HomeGadag Newsತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಇಲಾಖೆಯ ಅಧಿಕಾರಿಗಳು, ನೌಕರರಿಗೆ ಸೂಕ್ತ ರಕ್ಷಣೆಯನ್ನು ಒದಗಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ರವಿ ಗುಂಜೀಕರ ನೇತೃತ್ವದಲ್ಲಿ ಸರಕಾರಿ ನೌಕರರು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ನ. 4ರಂದು ಗಜೇಂದ್ರಗಡ ಶಹರದಲ್ಲಿ ರಾಜ್ಯದ ರೈತರ, ದೇವಾಲಯ ಹಾಗೂ ಮಠ-ಮಾನ್ಯಗಳ ಆಸ್ತಿಗಳ ಮೇಲೆ ವಕ್ಫ್ ಬೋರ್ಡ್ ಹೆಸರು ದಾಖಲಿಸುತ್ತಿರುವ ರಾಜ್ಯ ಸರಕಾರದ ನಡೆ ಖಂಡಿಸಿ ರಾಜ್ಯ ಬಿಜೆಪಿ ಕರೆ ನೀಡಿದ್ದ ಪ್ರತಿಭಟನೆ ಅಂಗವಾಗಿ ಮಾಜಿ ಸಚಿವ, ಮಾಜಿ ಶಾಸಕ ಕಳಕಪ್ಪ ಬಂಡಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲು ಕಚೇರಿ ಮುಂದೆ ಬಂದು ಕರ್ತವ್ಯನಿರತ ತಹಸೀಲ್ದಾರ ಹಾಗೂ ತಾಲೂಕು ದಂಡಾಧಿಕಾರಿ ಕಿರಣಕುಮಾರ ಕುಲಕರ್ಣಿ ಅವರಿಗೆ ಸಾರ್ವಜನಿಕರ ಎದುರಿಗೆ ವೈಯಕ್ತಿಕವಾಗಿ ಏಕವಚನದಿಂದ ನಿಂದಿಸಿ, ಕಂದಾಯ ಇಲಾಖೆಯ ಅಧಿಕಾರಿಗಳಿಗೆ, ನೌಕರರಿಗೆ ಸರ್ಕಾರಿ ಕರ್ತವ್ಯ ನಿರ್ವಹಿಸಲು ತೊಂದರೆಯುಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಬಳ್ಳಾರಿ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ವಿ.ಎಂ. ಹಿರೇಮಠ, ಎಸ್.ಆರ್. ಬಂಡಿ, ಡಿ.ಟಿ. ವಾಲ್ಮೀಕಿ, ಅರುಣ ಮಂಟೂರ, ಕೆ.ಬಿ. ಕೊಣ್ಣೂರ, ಎಸ್.ಎಂ. ಹಿರೇಮಠ, ಎಂ.ಎ. ನದಾಫ್, ಎನ್.ಬಿ. ದೊಡ್ಡಮನಿ, ಸಿ.ಎಸ್. ಮಠದ, ಪಿ.ಬಿ. ಮುಧೋಳಮಠ, ಪಿ.ಎಫ್. ಅಗಸಿಮನಿ ಸೇರಿದಂತೆ ಸಂಘದ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು, ಸರಕಾರಿ ನೌಕರರು ಹಾಜರಿದ್ದರು.

ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳಿಗೆ, ನೌಕರರಿಗೆ ತೊಂದರೆ ನೀಡಿ, ನಿಷ್ಪಕ್ಷಪಾತವಾಗಿ ಸರ್ಕಾರಿ ಕರ್ತವ್ಯ ನಿರ್ವಹಿಸಲು ಮಾನಸಿಕವಾಗಿ ಮತ್ತು ನೈತಿಕವಾಗಿ ಕುಗ್ಗಿಸುವ ರೀತಿಯಲ್ಲಿ ನಡೆದುಕೊಂಡಿದ್ದು ಖೇದಕರ ವಿಷಯವಾಗಿದೆ. ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಇಲಾಖೆಯ ಅಧಿಕಾರಿ, ನೌಕರರಿಗೆ ಸೂಕ್ತ ರಕ್ಷಣೆಯನ್ನು ಒದಗಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!