ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಬ್ಯಾಂಕ್ ನೌಕರರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ನವರು ಸಾರ್ವಜನಿಕರೊಂದಿಗೆ ಸಹಕರಿಸಿ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಲೀಡ್ ಬ್ಯಾಂಕ್ನ ಡಿಎಲ್ಆರ್ಸಿ/ ಡಿಸಿಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಡಜನರು ಆರ್ಥಿಕವಾಗಿ ಸ್ವಾವಲಂಬನೆಯ ಬದುಕು ನಡೆಸಲು ಬ್ಯಾಂಕ್ಗಳು ಸಹಕಾರಿಯಾಗಬೇಕು. ಯೋಜನೆಗಳ ಆರ್ಥಿಕ ಸೌಲಭ್ಯ ಒದಗಿಸುವಾಗ ವಿನಾಕಾರಣ ವಿಳಂಬ ಮಾಡಬಾರದು. ಒಂದು ವೇಳೆ ಫಲಾನುಭವಿಗಳು ಅನಕ್ಷರಸ್ಥರಾಗಿದ್ದಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸೌಲಭ್ಯ ಒದಗಿಸಲು ಸಹಕರಿಸಬೇಕು. ಲೀಡ್ ಬ್ಯಾಂಕ್ನ ಸಭೆಗೆ ಸಂಬAಧಿತ ಎಲ್ಲ ಬ್ಯಾಂಕ್ನ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಬ್ಯಾಂಕ್ನವರು ಸಾಲ-ಠೇವಣಿ ಅನುಪಾತವನ್ನು ಹೆಚ್ಚಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಆರ್ಥಿಕ ಗುರಿ ಶೇ.100ರಷ್ಟು ಸಾಧಿಸಿದ ಬ್ಯಾಂಕ್ಗಳಿಗೆ ಪ್ರಶಂಸನಾ ಪತ್ರವನ್ನು ನೀಡಲಾಗುವುದು ಎಂದು ಸಂಸದರು ತಿಳಿಸಿದರು.
ವಿವಿಧ ಯೋಜನೆಗಳ ಆರ್ಥಿಕ ಸೌಲಭ್ಯಕ್ಕಾಗಿ ಸ್ವೀಕರಿಸಲಾದ ಅರ್ಜಿಗಳನ್ನು ಆದಷ್ಟು ಶೀಘ್ರ ವಿಲೇವಾರಿಗೆ ಕ್ರಮ ವಹಿಸಬೇಕು. ಪಿಎಂ ಸ್ವನಿಧಿ ಯೋಜನೆಯ ಯಶಸ್ವಿಗೆ ಒತ್ತು ನೀಡಬೇಕೆಂದು ತಿಳಿಸಿದ ಸಂಸದರು, ಬ್ಯಾಂಕ್ಗಳ ವಿಶ್ವಾಸಾರ್ಹತೆ ಹೆಚ್ಚಾಗುವ ರೀತಿಯಲ್ಲಿ ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ನಡೆದುಕೊಳ್ಳಬೇಕು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸರಕಾರ ಜಾರಿಗೆ ತಂದಿರುವ ನಿಯಮಾವಳಿಗಳನ್ನು ತಪ್ಪದೇ ಪಾಲಿಸಬೇಕು ಹಾಗೂ ಸಾಲ ವಸೂಲಾತಿ ಮಾಡುವಾಗ ಮಾನವೀಯತೆಯಿಂದ ವರ್ತಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ.ವಿ ಮಾತನಾಡಿ, ಜಿಲ್ಲೆಯಲ್ಲಿ ಲೀಡ್ ಬ್ಯಾಂಕ್ನ 182 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಡಿಸೆಂಬರ್ 2024ರವರೆಗೆ ಜಿಲ್ಲೆಯ ಸಾಲ ಠೇವಣಿ ಅನುಪಾತ ಶೇ.95.94 ಆಗಿರುತ್ತದೆ. ಎಲ್ಲ ಬ್ಯಾಂಕಿನ ನಿಯಂತ್ರಣಾಧಿಕಾರಿಗಳು ಸಾಲ ಠೇವಣಿ ಅನುಪಾತವನ್ನು ಸುಧಾರಿಸಲು ಶಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪೊಟೆನ್ಷಿಯಲ್ ಲಿಂಕ್ಡ್ ಕ್ರೆಡಿಟ್ ಪ್ಲಾನ್ ಕೈಪಿಡಿ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಎಪಿವೈ, (ಅಟಲ್ ಪೆನ್ಷನ್ ಯೋಜನೆ), ಪಿಎಂಎಸ್ಬಿವೈ-ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪಿಎಂಜೆಜೆಬಿವೈ, ಎಸ್ಎಸ್ಎ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶಿಲನೆ ನಡೆಸಲಾಯಿತು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ನಬಾರ್ಡ್ನ ಎಜಿಎಂ ಮಹಾದೇವ ಕೀರ್ತಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್, ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಮಲ್ಲೂರ ಬಸವರಾಜ, ವಿವಿಧ ಬ್ಯಾಂಕ್ನ ಅಧಿಕಾರಿಗಳು ಇದ್ದರು.
ಜಿಲ್ಲೆಯಲ್ಲಿ ಪ್ರಸಕ್ತ ವಾರ್ಷಿಕ ಸಾಲ ಯೋಜನೆಯಡಿ 31-12-2024ರವರೆಗೆ ಕೃಷಿ ಸೇರಿದಂತೆ ಆದ್ಯತಾ ವಲಯಕ್ಕೆ 355753.07 ಲಕ್ಷ ರೂ. ಸಾಲ ನೀಡಿಕೆಯಾಗಿದೆ. ತಾಲೂಕಾವಾರು ಗದಗ –139477.48, ಗಜೇಂದ್ರಗಡ-19644.04, ಲಕ್ಷ್ಮೇಶ್ವರ–18247.06, ಮುಂಡರಗಿ-35779.63, ನರಗುಂದ-41351.17, ರೋಣ-68664.84, ಶಿರಹಟ್ಟಿ-32588.85 ಲಕ್ಷ ರೂ ಸಾಲ ನೀಡಿಕೆಯಾಗಿದೆ ಎಂದು ಸಭೆಗೆ ಅಧಿಕಾರಿಗಳು ವಿವರಿಸಿದರು.



