HomeKarnataka Newsನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ: ಡಿ.ಕೆ....

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ: ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

Spread the love

ನವದೆಹಲಿ: ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದರು.

“ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA) ಯನ್ನು ರಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಅದರ ಸದಸ್ಯರಾಗಿರುತ್ತವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿ ಹಾಗೂ ವರದಾ ನದಿ ಜೋಡಣೆ ಬಗ್ಗೆ ಚರ್ಚೆ ನಡೆದಿದೆ” ಎಂದರು.

“ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ. ನೀರನ್ನು ಯಾವ ಕಡೆ ನೀಡುತ್ತೀರಿ ಹಾಗೂ ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಬೇಡಿಕೆ ಸಭೆಯ ಮುಂದಿಟ್ಟಿದ್ದೇವೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆ ನಮ್ಮ ರಾಜ್ಯದೊಳಗೆ ಮಾಡಲಿದ್ದು,

18.50 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶ ಇದೆ. ಈ ಎರಡೂ ಯೋಜನೆಗಳಿಂದ ಕರ್ನಾಟಕಕ್ಕೆ ಒಟ್ಟು 34.40 ಟಿಎಂಸಿ ನೀರನ್ನು ನಿಗದಿ ಮಾಡಲಾಗಿದೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆಗೆ ಡಿಪಿಆರ್ ತಯಾರಿಸಲು ನಾವು ಅನುಮತಿಯನ್ನು ನೀಡಿದ್ದೇವೆ. ಇದಕ್ಕೆ 10 ಸಾವಿರ ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ 90% ಕೇಂದ್ರ ಸರ್ಕಾರ ಹಾಗೂ 10% ರಾಜ್ಯ ಸರ್ಕಾರ ಭರಿಸಲಿದೆ” ಎಂದು ಮಾಹಿತಿ ನೀಡಿದರು.

“ಸುಪ್ರೀಂ ಕೋರ್ಟ್ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಎರಡು ತಿಂಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವರ ಬಳಿ ತಿಳಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿರುವ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇನೆ. ಇನ್ನು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರ ಸಂಬಂಧ ಈಗಾಗಲೇ ಎರಡು ಬಾರಿ ಸಭೆ ಮುಂದೂಡಲ್ಪಟ್ಟಿದೆ. ಮಹದಾಯಿ ವಿಚಾರವಾಗಿ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಯೋಜನೆ ವಿಚಾರದಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹಾಕುವಂತೆ ಕೇಳಿದ್ದೇವೆ” ಎಂದರು.

“ಕೇಂದ್ರ ಸಚಿವರು ನನಗೆ ಮತ್ತೊಂದು ದಿನ ಭೇಟಿಗೆ ಸಮಯಾವಕಾಶ ನೀಡುತ್ತೇನೆ. ಜಲ ಜೀವನ್ ಮಿಷನ್ ಯೋಜನೆಯಿಂದ ಹಿಡಿದು ಕರ್ನಾಟಕಕ್ಕೆ ಸಂಬಂಧಿಸಿದ ಎಲ್ಲಾ ವಿಚಾರವಾಗಿ ಚರ್ಚೆ ಮಾಡಲು ತಿಳಿಸಿದ್ದಾರೆ” ಎಂದರು. “ಇನ್ನು ಮಂಗಳವಾರ ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಕೆಲವು ಯೋಜನೆಗಳಿಗೆ ಬಾಕಿ ಇರುವ ಅನುಮೋದನೆಗೆ ಮನವಿ ಮಾಡಿದ್ದೇನೆ.

ಮೆಟ್ರೋ 2ನೇ ಹಂತದ ಯೋಜನೆಗೆ 15 ವರ್ಷಗಳ ಹಿಂದೆ ಅಂದರೆ 2010ರ ಜುಲೈನಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿತ್ತು. ಆಗ 26 ಸಾವಿರ ಕೋಟಿ ಇದ್ದ ಯೋಜನೆ ವೆಚ್ಚ ಈಗ 40 ಸಾವಿರ ಕೋಟಿಗೆ ಏರಿಕೆಯಾಗಿದೆ. ಭೂಸ್ವಾಧೀನ ಪ್ರಕ್ರಿಯೆಗೆ 2500 ಕೋಟಿ ಹೆಚ್ಚು ವೆಚ್ಚವಾಗಿದೆ. 2026ರ ಡಿಸೆಂಬರ್ ವೇಳೆಗೆ ಈ ಯೋಜನೆ ಪೂರ್ಣಗೊಳಿಸಲಾಗುವುದು. ಹೀಗಾಗಿ ಈ ಪರಿಷ್ಕೃತ ದರಕ್ಕೆ ಒಪ್ಪಿಗೆ ನೀಡಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!