕತೆ ಇದೆ ಎಂದು ಆರೋಪಿಸಿದರು. ಸಲ್ಲಿಸಲಾದ ಮೇಲ್ಮನವಿಗಳಲ್ಲಿ ಸುಮಾರು 70 ಶೇಕಡಾ ಪ್ರಕರಣಗಳಲ್ಲಿ ಮತದಾರರ ಹೆಸರನ್ನು ಮರು ಸೇರ್ಪಡೆಗೊಳಿಸಲಾಗಿದ್ದು, ಉಳಿದ 30 ಶೇಕಡಾ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದಲ್ಲದೆ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲ್ಪಟ್ಟ ಬಳಿಕ ಕೆಲವರಿಗೆ ಮಹಿಳಾ ಕಲ್ಯಾಣ ಯೋಜನೆಗಳು, ನಗದು ವರ್ಗಾವಣೆ ಯೋಜನೆಗಳು ಹಾಗೂ ಜಾತಿ ಪ್ರಮಾಣಪತ್ರ ಪರಿಶೀಲನೆ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ವಕೀಲರು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ವಿಷಯದ ಬಗ್ಗೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಇದರ ಅರಿವಿದೆ ಎಂದು ತಿಳಿಸಿತು.
ನ್ಯಾಯಾಲಯವು ತನ್ನ ಹಿಂದಿನ ಆದೇಶವನ್ನು ಉಲ್ಲೇಖಿಸಿ, ಯಾವುದೇ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ನಿರ್ಧಾರ ಕೈಗೊಂಡ ಬಳಿಕ, ಪೌರತ್ವ ಕಾಯ್ದೆಯಡಿ ಅಗತ್ಯ ಪರಿಶೀಲನೆಗಾಗಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸುವುದು ಚುನಾವಣಾ ಆಯೋಗದ ಕರ್ತವ್ಯ. ಆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಂಬಂಧಿತ ವ್ಯಕ್ತಿಯ ಪೌರತ್ವದ ಸ್ಥಾನಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿತು.
ವಿಚಾರಣೆ ವೇಳೆ ಬಾಕಿ ಇರುವ ಮೇಲ್ಮನವಿಗಳ ಸಂಖ್ಯೆಯ ಬಗ್ಗೆಯೂ ಗಮನ ಸೆಳೆದ ವಕೀಲರು, 34 ಲಕ್ಷ ಮೇಲ್ಮನವಿಗಳ ಪೈಕಿ ಕೇವಲ 38 ಸಾವಿರ ಪ್ರಕರಣಗಳಷ್ಟೇ ಇತ್ಯರ್ಥಗೊಂಡಿದ್ದು, ಸುಮಾರು 33.5 ಲಕ್ಷ ಅರ್ಜಿಗಳು ಇನ್ನೂ ಬಾಕಿ ಉಳಿದಿವೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ, ಮೇಲ್ಮನವಿಗಳು ಬಾಕಿ ಇರುವ ಕಾರಣದಿಂದ ಜನರ ನಾಗರಿಕ ಹಕ್ಕುಗಳು ಮತ್ತು ಸರ್ಕಾರಿ ಸೌಲಭ್ಯಗಳಿಗೆ ಧಕ್ಕೆಯಾಗಬಾರದು ಎಂದು ಮನವಿ ಮಾಡಿದರು.
ಈ ನಡುವೆ, ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಸಲ್ಲಿಕೆಯಾಗಿರುವ ಇತರೆ ಅರ್ಜಿಗಳೊಂದಿಗೆ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 25ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಈಗಾಗಲೇ ತಿಳಿಸಿದೆ.



