ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಶಿಕ್ಷಣ ಸಚಿವನಾಗಿ ಎರಡುವರೆ ವರ್ಷದಲ್ಲಿ ಶಿಕ್ಷಕರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರಗಳನ್ನ ಕೈಗೊಂಡಿದ್ದೇನೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ಮುಂಡರಗಿಯ ಜಗದ್ಗುರು ಅನ್ನದಾನೇಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಪದಾಧಿಕಾರಿಗಳು ಶೈಕ್ಷಣಿಕ ಸಮಸ್ಯೆಗಳ ಕುರಿತು ಬೆಳಗಾವಿಯ ಸುವರ್ಣಸೌಧದಲ್ಲಿ ಸಲ್ಲಿಸಿದ ಮನವಿ ಹಾಗೂ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಕುರಿತು ನೀಡಿದ ಆಮಂತ್ರಣ ಪತ್ರಿಕೆ ಸ್ವೀಕರಿಸಿ ಮಾತನಾಡಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದೇವೆ. ಒಂದು ಸಮಸ್ಯೆಗೆ ಪರಿಹಾರ ಹುಡುಕುವುದರೊಳಗಾಗಿ ಮತ್ತೆರಡು ಸಮಸ್ಯೆಗಳು ಹುಟ್ಟಿಕೊಳ್ಳುವುದು ಶಿಕ್ಷಣ ಕ್ಷೇತ್ರದಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ದಿನದ 24 ತಾಸು ಕೆಲಸ ಮಾಡಿದರೂ ಕಡಿಮೆಯೇ. ಖಾಸಗಿ ಶಿಕ್ಷಣ ಸಂಸ್ಥೆಗಳ ನೋಂದಣಿ ನವೀಕರಣ, ಖಾಲಿ ಹುದ್ದೆಗಳ ನೇಮಕ, ಹಳೆ ಪಿಂಚಣಿ ಪದ್ಧತಿಯನ್ನು ಮುಂದುವರಿಸುವುದು, ಅನುದಾನ ರಹಿತ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳು ನಮ್ಮ ಮುಂದಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಈಗಾಗಲೇ ಸಾಕಷ್ಟು ಸಿದ್ಧತೆಗಳನ್ನ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ಹಾಗೂ ಶಿರಹಟ್ಟಿ ಮತಕ್ಷೇತ್ರದ ಶಾಸಕರಾದ ಡಾ. ಚಂದ್ರು ಲಮಾಣಿ, ಡಾ. ಬಸವರಾಜ್ ಧಾರವಾಡ, ಅನ್ನದಾನೇಶ್ವರ ವಿದ್ಯಾ ಸಮಿತಿಯ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ, ಎಂ.ಎಸ್. ಡಂಬಳ, ಬಾಲಕಿಯರ ಪ್ರೌಢಶಾಲೆಯ ಚೇರಮನ್ ಎಂ.ಎಸ್. ಶಿವಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಎಂ. ಅಗಡಿ, ಉತ್ತರ ಕರ್ನಾಟಕ ಪತ್ರಿಕೆಯ ಸಂಪಾದಕ ಅವಿನಾಶ್ ಸಾಲ್ಮನಿ ಮುಂತಾದವರು ಉಪಸ್ಥಿತರಿದ್ದರು.
ಸರಕಾರಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಖಾಸಗಿ ಶಾಲೆಗಳ ಶಿಕ್ಷಕರಿಗೆ ಹಾಗೂ ಮಕ್ಕಳಿಗೂ ಸಿಗುವಂತೆ ನೋಡಿಕೊಳ್ಳುವುದು ನನ್ನ ಪ್ರಮುಖ ಜವಾಬ್ದಾರಿಯಾಗಿದೆ. ಮುಂಡರಗಿಯ ಜಗದ್ಗುರು ಅನ್ನದಾನೇಶ್ವರ ವಿದ್ಯಾ ಸಮಿತಿ ತನ್ನ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಸಂಗತಿ ಖುಷಿ ತಂದಿದೆ. ಒಂದು ಜವಾಬ್ದಾರಿಯುತ ಸರಕಾರ ಮಾಡುವ ಕೆಲಸವನ್ನು ಮಠ-ಮಾನ್ಯಗಳು ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಿದ್ದು ಹೆಮ್ಮೆಯ ಸಂಗತಿ. ಹೀಗಾಗಿ ಶ್ರೀಮಠಕ್ಕೆ ಸರಕಾರ ಸದಾಕಾಲ ಚಿರಋಣಿಯಾಗಿದೆ. ಶ್ರೀಗಳ ನಿರಂತರ ಪರಿಶ್ರಮದಿಂದಾಗಿ ಲಕ್ಷಾಂತರ ಮಕ್ಕಳಿಗೆ ಅನ್ನದಾನ, ಅಕ್ಷರ ದಾಸೋಹದ ಮೂಲಕ ಅಕ್ಷರದ ಹಸಿವನ್ನು ಇಂಗಿಸಿದ ವಿದ್ಯಾ ಸಮಿತಿಯ ಶತಮಾನೋತ್ಸವದ ಸಂಭ್ರಮದ ಕಾರ್ಯಕ್ರಮದಲ್ಲಿ ಅತ್ಯಂತ ಖುಷಿಯಿಂದ ಭಾಗವಹಿಸುವುದಾಗಿ ಸಚಿವರು ಹೇಳಿದರು.



